ಬೆಂಗಳೂರು: ಅನಧಿಕೃತ ಫ್ಲೆಕ್ಸ್‌: ಅಧಿಕಾರಿಗಳ ವಿರುದ್ಧ ಕೇಸ್‌ ಹಾಕಿ: ಹೈಕೋರ್ಟ್

By Kannadaprabha NewsFirst Published Feb 10, 2023, 4:52 AM IST
Highlights

ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಡಿಎ ಮತ್ತು ಬಿಬಿಎಂಪಿಗೆಹೈಕೋರ್ಟ್ ಆದೇಶಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಸಿರುವುದನ್ನು ಆಕ್ಷೇಪಿಸಿ ಸಾಮಾಜಿಕ ಕಾರ್ಯಕರ್ತ ಮಾಯಿಗೆಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಬೆಂಗಳೂರು (ಫೆ.10) : ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಡಿಎ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಸಿರುವುದನ್ನು ಆಕ್ಷೇಪಿಸಿ ಸಾಮಾಜಿಕ ಕಾರ್ಯಕರ್ತ ಮಾಯಿಗೆಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ನಗರದಲ್ಲಿ ಅನಧಿಕೃತ ಹೋರ್ಡಿಂಗ್‌್ಸ, ಫ್ಲೆಕ್ಸ್‌ ಹಾಗೂ ಪೋಸ್ಟರ್‌ ಅಳವಡಿಕೆಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾ.6ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಪ್ರತಿವಾದಿಗಳಾದ ಸರ್ಕಾರ, ಬಿಬಿಎಂಪಿ ಮತ್ತು ಬಿಡಿಎಗೆ ನ್ಯಾಯಪೀಠ ಇದೇ ವೇಳೆ ತಾಕೀತು ಮಾಡಿದೆ.

Bengaluru: ದಾಸರಹಳ್ಳಿ ವ್ಯಾಪ್ತಿ ಫ್ಲೆಕ್ಸ್‌, ಬ್ಯಾನರ್‌ ಹಾವಳಿ; ಹೆಚ್ಚುತ್ತಿವೆ ಅಪಘಾತ!

ಜಾಹೀರಾತುಗಳ ಅಕ್ರಮ ಅಳವಡಿಕೆ ತಡೆಗಟ್ಟಲು ಕಾಲ ಕಾಲಕ್ಕೆ ಪರಿಶೀಲಿಸಿದೇ ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳು ಯಾರು? ಅಕ್ರಮ ಜಾಹೀರಾತು ಅಳವಡಿಕೆಯನ್ನು ತಡೆಗಟ್ಟುವ ಸಂಬಂಧ ಹೈಕೋರ್ಚ್‌ ಈ ಹಿಂದೆ ನೀಡಿದ್ದ ನಿರ್ದೇಶನಗಳ ಸಂಬಂಧ ಪ್ರತಿವಾದಿ ಪ್ರಾಧಿಕಾರಗಳ ಹಿರಿಯ ಅಧಿಕಾರಿಗಳು ತಮ್ಮ ಅಧೀನದ ಅಧಿಕಾರಿಗಳಿಗೆ ಯಾವುದಾದರೂ ಸುತ್ತೋಲೆ ಹೊರಡಿಸಿದ್ದಾರೆಯೇ? ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಕ್ರಮ ಕೈಗೊಂಡಿದ್ದರೆ ಆ ಕುರಿತು ಮಾಹಿತಿ ಒದಗಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಒಂದೊಮ್ಮೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಬಿಡಿಎ ಹಾಗೂ ಬಿಬಿಎಂಪಿಯ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕ್ರಮ ಜರುಗಿಸಬೇಕು. ಈ ಪ್ರಕ್ರಿಯೆಯನ್ನು ಮೂರು ವಾರದಲ್ಲಿ ಮಾಡಬೇಕು. ಒಂದು ವೇಳೆ ಹಿರಿಯ ಅಧಿಕಾರಿಗಳಿಗೆ ಅವರ ಅಧೀನ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದು ಕಂಡುಬಂದರೆ ಅಂತಹ ವಿರುದ್ಧ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಪ್ರಕರಣದ ಅಮಿಕಸ್‌ ಕ್ಯೂರಿ ಆಗಿರುವ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಅನಧಿಕೃತ ಜಾಹೀರಾತು ಪ್ರದರ್ಶನ ತಡೆಯಲು ಮತ್ತು ಅಳವಡಿಕೆದಾರರ ವಿರುದ್ಧ ಕ್ರಮ ಜರುಗಿಸಲು ಹೈಕೋರ್ಚ್‌ ಈ ಹಿಂದೆ ಹಲವು ಬಾರಿ ನಿರ್ದೇಶನ ನೀಡಿದೆ. ಆದರೆ, ಪ್ರತಿವಾದಿ ಪ್ರಾಧಿಕಾರಗಳು ನ್ಯಾಯಾಲಯ ನಿರ್ದೇಶನಗಳನ್ನು ಪಾಲಿಸಲು ವಿಫಲವಾಗಿವೆ ಎಂದು ತಿಳಿಸಿದರು.

ಸುತ್ತೋಲೆ ಹೊರಡಿಸಿದರೂ ಕ್ರಮ ಕೈಗೊಂಡಿಲ್ಲ: ವಕೀಲ

ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌, ನಗರದ ವಿವಿಧೆಡೆ ಅಳವಡಿಸಿರುವ ಹಲವು ಜಾಹೀರಾತುಗಳ ಫೋಟೋ ಮತ್ತು ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಶಿವಮೊಗ್ಗ ಗ್ರಾಮಾಂತರದಲ್ಲಿ ಚುನಾವಣಾ ಕಾವು: ರಾರಾ​ಜಿ​ಸು​ತ್ತಿವೆ ಆಕಾಂಕ್ಷಿಗಳ ಫ್ಲೆಕ್ಸ್‌ಗಳು

ಜತೆಗೆ ಸ್ಥಳೀಯ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಜಾಹಿರಾತು ಅಳವಡಿಸಿದವರ ವಿರುದ್ಧ ಕ್ರಿಮಿನಲ್‌ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸುವಂತೆ ನಿರ್ದೇಶಿಸಿ ಮೂರು ವರ್ಷಗಳ ಹಿಂದೆಯೇ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಆದರೂ ನಗರದಲ್ಲಿ ಅನಧಿಕೃತ ಜಾಹೀರಾತುಗಳ ಹಾವಳಿ ಹೆಚ್ಚಾಗಿದೆ. ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ತಿಳಿಸಿದರು.

click me!