
ಬೆಂಗಳೂರು (ಆನೇಕಲ್): ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿ ಮಗ್ಗಲಲ್ಲೇ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವುದು ಪತ್ತೆಯಾಗಿದೆ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸತತ ಮೂರು ದಿನಗಳಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಈ ಅಕ್ರಮ ವಾಸಿಗಳು ಸಿಕ್ಕಿಬಿದ್ದಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದವರನ್ನು ಪತ್ತೆಹಚ್ಚಿದ ಕಾರ್ಯಕರ್ತರು ಅವರ ದಾಖಲೆಗಳನ್ನು ಪರಿಶೀಲಿಸಿದಾಗ, ಅವರ ಬಳಿ ಭಾರತಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಗುರುತಿನ ಚೀಟಿಗಳು ಪತ್ತೆಯಾಗಿಲ್ಲ. ವಿಚಾರಣೆ ನಡೆಸಿದಾಗ ತಾವು ಬಾಂಗ್ಲಾದೇಶಿಗರು ಎಂದು ವಲಸಿಗರು ಒಪ್ಪಿಕೊಂಡಿದ್ದಾರೆ. ಇವರು ಕಳೆದ ಐದು ವರ್ಷಗಳಿಂದ ಯಾವುದೇ ಅಡೆತಡೆಯಿಲ್ಲದೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂಬ ಭಯಾನಕ ಮಾಹಿತಿ ಹೊರಬಿದ್ದಿದೆ.
ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮೂಲಕ ಭಾರತದ ಗಡಿ ಪ್ರವೇಶಿಸಿ, ನಂತರ ಬೆಂಗಳೂರಿಗೆ ಬಂದಿರುವುದಾಗಿ ವಲಸಿಗರು ತಪ್ಪೊಪ್ಪಿಕೊಂಡಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳ ಕಗ್ಗೊಲೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಹಿಂದೂ ಪರ ಸಂಘಟನೆಗಳು ಈ ಕಾರ್ಯಾಚರಣೆ ಕೈಗೊಂಡಿವೆ. ದಾಳಿಯ ವೇಳೆ ಸಂಘಟನಾಕಾರರನ್ನು ಕಂಡು ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ.
'ದೇಶ ಬಿಟ್ಟು ತೊಲಗಿ: ಪುನೀತ್ ಕೆರೆಹಳ್ಳಿ ಎಚ್ಚರಿಕೆ
ಸ್ಥಳಕ್ಕೆ ಭೇಟಿ ನೀಡಿದ ಪುನೀತ್ ಕೆರೆಹಳ್ಳಿ ಅಕ್ರಮ ವಲಸಿಗರನ್ನು ತೀವ್ರವಾಗಿ ವಿಚಾರಣೆ ನಡೆಸಿದರು. ಯಾವುದೇ ದಾಖಲೆಗಳಿಲ್ಲದೆ ನಮ್ಮ ದೇಶದಲ್ಲಿ ನೆಲೆಸಿರುವುದು ಅಪರಾಧ, ತಕ್ಷಣವೇ ದೇಶ ಬಿಟ್ಟು ಹೋಗಿ ಎಂದು ವಲಸಿಗರಿಗೆ ಖಡಕ್ ಎಚ್ಚರಿಕೆ ನೀಡಿದರು. ಬೆಂಗಳೂರಿನ ಸುತ್ತಮುತ್ತ ಇನ್ನೂ ನೂರಾರು ಬಾಂಗ್ಲಾದೇಶಿಗರು ಅಕ್ರಮವಾಗಿ ವಾಸವಿರುವ ಬಗ್ಗೆ ಸೆರೆಸಿಕ್ಕ ವಲಸಿಗರು ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ.
ಪೊಲೀಸರ ಸುಪರ್ದಿಗೆ ಅಕ್ರಮ ವಲಸಿಗರು
ಕಾರ್ಯಾಚರಣೆ ನಡೆಸಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಪತ್ತೆಯಾದ ಅಕ್ರಮ ವಲಸಿಗರನ್ನು ಬನ್ನೇರುಘಟ್ಟ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ವಲಸಿಗರ ಹಿನ್ನೆಲೆ ಮತ್ತು ಅವರಿಗೆ ಬೆಂಗಳೂರಿನಲ್ಲಿ ಆಶ್ರಯ ನೀಡಿದವರು ಯಾರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ