
ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಈಗಾಗಲೇ ಜಟಾಪಟಿ ನಡೆಯುತ್ತಿರುವ ನಡುವೆಯೇ, ಇದೀಗ ಹೆಬ್ಬಾಳ–ಸರ್ಜಾಪುರ ಮೆಟ್ರೋ (ರೆಡ್ ಲೈನ್) ಯೋಜನೆಗೆ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದೆ. ಇದರ ಜೊತೆಗೆ ಡಬ್ಬಲ್ ಡೆಕ್ಕರ್ ಫ್ಲೈಓವರ್ ಮತ್ತು ಮೆಟ್ರೋ ಯೋಜನೆಗೆ ಕೂಡ ಸರ್ಕಾರ ನೋ ಎಂದಿದೆ.
ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿಯಾಗಿ ಘೋಷಿಸಿದ್ದ ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ. ಈ ಬಗ್ಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರು ಸಾರ್ವಜನಿಕವಾಗಿ ಮಾಹಿತಿ ನೀಡಿದ್ದಾರೆ.
ಹೆಬ್ಬಾಳ–ಸರ್ಜಾಪುರ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು + ಡಬಲ್ ಡೆಕ್ಕರ್ ಫ್ಲೈಓವರ್ ಸಂಯೋಜಿತ ಯೋಜನೆಯಾಗಿ ರೂಪಿಸಲು ರಾಜ್ಯ ಸರ್ಕಾರ ಯೋಜಿಸಿತ್ತು. ಆದರೆ ಡಬಲ್ ಡೆಕ್ಕರ್ ವ್ಯವಸ್ಥೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ.
ಈ ಕಾರಣದಿಂದಾಗಿ, ರೆಡ್ ಲೈನ್ ಮೆಟ್ರೋ ಕಾರಿಡಾರ್ನಲ್ಲಿ ಸಂಪೂರ್ಣವಾಗಿ ಡಬಲ್ ಡೆಕ್ಕರ್ ವ್ಯವಸ್ಥೆ ಬೇಡ ಎಂದು ಕೇಂದ್ರ ಸ್ಪಷ್ಟವಾಗಿ ಸೂಚನೆ ನೀಡಿದೆ. ಆದರೆ ಕೆಲವು ಆಯ್ದ ಜಂಕ್ಷನ್ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಅವಕಾಶ ನೀಡಬಹುದು ಎಂಬ ನಿಲುವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.
ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ಗೆ ಸಂಬಂಧಿಸಿದಂತೆ ₹28,405 ಕೋಟಿ ವೆಚ್ಚದ ವಿವರವಾದ ಯೋಜನಾ ವರದಿ (ಡಿಪಿಆರ್) ಅನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿತ್ತು. ಆದರೆ ಯೋಜನಾ ವೆಚ್ಚ ಹೆಚ್ಚಾಗಿದೆ ಮತ್ತು ಡಬಲ್ ಡೆಕ್ಕರ್ ಸಂಯೋಜನೆಯಿಂದ ಯೋಜನೆಯ ಉದ್ದೇಶಕ್ಕೆ ಧಕ್ಕೆ ಉಂಟಾಗಬಹುದು ಎಂಬ ಕಾರಣದಿಂದಾಗಿ, ಈ ಹಿಂದೆಲೇ ಕೇಂದ್ರ ಸರ್ಕಾರ ಡಿಪಿಆರ್ ಅನ್ನು ಹಿಂದಿರುಗಿಸಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಸಲ್ಲಿಸಿರುವ ಡಿಪಿಆರ್ಗೂ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದ್ದು, ಯೋಜನೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಿ ಹೊಸ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದೆ.
ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಬೆಂಗಳೂರು ನಗರದ ಬಹುತೇಕ ಎಲ್ಲಾ ಹೊಸ ಮೆಟ್ರೋ ಮಾರ್ಗಗಳಲ್ಲೂ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ಹೊಂದಿತ್ತು. ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿತ್ತು.
ಆದರೆ ಕೇಂದ್ರ ಸರ್ಕಾರದ ಅಭಿಪ್ರಾಯದಂತೆ, ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಮಾಡಿದಲ್ಲಿ ಜನರು ರಸ್ತೆ ಸಾರಿಗೆಯತ್ತ ಹೆಚ್ಚು ತಿರುಗುವ ಸಾಧ್ಯತೆ ಇದೆ, ಇದರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿಯಬಹುದು. ಹೀಗಾಗಿ, ಮೆಟ್ರೋ ಯೋಜನೆಯ ಮೂಲ ಉದ್ದೇಶವೇ ಹಾನಿಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಎಚ್ಚರಿಸಿದೆ.
ರಾಜ್ಯ ಸರ್ಕಾರದ ಪ್ರಸ್ತಾವನೆಯಂತೆ:
ಹೆಬ್ಬಾಳ–ಸರ್ಜಾಪುರ ಮೆಟ್ರೋ ಮಾರ್ಗದ ಉದ್ದ: 37 ಕಿಲೋಮೀಟರ್
ಒಟ್ಟು ಮೆಟ್ರೋ ನಿಲ್ದಾಣಗಳು: 28
ಇದು ಬೆಂಗಳೂರು ಉತ್ತರ ಭಾಗವನ್ನು ದಕ್ಷಿಣ-ಪೂರ್ವ ಭಾಗದೊಂದಿಗೆ ನೇರವಾಗಿ ಸಂಪರ್ಕಿಸುವ ಪ್ರಮುಖ ಕಾರಿಡಾರ್ ಆಗಿದೆ. ಈ ಮಾರ್ಗ ಕಾರ್ಯರೂಪಕ್ಕೆ ಬಂದರೆ ಐಟಿ ಕಾರಿಡಾರ್, ಟೆಕ್ ಪಾರ್ಕ್ಗಳು ಮತ್ತು ವಸತಿ ಪ್ರದೇಶಗಳಿಗೆ ಭಾರೀ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇತ್ತು.
ಮೆಟ್ರೋ ದರ ಏರಿಕೆ, ಯೋಜನೆಗಳಿಗೆ ಅನುಮೋದನೆ, ಡಿಪಿಆರ್ ವೆಚ್ಚ ಮತ್ತು ಈಗ ಡಬಲ್ ಡೆಕ್ಕರ್ ವಿಚಾರ – ಬೆಂಗಳೂರು ಮೆಟ್ರೋ ಸಂಬಂಧಿತ ವಿಷಯಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಗಂಭೀರವಾಗುತ್ತಿದೆ.
ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಈ ತೀರ್ಮಾನದಿಂದ, ಯೋಜನೆಯ ಅನುಷ್ಠಾನ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿದ್ದುಪಡಿ ಪ್ರಸ್ತಾವನೆ ಸಲ್ಲಿಸಲಿದೆ ಎಂಬುದರ ಮೇಲೆ ಯೋಜನೆಯ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ