Covid Crisis: ಕೋವಿಡ್‌ ಗುಣಮುಖರಿಗೆ ಕಾಡ್ತಿದೆ ಮತ್ತೊಂದು ರೋಗ..!

Published : Mar 25, 2022, 05:23 AM IST
Covid Crisis: ಕೋವಿಡ್‌ ಗುಣಮುಖರಿಗೆ ಕಾಡ್ತಿದೆ ಮತ್ತೊಂದು ರೋಗ..!

ಸಾರಾಂಶ

*  ಹೆಚ್ಚಿನ ತಪಾಸಣೆ ನಡೆಸಿ ವರದಿ ಸಲ್ಲಿಸಲು ಸೂಚನೆ *  ಕೊರೋನಾ ಬಂದ ಬಳಿಕವೇ ಕ್ಷಯ ರೋಗವು ಬಂದಿರುವುದು ಕಂಡುಬಂದಿದೆ *  ಕೊರೋನಾ ಸಂದರ್ಭದಲ್ಲಿ 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಿದ ನಿಮ್ಹಾಸ್ಸ್‌ 

ಬೆಂಗಳೂರು(ಮಾ.25): ಕೊರೋನಾ(Coronavirus) ಗುಣಮುಖರಾದವರಲ್ಲಿ ಕ್ಷಯ ರೋಗ (TB) ಪತ್ತೆಯಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ತಪಾಸಣೆ ನಡೆಸಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌(Dr K Sudhakar) ತಿಳಿಸಿದರು.

ಕ್ಷಯರೋಗ ಸಂಶೋಧನಾ ಕೇಂದ್ರದಲ್ಲಿ ಗುರುವಾರ ನಡೆದ ವಿಶ್ವ ಕ್ಷಯ ರೋಗ ದಿನ(World Tuberculosis Day) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ(Karnataka) ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕೊರೋನಾದಿಂದ ಗುಣಮುಖರಾದವರಿಗೆ ಕ್ಷಯ ಪರೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈವರೆಗೂ ಕೊರೋನಾ ಗುಣಮುಖರಾದವರ ಪೈಕಿ 25 ಲಕ್ಷ ಜನರನ್ನು ತಪಾಸಣೆಗೆ ಒಳಪಡಿಸಿದ್ದರು. 144 ಜನರಿಗೆ ಕ್ಷಯ ರೋಗ ದೃಢಪಟ್ಟಿದೆ. ರೋಗಿಯ ಹಿನ್ನೆಲೆ ಗಮನಿಸಿದಾದ ಕೊರೋನಾ ಬಂದ ಬಳಿಕವೇ ಕ್ಷಯ ರೋಗವು ಬಂದಿರುವುದು ಕಂಡುಬಂದಿದೆ. ಹೀಗಾಗಿ, ಗುಣಮುಖರಾದವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಿ, ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದರು.

Covid Crisis: ಕೊರೋನಾ ಸೋಂಕಿಗೆ 12 ವರ್ಷದ ಬಾಲಕಿ ಬಲಿ

ಕೊರೋನಾದಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗವಾಗಿದ್ದು(Infectious Disease), ಕೊರೋನಾ ವೈರಸ್‌ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾದಿಂದ ಬರುತ್ತದೆ. ಒಬ್ಬ ಕ್ಷಯ ರೋಗಿಯಿಂದ ಕನಿಷ್ಠ 10 ಜನರಿಗೆ ರೋಗ ಹರಡಬಹುದು. ಗ್ರಾಮೀಣ ಭಾಗಗಳಲ್ಲಿ(Rural Area) ಜನರು ಕಾಯಿಲೆ ಇದ್ದರೂ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸುವುದಿಲ್ಲ. ಹೀಗೆ ಒಬ್ಬರ ತಪ್ಪಿನಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ. ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.

ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ(Treatment) ನಡೆಸಿದರೆ ತ್ವರಿತ ಗುಣಮುಖವಾಗುತ್ತದೆ. ಸದ್ಯ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ಪರೀಕ್ಷೆ ಮಾಡುವ ಸೌಲಭ್ಯವಿದೆ. ಜನರು ಇಂತಹ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಸಲಹೆ ನೀಡಿದರು.

2030 ರ ವೇಳೆಗೆ ಜಗತ್ತನ್ನು ಕ್ಷಯರೋಗದಿಂದ ಮುಕ್ತ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 2025 ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡಬೇಕು ಎಂಬ ಗುರಿ ಪ್ರಕಟಿಸಿದೆ. ಇದು ಕೇವಲ ವೈದ್ಯರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ. ಇದಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯವಿದೆ. ಆದ್ದರಿಂದ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ 5 ಕೋಟಿ ರು ಖರ್ಚು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

14 ಜಿಲ್ಲೆಗಳಲ್ಲಿ ಕ್ಷಯ ನಿಯಂತ್ರಣ

ರಾಜ್ಯದ 14 ಜಿಲ್ಲೆಗಳಲ್ಲಿ ಕ್ಷಯ ನಿಯಂತ್ರಣದಲ್ಲಿ ಗಮನಾರ್ಹ ಸಾಧನೆಯಾಗಿದೆ. ಐದು ಜಿಲ್ಲೆಗಳಿಗೆ ಬೆಳ್ಳಿ ಪದಕ ಬಂದಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಕ್ಷಯ ಪ್ರಕರಣಗಳ ಪ್ರಮಾಣ ಶೇ.40 ರಷ್ಟು ಇಳಿಕೆಯಾಗಿದೆ. ಇದೇ ರೀತಿ 9 ಜಿಲ್ಲೆಗಳಿಗೆ ಕಂಚಿನ ಪದಕ ಲಭಿಸಿದೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚು ಕ್ರಮ ಕೈಗೊಂಡು ಚಿನ್ನದ ಪದಕ ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.

ಕೋವಿಡ್‌ ಸುರಕ್ಷತೆ ಹೊರತಾಗಿ ಎಲ್ಲ ನಿರ್ಬಂಧ ಮಾ. 31ರಿಂದ ರದ್ದು

ಟೆಲಿ ಆಪ್ತ ಸಮಾಲೋಚನೆ

ಕೊರೋನಾ ಸಂದರ್ಭದಲ್ಲಿ ನಿಮ್ಹಾಸ್ಸ್‌ ಸಂಸ್ಥೆಯು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ(Counseling) ನಡೆಸಿದೆ. ಇದೇ ರೀತಿ, ಕ್ಷಯದ ಚಿಕಿತ್ಸೆಯ ಜೊತೆಗೆ ರೋಗಿಗೆ ಹಾಗೂ ಕುಟುಂಬದವರಿಗೆ ಆಪ್ತ ಸಮಾಲೋಚನೆ ಮಾಡಲಾಗುವುದು. ಕ್ಷಯ ಕಂಡುಬಂದ ಬಳಿಕ ಆ ಸೋಂಕು ರೋಗಿಯ ಮನೆಯವರಿಗೆ ಹರಡದಂತೆ ಎಚ್ಚರ ವಹಿಸಲು ಮಾರ್ಗದರ್ಶನ ನೀಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದರು.

ವಿಶ್ವ ಕ್ಷಯ ರೋಗ ದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಚಾಲನೆ ನೀಡಿದರು. ನಿಮ್ಹಾನ್‌ ನಿರ್ದೇಶಕಿ ಪ್ರತಿಮಾ ಮೂರ್ತಿ, ಆರೋಗ್ಯ ಇಲಾಖೆ ನಿರ್ದೇಶಕಿ ಡಾ.ಇಂದುಮತಿ, ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ.ಸಿ.ನಾಗರಾಜ್‌, ಸಂಜಯ್‌ ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ಚಂದ್ರಶೇಖರ್‌ ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ