
ಬೆಂಗಳೂರು(ನ.17): ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು.
ಸಾಮಾಜಿಕ ಕಾರ್ಯಕರ್ತ ಮಹಾದೇವ ಸ್ವಾಮಿ ದಾಖಲಿಸಿದ ಪ್ರಕರಣದ ವಿಚಾರಣೆಯನ್ನು ಶನಿವಾರ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಮುಂದೆ ಎಚ್.ಡಿ.ಕುಮಾರಸ್ವಾಮಿ ಹಾಜರಾದರು. ಹಲವು ಬಾರಿ ಸೂಚನೆ ನೀಡಿದರೂ ಕುಮಾರಸ್ವಾಮಿ ಗೈರಾಗಿದ್ದಕ್ಕೆ ನ್ಯಾಯಾಲಯ ಗರಂ ಆಗಿ, ಮುಂದಿನ ಬಾರಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನ್ಯಾಯಾಲಯಕ್ಕೆ ಹಾಜರಾದರು.
ಕುಮಾರಸ್ವಾಮಿ ಹೇಳಿದಂತೆ ಎಸ್ಐಟಿ ರಚನೆ ಮಾಡಲಾಗಲ್ಲ: ಸಚಿವ ಕೆ.ಜೆ.ಜಾರ್ಜ್
ಈ ವೇಳೆ ಕುಮಾರಸ್ವಾಮಿ ಪರ ವಕೀಲರು, ತಮ್ಮ ಕಕ್ಷಿದಾರರ ವಿರುದ್ಧ ದೂರು ನೀಡಿರುವ ದೂರುದಾರರು ಸಲ್ಲಿಕೆ ಮಾಡಿರುವ ದಾಖಲೆಗಳು ಆರ್ಟಿಐ ಅಡಿ ಪಡೆದ ದಾಖಲೆಗಳಾಗಿವೆ. ದಾಖಲೆಗಳ ಬಗ್ಗೆ ತಕರಾರು ಇಲ್ಲ. ಆದರೆ, ಅವುಗಳನ್ನು ಪ್ರಮಾಣೀಕರಿಸಿಲ್ಲ. ಹೀಗಾಗಿ ಅವುಗಳನ್ನು ಪರಿಗಣಿಸಲುಸಾಧ್ಯವಿಲ್ಲ ಎಂದು ವಾದಿಸಿದರು.
ದೂರುದಾರರ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸಲ್ಲಿಕೆ ಮಾಡಿರುವ ದಾಖಲೆಗಳು ಸಾರ್ವಜನಿಕವಾಗಿವೆ. ಅವುಗ ಳನ್ನು ಹೈಕೋರ್ಟ್, ಸುಪ್ರೀಂಕೋರ್ಟ್ ಸಹ ಪರಿಗಣಿಸಿವೆ. ಹೀಗಾಗಿ ನ್ಯಾಯಾಲಯವು ಸಹ ದಾಖಲೆಗಳನ್ನು ಪರಿಗಣಿಸಬೇಕು ಎಂದರು. ಬಳಿಕ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಇದೇ ತಿಂಗಳು 23ಕ್ಕೆ ಮುಂದೂಡಿಕೆ ಮಾಡಿತು.
ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬನಶಂಕರಿ ಬಳಿಯ ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ ಆರೋಪ ಕೇಳಿಬಂದಿತ್ತು. ಈ ಕುರಿತ ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ