
ಬೆಂಗಳೂರು (ಜ.30): ತುಂಗಾಭದ್ರಾ ಡ್ಯಾಂ ಕ್ರಸ್ಟ್ ಗೇಟ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಘೋಷಿಸಿದ್ದ 10 ಕೋಟಿ ರೂಪಾಯಿ ಅನುದಾನವನ್ನು ವಾಪಸ್ ಪಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಜನಾರ್ದನ ರೆಡ್ಡಿ, ಸರ್ಕಾರದ ಈ ನಿರ್ಧಾರ ತುಂಗಾಭದ್ರಾ ಭಾಗದ ರೈತರಿಗೆ ಎಸಗಿದ ದ್ರೋಹ ಎಂದು ಆಕ್ರೋಶ ಹೊರಹಾಕಿದ್ದಾರೆ. ಅನುದಾನ ವಾಪಸ್ ಪಡೆದಿರುವುದರಿಂದ ಹೊಸ ಗೇಟ್ ನಿರ್ಮಾಣ ಕಾರ್ಯ ಕುಂಠಿತಗೊಳ್ಳುವ ಭೀತಿ ಎದುರಾಗಿದೆ.
'ಸದನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾವೇ ಹೊಸ ಗೇಟ್ ಅಳವಡಿಸುತ್ತೇವೆ ಎಂದು ರೈತರಿಗೆ ಭರವಸೆ ನೀಡಿದ್ದರು. ಎರಡನೇ ಬೆಳೆಗೆ ನೀರು ಸಿಗುವುದಿಲ್ಲ ಎಂದು ಆತಂಕ ಪಡಬೇಡಿ ಎಂದು ರೈತರನ್ನು ಸಮಾಧಾನಪಡಿಸಿದ್ದರು. ಆದರೆ ನಾನು ಅಣೆಕಟ್ಟಿಗೆ ಭೇಟಿ ನೀಡಿದಾಗ ಗೇಟ್ ನಂ. 18ರ ಕೆಲಸ ನಡೆದಿತ್ತು. ಆದರೆ ಈಗ ಅನುದಾನ ವಾಪಸ್ ಪಡೆದಿರುವುದು ನೋಡಿದರೆ ಸರ್ಕಾರದ ಬದ್ಧತೆ ಎಲ್ಲಿಗೆ ಹೋಗಿದೆ ಎಂಬ ಪ್ರಶ್ನೆ ಮೂಡುತ್ತಿದೆ' ಎಂದು ರೆಡ್ಡಿ ಪ್ರಶ್ನಿಸಿದ್ದಾರೆ.
ಅಣೆಕಟ್ಟಿನ ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿರುವ ಖ್ಯಾತ ಇಂಜಿನಿಯರ್ ಕನ್ಹಯ್ಯ ನಾಯ್ಡು ಅವರೇ ಹಣದ ಕೊರತೆಯ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿಲ್ಲ, ಕೊಟ್ಟಿದ್ದ ಹಣವನ್ನೂ ವಾಪಸ್ ಪಡೆಯಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ತಾಂತ್ರಿಕ ತಂಡಕ್ಕೆ ಹಣಕಾಸಿನ ಬೆಂಬಲ ನೀಡದಿದ್ದರೆ ಕಾಮಗಾರಿ ಪೂರ್ಣಗೊಳ್ಳುವುದು ಕಷ್ಟ ಎಂಬ ಆತಂಕ ವ್ಯಕ್ತವಾಗಿದೆ.
ತುಂಗಾಭದ್ರಾ ನೀರನ್ನೇ ನಂಬಿಕೊಂಡಿರುವ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ರೈತರು ಈಗ ಸರ್ಕಾರ ಹತ್ತು ಕೋಟಿ ಅನುದಾನ ವಾಪಸ್ ಪಡೆದಿರುವ ಸರ್ಕಾರದ ವಿರುದ್ಧ ರೊಚ್ಚಿಗೆಳುವ ಸಾಧ್ಯತೆಯಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಹಣ ಬಿಡುಗಡೆ ಮಾಡದಿದ್ದರೆ ನಾಲ್ಕು ಜಿಲ್ಲೆಗಳ ರೈತರು ಬೀದಿಗೆ ಬಂದು ಹೋರಾಟ ಮಾಡುವುದು ಖಚಿತ. ಇದು ರೈತರ ಬದುಕಿನ ಪ್ರಶ್ನೆಯಾಗಿದ್ದು, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಜನಾರ್ದನ ರೆಡ್ಡಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ