
ಬೆಂಗಳೂರು (ಜ.23) ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಮೊದಲ ಹಾಗೂ ಕೊನೆಯ ಪ್ಯಾರಾ ಓದಿ ಸದನದಲ್ಲಿ ಮಂಡನೆ ಆಗಿರುವ ಭಾಷಣದಲ್ಲಿ ಕೇಂದ್ರದ ವಿರುದ್ಧ ಪುಂಖಾನುಪುಂಖ ಟೀಕಾಪ್ರಹಾರವಿದೆ. ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳ ಪೈಕಿ 10ರಲ್ಲಿ ಕೇಂದ್ರ ಸರ್ಕಾರದ ನೀತಿ ಹಾಗೂ ನಡೆಗಳನ್ನು ಕಟುವಾಗಿ ಟೀಕಿಸಲಾಗಿದೆ. ರಾಜ್ಯಪಾಲರಿಗೆ ಸರ್ಕಾರ ನೀಡಿದ ಭಾಷಣ ಪ್ರತಿಯಲ್ಲಿರುವ ಅಂಶಗಳೇ ಗೆಹ್ಲೋಟ್ ಭಾಷಣ ಚುಟುಕುಗೊಳಿಸಿ ಹೊರ ನಡೆದ ಘಟನೆ ನಡೆದಿದೆ. ಕೇಂದ್ರದ ವಿರುದ್ಧ ಟೀಕಾ ಪ್ರಹಾರದ 10 ಅಂಶಗಳು ಯಾವುದು?
‘ಕೇಂದ್ರ ಸರ್ಕಾರವು ಮನರೇಗಾ ಯೋಜನೆ ರದ್ದುಪಡಿಸಿ ಗ್ರಾಮೀಣ ಜನರ ಉದ್ಯೋಗ, ನಿರುದ್ಯೋಗ ಭತ್ಯೆಯ ಹಕ್ಕನ್ನು ಕಸಿದಿದೆ. ಹೀಗಾಗಿ ವಿಬಿ ಗ್ರಾಮ್ ಜಿ ಕಾನೂನು ತಕ್ಷಣ ರದ್ದುಪಡಿಸಿ ಮನರೇಗಾ ಯೋಜನೆ ಮರು ಸ್ಥಾಪಿಸಬೇಕು’ ಎಂದು ನನ್ನ ಸರ್ಕಾರ ಒತ್ತಾಯಿಸುತ್ತದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು (ಮನರೇಗಾ) ಬಡವರ, ಕೃಷಿ ಕಾರ್ಮಿಕರ ಪರ ಇತ್ತು. ಗ್ರಾಮೀಣ ಆಸ್ತಿ ಸೃಜನೆಗೆ ಅವಕಾಶ ಕಲ್ಪಿಸುವ, ನಿರುದ್ಯೋಗ ಭತ್ಯೆ ಒದಗಿಸುವ, ಕಾರ್ಮಿಕರಿಗೆ ಅವರಿರುವ ಸ್ಥಳದಲ್ಲಿಯೇ ಕೆಲಸ ಯೋಜನೆಯನ್ನು ಮರು ಸ್ಥಾಪಿಸಬೇಕೆಂದು ನನ್ನ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯದ ಪಾಲು ಇದ್ದರೂ ರಾಜ್ಯಗಳನ್ನು ಸಂಪರ್ಕಿಸದೆ ನಿರ್ಧಾರ ಮಾಡಿರುವುದು ಸಂವಿಧಾನ ಬಾಹಿರ. ಯೋಜನೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಲಾಗಿದೆ. ಹೊಸ ಕಾಯ್ದೆಯ ಪ್ರಕಾರ ಶೇ.40 ರಷ್ಟು ಅನುದಾನವನ್ನು ರಾಜ್ಯಗಳು ನೀಡಬೇಕಾಗುತ್ತದೆ. ಕೇಂದ್ರವು ಅನುದಾನ ನೀಡದಿದ್ದರೆ ಕೇಂದ್ರವು ಅನುದಾನ ನೀಡುವುದಿಲ್ಲ. ಹೀಗಾಗಿ ಯೋಜನೆ ಅವಸಾನದ ಹಾದಿಗೆ ತೆರಳಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಗ್ರಾಮೀಣ ಭಾರತದ ಅಭಿವೃದ್ಧಿ ಪರ್ವದ ಬೃಹತ್ ಅಧ್ಯಾಯವಾಗಿದ್ದ ಮನರೇಗಾ ಕಾಯ್ದೆಯ ರದ್ದತಿಯ ಮೂಲಕ ಭಾರತೀಯ ಗ್ರಾಮೀಣ ಬದುಕನ್ನು ದುರ್ಬಲಗೊಳಿಸಲಾಗಿದೆ. ಅನ್ನ, ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗಬಾರದೆಂಬುದೂ ಸಹ ಗಾಂಧೀಜಿಯವರ ಅಭಿಪ್ರಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2005ರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಪ್ರಾರಂಭಿಸಿತ್ತು.ರಾಜ್ಯವು ಕಳೆದ 20 ವರ್ಷಗಳಲ್ಲಿ 76.89 ಲಕ್ಷ ಕಾಮಗಾರಿಗಳನ್ನು 61.03 ಸಾವಿರ ಕೋಟಿ ರು. ವೆಚ್ಚದಲ್ಲಿ ಕೈಗೊಂಡಿದೆ. 182.5 ಕೋಟಿ ಮಾನವ ದಿನಗಳಷ್ಟು ಉದ್ಯೋಗವನ್ನು ಸೃಜಿಸಿದೆ. ನೀರಿನಲ್ಲಿ ಹೋಮ ಮಾಡಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ತಿಲಾಂಜಲಿ ಇಟ್ಟಿದೆ. ಇಂತಹ ಪ್ರಗತಿ ವಿರೋಧಿ ಕ್ರಮವನ್ನು ನನ್ನ ಸರ್ಕಾರ ಬಲವಾಗಿ ಖಂಡಿಸುತ್ತದೆ.
ಮನರೇಗಾ ಕಾಯ್ದೆಯು ಖಾತ್ರಿ ಮಾಡಿದ್ದ ಉದ್ಯೋಗದ ಖಾತ್ರಿಯನ್ನು ಹೊಸ ವಿಬಿ ಗ್ರಾಮ್ ಜಿ ಕಾಯ್ದೆಯು ಕಿತ್ತುಕೊಂಡಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ದೂರಲಾಗಿದೆ.
ಮನರೇಗಾ ಕಾಯ್ದೆಯ ಸೆಕ್ಷನ್ 3ರ ಪ್ರಕಾರ ಯಾವುದೇ ಪಂಚಾಯಿತಿಯಲ್ಲಿ ಉದ್ಯೋಗ ನೀಡಬೇಕೆಂದು ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕೆಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಆದರೆ, ವಿಬಿ ಗ್ರಾಮ್ ಜಿ ಯೋಜನೆಯಲ್ಲಿ ಬೇಡಿಕೆ ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ವವನ್ನು ಧ್ವಂಸ ಮಾಡಿ ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ. ಕಾರ್ಪೊರೇಟ್ ಬಂಡವಾಳಿಗರ ಹಿತಾಸಕ್ತಿಯನ್ನು ಕಾಪಾಡಲು ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ರೂಪಿಸಲಾಗಿದೆ. ಆ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ ಎಂದು ಟೀಕಿಸಲಾಗಿದೆ.
ಗ್ರಾಮಸ್ವರಾಜ್ಯದ ಕಲ್ಪನೆಯನ್ನು ಹೊಸ ಕಾಯ್ದೆಯು ದುರ್ಬಲಗೊಳಿಸಿದೆ. ಪಂಚಾಯತ್ರಾಜ್ನ ವಿಕೇಂದ್ರೀಕರಣ ವ್ಯವಸ್ಥೆಯ ಅಡಿಪಾಯವನ್ನೇ ಬುಡಮೇಲು ಮಾಡಿದೆ. ಗ್ರಾಮಸಭೆಗಳ ಅಧಿಕಾರವನ್ನು ನಿರ್ಬಂಧಿಸಲಾಗಿದೆ. ರಾಷ್ಟ್ರದ ಹಿತಾಸಕ್ತಿಯನ್ನು ವಿನಾಶದ ಅಂಚಿಗೆ ದೂಡುವ ಪ್ರಗತಿ ವಿರೋಧಿ ಕ್ರಮವಿದು ಎಂದು ಟೀಕಿಸಲಾಗಿದೆ.
ರಾಜ್ಯವು ಒಕ್ಕೂಟ ವ್ಯವಸ್ಥೆಯಲ್ಲಿ ಆರ್ಥಿಕ ಮತ್ತು ನೀತಿಕಾರಕ ವಿಚಾರಗಳಲ್ಲಿ ದಮನಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗಳು, ಕೇಂದ್ರದ ಯೋಜನೆಗಳು, ವಿಶೇಷ ಯೋಜನೆಗಳು ಮುಂತಾದವುಗಳಲ್ಲಿ ಅನ್ಯಾಯಗಳಿಗೆ ತುತ್ತಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರದ ವಿರುದ್ದ ಟೀಕಾಪ್ರಹಾರ ನಡೆಸಲಾಗಿದೆ. ದೇಶದ ಆರ್ಥಿಕತೆಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕವನ್ನು ಆರ್ಥಿಕವಾಗಿ ದಮನಿಸಿದರೆ ಅದರ ಪರಿಣಾಮ ಇಡೀ ದೇಶದ ಮೇಲೆ ಉಂಟಾಗುತ್ತದೆ ಎಂಬುದನ್ನು ಒಕ್ಕೂಟ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆಯ ಸಂದೇಶವನ್ನೂ ರವಾನಿಸಲಾಗಿದೆ.
15ನೇ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು ₹1.25 ಲಕ್ಷ ಕೋಟಿಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲಗಳು ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ. ಇದು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನ್ಯಾಯವು ಸರಿಯಾಗಬಹುದೆಂದು ಸರ್ಕಾರಕ್ಕೆ ಖಚಿತ ನಂಬಿಕೆಯಿದೆ ಆಶಾಭಾವನೆ ವ್ಯಕ್ತಪಡಿಸಲಾಗಿದೆ.
ವಿಕಸಿತ್ ಭಾರತ್-ರೋಜ್ಗಾರ್ ಅಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬಳಕೆ ಮಾಡಲಾಗುತ್ತಿತ್ತು. ಆದರೆ, ರಾಜ್ಯಪಾಲರ ಭಾಷಣದಲ್ಲಿ ಯೋಜನೆಯ ಹೆಸರನ್ನು ಎಲ್ಲಾ ಕಡೆಗಳಲ್ಲೂ ವಿಬಿ ಗ್ರಾಮ್ ಜಿ ಎಂದು ಬಳಕೆ ಮಾಡಲಾಗಿದೆ. ರಾಮ್ ಬದಲಿಗೆ ಗ್ರಾಮ್ ಎಂದು ಬರುವಂತೆ ನೋಡಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ