
ತುಮಕೂರು (ಡಿ.11): ಸರ್ಕಾರದ ಸಹಾಯಧನ ಮಂಜೂರು ಮಾಡಲು ಉದ್ಯಮಿಯೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಇಂದು ಬಲೆಗೆ ಬೀಳಿಸಿದ್ದಾರೆ. ಜಂಟಿ ನಿರ್ದೇಶಕ ಲಿಂಗರಾಜು ಮತ್ತು ಸಹಾಯಕ ಪ್ರಸಾದ್ ಎನ್ಎಸ್ ಬಂಧಿತ ಆರೋಪಿಗಳಾಗಿದ್ದು, ಇವರು ತುಮಕೂರಿನ ಸದಾಶಿವನಗರ ನಿವಾಸಿ ಹಾಗೂ ಮೆಸರ್ಸ್ ಶಿವಲಿಂಗ ಇಂಡಸ್ಟ್ರಿಸ್ ಮಾಲೀಕ ಉದ್ಯಮಿ ಚನ್ನಬಸವೇಶ್ವರ ಎಂ.ಎಸ್. ಅವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಉದ್ಯಮಿ ಚನ್ನಬಸವೇಶ್ವರ ಅವರು ವಸಂತನರಸಾಪುರದ ಎರಡನೇ ಹಂತದಲ್ಲಿ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಕಾ ಕಾರ್ಖಾನೆಯನ್ನು ಕಳೆದ ಒಂದು ವರ್ಷದ ಹಿಂದೆ ಪ್ರಾರಂಭಿಸಿದ್ದರು. ಇವರು ತಮ್ಮ ಉದ್ದಿಮೆಗೆ ಸಂಬಂಧಿಸಿದಂತೆ ಸರ್ಕಾರದ ರೂ. 18.75 ಲಕ್ಷ ಸಹಾಯಧನ ಮಂಜೂರಾತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಹಾಯಧನವನ್ನು ಮಂಜೂರು ಮಾಡಲು ಜಂಟಿ ನಿರ್ದೇಶಕ ಲಿಂಗರಾಜು ಅವರು ರೂ. 1.25 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಲಂಚ ನೀಡಲು ಇಷ್ಟವಿಲ್ಲದ ಚನ್ನಬಸವೇಶ್ವರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ಮಧ್ಯಾಹ್ನ ಜಿಲ್ಲಾ ಕೈಗಾರಿಕಾ ಕೇಂದ್ರದ ಮುಂದೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಉದ್ಯಮಿಯಿಂದ ರೂ. 1.15 ಲಕ್ಷ ಹಣವನ್ನು ಲಂಚವಾಗಿ ಸ್ವೀಕರಿಸುತ್ತಿದ್ದ ಸಹಾಯಕ ಪ್ರಸಾದರನ್ನ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಡಿವೈಎಸ್ಪಿ ಡಾ ಸಂತೋಷ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರು ಪ್ರಸ್ತುತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ