ಅಮೆರಿಕದ ಉತ್ತಮ ಸೇವಾ ವ್ಯವಸ್ಥೆ ಕರ್ನಾಟಕಕ್ಕೆ ಮಾದರಿ: ಬಸವರಾಜ ಹೊರಟ್ಟಿ

Published : Aug 08, 2025, 09:37 AM ISTUpdated : Aug 09, 2025, 05:45 AM IST
Basavaraj Horatti

ಸಾರಾಂಶ

ಶಾಸಕಾಂಗ ಶೃಂಗಸಭೆ-2025’ರಲ್ಲಿ ಗುರುವಾರ ಎರಡನೇ ದಿನ ನಡೆದ ‘ಅಮೆರಿಕ ಮತ್ತು ಭಾರತದಲ್ಲಿನ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ’ ಕುರಿತ ದುಂಡು ಮೇಜಿನ ಸಭೆಯಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು.

ಬೆಂಗಳೂರು (ಆ.08): ಅಮೆರಿಕದಲ್ಲಿರುವ ಉತ್ತಮ ಶಿಕ್ಷಣ, ವೈದ್ಯಕೀಯ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯನ್ನು ಸಮಗ್ರವಾಗಿ ಅಧ್ಯಯನ ನಡೆಸಿ ಕರ್ನಾಟಕದಲ್ಲೂ ಅಗತ್ಯಾನುಸಾರ ಮಾರ್ಪಾಡುಗಳೊಂದಿಗೆ ಸಂಯೋಜಿಸುವುದರಿಂದ ಎರಡೂ ಕ್ಷೇತ್ರದಲ್ಲಿ ನಮ್ಮ ರಾಜ್ಯ ಮತ್ತಷ್ಟು ಸುಧಾರಣೆ ತರಲು ಸಾಧ್ಯವಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದರು. ಅಮೆರಿಕದ ಬೋಸ್ಟನ್‌ ನಗರದಲ್ಲಿ ನಡೆಯುತ್ತಿರುವ ‘ಶಾಸಕಾಂಗ ಶೃಂಗಸಭೆ-2025’ರಲ್ಲಿ ಗುರುವಾರ ಎರಡನೇ ದಿನ ನಡೆದ ‘ಅಮೆರಿಕ ಮತ್ತು ಭಾರತದಲ್ಲಿನ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ’ ಕುರಿತ ದುಂಡು ಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಅನೇಕ ರಾಷ್ಟ್ರಗಳಿವೆ. ಒಂದೊಂದು ಕ್ಷೇತ್ರದಲ್ಲಿ ಒಂದೊಂದು ದೇಶ ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಮುಂಚೂಣಿಯಲ್ಲಿರುತ್ತದೆ. ಅಂತಹ ಅಂಶಗಳನ್ನು ಇತರೆ ದೇಶಗಳು ಅಧ್ಯಯನ ನಡೆಸಿ ತಮಗೂ ಸರಿ ಎನಿಸುವುದಾದರೆ ಅಳವಡಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಈ ನಿಟ್ಟಿನಲ್ಲಿ ಅಮೆರಿಕದ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಬಹಳ ಉತ್ತಮವಾಗಿದೆ. ಇಲ್ಲಿನ ಕೆಲವು ಅಂಶಗಳನ್ನು ಕರ್ನಾಟಕದ ಶಿಕ್ಷಣ, ಆರೋಗ್ಯ, ವೈದ್ಯಕೀಯ ಸೇವಾ ವ್ಯವಸ್ಥೆಯಲ್ಲಿ ಸಂಯೋಜಿಸಲು ಸಾಧ್ಯವಾಗುವುದಾದರೆ ಸರ್ಕಾರ ಪರಿಶೀಲಿಸಲಿ. ಇದರಿಂದ ಈ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು, ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು.

ಈ ಎರಡೂ ವಿಚಾರಗಳು ತಮಗೆ ಹೆಚ್ಚಿನ ಗಮನ ಸೆಳೆದಿದ್ದು, ಘಾನಾ ಮತ್ತು ಅಮೆರಿಕದ ಸೆನೆಟರ್‌ಗಳೊಂದಿಗೆ (ಪ್ರತಿನಿಧಿಗಳು) ಈ ವಿಚಾರದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಅಲ್ಲಿನ ಮೂಲಭೂತ ಸೇವೆಗಳ ಬಗ್ಗೆ ನಮ್ಮ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ರಾಜ್ಯದ ಜನರಿಗೆ ಮೂಲಸೌಕರ್ಯಗಳಾದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಬಗ್ಗೆ ಬೆಳಕು ಚೆಲ್ಲಲು ವಿಶೇಷವಾಗಿ ಬರುವ ಮಳೆಗಾಲದ ಅಧಿವೇಶನದ ಸಂದರ್ಭದಲ್ಲೂ ಈ ಬಗ್ಗೆ ಚರ್ಚಿಸಿ ಸದನದ ಗಮನ ಸೆಳೆಯುವುದಾಗಿ ಹೇಳಿದರು.

ಯುಎಸ್‌ನಲ್ಲಿರುವ ವಿಶ್ವದ ಶ್ರೇಷ್ಠ ಶಿಕ್ಷಣ ಸಂಸ್ಥೆಗಳಾದ ಮೆಸಾಚುಸೆಟ್ಸ್‌ ಆಫ್ ಟೆಕ್ನಾಲಜಿ (ಎಂಐಟಿ), ಹಾರ್ವರ್ಡ್ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿ ಅಲ್ಲಿರುವ ಸೌಲಭ್ಯಗಳನ್ನು ರಾಜ್ಯದಲ್ಲಿ ಹಂತಹಂತವಾಗಿ ಅಳವಡಿಸಲು ಸರ್ಕಾರದ ಗಮನ ಸೆಳೆಯಲು ಸೂಕ್ತ ಕ್ರಮಕೈಗೊಳ್ಳಲಾಗುವುದು. ಪ್ರಜಾಪ್ರಭುತ್ವ ರಾಷ್ಟ್ರಗಳ ಸರ್ವಾಂಗೀಣ ಅಭ್ಯುದಯದಲ್ಲಿ ಅಲ್ಲಿನ ಶಾಸನ ಸಭೆಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು. ಶಾಸನಸಭೆಗಳಲ್ಲಿ ಕ್ರಿಯಾಶೀಲತೆ ಹಾಗೂ ಪಕ್ಷಭೇದವಿಲ್ಲದ ಅಭಿವೃದ್ಧಿಪರ ಚಿಂತನೆಯಿಂದ ಮಾತ್ರ ರಾಷ್ಟ್ರದ ಭವಿಷ್ಯ ಉಜ್ವಲವಾಗಬಲ್ಲದು ಎಂದರು.

ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಮತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಶಾಸಕರಾದ ಅರವಿಂದ್‌ ಬೆಲ್ಲದ್‌, ಬಿ.ಆರ್‌.ಪಾಟೀಲ್‌, ಭೀಮಣ್ಣ ನಾಯಕ್‌, ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸದಸ್ಯರಾದ ದಿನೇಶ್‌ ಗೂಳಿಗೌಡ, ಎನ್‌.ರವಿಕುಮಾರ್‌, ಭಾರತಿ ಶೆಟ್ಟಿ, ಟಿ.ಎ.ಶರವಣ, ಅಶೋಕ್‌ ಪಟ್ಟಣ್‌, ಹೇಮಲತಾ ನಾಯಕ್‌ ಸೇರಿದಂತೆ ಹಲವು ಜನಪ್ರತಿನಿಧಿಗಳ ನಿಯೋಗ ಭಾಗವಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್