
ಬೆಂಗಳೂರು : ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಾರಿಗೆ ಇಲಾಖೆಯು ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಂಬಂಧ ಸಿದ್ಧತೆ ಆರಂಭಿಸಿದೆ. ಎಲ್ಲ ಸಾರಿಗೆ ನಿಗಮಗಳಿಂದ ಶೇ.20 ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ದರ ಏರಿಕೆ ಅನಿವಾರ್ಯ ಎಂಬುದನ್ನು ಬಲವಾಗಿ ಪ್ರತಿಪಾದಿಸಿವೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಎಲ್ಲಾ ಸಾರಿಗೆ ನಿಗಮಗಳ ವತಿಯಿಂದ ಶೇ.20 ರಷ್ಟು ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದರು. ಡೀಸೆಲ್ ಮೇಲಿನ ತೆರಿಗೆ ಸತತ ಹೆಚ್ಚಳದಿಂದಾಗಿ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿತೂಗಿಸಲು ಒಂದು ಸಾವಿರ ಕೋಟಿ ರು. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸುದೀರ್ಘ ಅವಧಿಯಿಂದ ಸಾರಿಗೆ ನಿಗಮಗಳು ತೈಲ ಬೆಲೆ ಏರಿಕೆಯ ನಷ್ಟ ಹೊರುತ್ತಿದ್ದು, ಇದನ್ನು ಸರಿದೂಗಿಸಲು ಅನುದಾನ ನೀಡುವುದರ ಜೊತೆಗೆ ಪ್ರಯಾಣ ದರ ಹೆಚ್ಚಳವನ್ನೂ ಮಾಡಿದರೆ ಮಾತ್ರ ನಿಗಮಗಳು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನಷ್ಟದ ಹೊರೆಯಿಂದ ತತ್ತರಿಸಿ ಸಾರಿಗೆ ನಿಗಮಗಳು ಉತ್ತಮ ಗುಣಮಟ್ಟದ ಸೇವೆ ನೀಡಲು ಕಷ್ಟವಾಗುತ್ತದೆ ಎಂಬ ಅಳಲನ್ನು ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಆದರೆ, ಬಜೆಟ್ನಲ್ಲಿ ಹಲವು ತೆರಿಗೆಗಳನ್ನು ಹೆಚ್ಚಳಗೊಳಿಸಿ ಪ್ರತಿಪಕ್ಷ ಹಾಗೂ ಸಾರ್ವಜನಿಕರಿಂದ ಟೀಕೆ ಎದುರಿಸುತ್ತಿರುವ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು ಬಸ್ ಪ್ರಯಾಣ ದರ ಏರಿಕೆಗೆ ಒಪ್ಪಿಗೆ ನೀಡುವ ಅನುಮಾನವಿದೆ. ಸಾರಿಗೆ ನಿಗಮಗಳು ಶೇ.20 ರಷ್ಟು ಏರಿಕೆ ಕೇಳಿದ್ದರೂ ಮಾತುಕತೆ ವೇಳೆ ಆ ಪ್ರಮಾಣ ಕಡಮೆಗೊಳಿಸುವ ಸಾಧ್ಯತೆಯಿದೆ. ಇನ್ನಷ್ಟು ಕಾಲ ಪ್ರಯಾಣ ದರ ಏರಿಕೆಯನ್ನು ತಳ್ಳಿ ಹಾಕುವ ಸಂಭವವೇ ಹೆಚ್ಚು ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ