
ಹೊಸಪೇಟೆ (ಮಾ.21): ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಎಸ್ಪಿ ಎಸ್.ಜಾಹ್ನವಿ ರೌಡಿಶೀಟರ್ಗಳಿಗೆ ಬೆವರಿಳಿಸುವಂತೆ ಪರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದರು.
ಹೊಸಪೇಟೆಯ ಡಿಆರ್ ಮೈದಾನದಲ್ಲಿ ಬುಧವಾರ ನಡೆದ ಈ ವಿಶೇಷ ರೌಡಿ ಪರೇಡ್ನಲ್ಲಿ ಜಿಲ್ಲೆಯ 21 ಪೊಲೀಸ್ ಠಾಣೆಗಳ ವ್ಯಾಪ್ತಿಯ 220 ರೌಡಿ ಶೀಟರ್ಗಳು ಭಾಗವಹಿಸಿದರು.
ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಕಣ್ಣಿಟ್ಟಿರುವ ಪೊಲೀಸ್ ಇಲಾಖೆ, ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಪರೇಡ್ ಹಮ್ಮಿಕೊಳ್ಳಲಾಗಿತ್ತು. ಪರೇಡ್ ವೇಳೆ ರೌಡಿ ಶೀಟರ್ಗಳನ್ನು ಸಾಲುಗಟ್ಟಿ ನಿಲ್ಲಿಸಿ, ಶಿಸ್ತು, ವರ್ತನೆ ಹಾಗೂ ಕಾನೂನು ಪಾಲನೆ ಕುರಿತು ಎಸ್ಪಿ ಜಾಹ್ನವಿ ಅವರು ರೌಡಿ ಶೀಟರ್ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಪರಾಧ ಚಟುವಟಿಕೆಗಳಿಂದ ದೂರ ಇರಬೇಕು. ಸುಧಾರಣೆಗೆ ಪ್ರತಿದಿನವೂ ಅವಕಾಶ ಇದೆ. ಒಳ್ಳೆಯ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕುವಂತೆ ಎಂದು ಅವರು ಸಲಹೆ ನೀಡಿದರು.
ಇದೇ ವೇಳೆ 'ಒಮ್ಮೆ ಎಚ್ಚರಿಕೆ ನೀಡಿದ ಬಳಿಕವೂ ಚಟುವಟಿಕೆಗಳು ಮುಂದುವರಿದರೆ, ಇದಕ್ಕಿಂತಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸಂದೇಶ ನೀಡಿದರು.
ರೌಡಿಗಳಲ್ಲಿ ಕೆಲವರು ಪರೇಡ್ ವೇಳೆ ಸರಿಯಾಗಿ ನಿಲ್ಲದೇ ನಿರ್ಲಕ್ಷ್ಯ ತೋರಲು ಯತ್ನಿಸಿದಾಗ, 'ಮೊದಲು ಸರಿಯಾಗಿ ನಿಲ್ಲೋದು ಕಲಿಯಿರಿ. ಯಾವ ಸಣ್ಣ ಕೇಸ್ನಲ್ಲಿ ಇರುವವನು ನೀನು? ಓವರ್ ಸ್ಮಾರ್ಟ್ ಆಗಿ ಆಡಬೇಡಿ ಎಂದು ಎಸ್ಪಿ ಜಾಹ್ನವಿ ಅವರು ಗೌಡಿ ಶೀಟರ್ಗಳಿಗೆ ಬೆವರಿಳಿಸಿದರು.
ಇದೇ ವೇಳೆ 15 ರೌಡಿ ಶೀಟರ್ಗಳಿಗೆ ಗಡಿಪಾರು ಮಾಡಲು ಸೂಚನೆ ನೀಡಿದರು. ರೌಡಿಶೀಟರ್ಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಡಲಾಗುತ್ತಿದ್ದು, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ವಿಜಯನಗರ ಜಿಲ್ಲೆಯಾದ್ಯಂತ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ಜಾಹ್ನವಿ ಅವರ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಎಎಸ್ಪಿ ಮಂಜುನಾಥ, ಡಿವೈಎಸ್ಪಿ ಡಾ. ಟಿ. ಮಂಜುನಾಥ ಸೇರಿದಂತೆ 21 ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ