
ಬೆಂಗಳೂರು(ಜ.23): ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದ ಹಿರಿಯ ಸಿವಿಲ್ ನ್ಯಾಯಾಲಯದ ಮುಂದೆ ನಡೆಯುತ್ತಿದೆ. ಈ ನ್ಯಾಯಾಲಯ ಶಿವಮೊಗ್ಗದ ಹೊಸನಗರದಲ್ಲಿ ರುವ ತನ್ನ ಮನೆಯಿಂದ 130 ಕಿ.ಮೀ ದೂರದಲ್ಲಿದೆ. ನರಸಿಂಹರಾಜಪುರದ ನ್ಯಾಯಾಲಯದ ವಿಚಾರಣೆಗೆ ಹೋಗಿಬರಲು ಕಷ್ಟವಾಗುತ್ತದೆ. ಹೀಗಾಗಿ, ಶಿವಮೊಗ್ಗದ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಬೇಕು ಎಂದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಡಾ. ಚೆಲ್ಲಾಕುರ್ ಸುಮಲತಾ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಉದ್ಯೋಗಿಗಳ ಗ್ರ್ಯಾಚುಟಿ ಹಣ ಕಂಪನಿಗಳು ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ: ಕರ್ನಾಟಕ ಹೈಕೋರ್ಟ್
ಚಿಕ್ಕಮಗಳೂರಿಗೆ ತೆರಳಲು ತನಗೆ ಸಮಸ್ಯೆಯಾಗುತ್ತದೆ ಎಂದು ಅರ್ಜಿದಾರೆ ಹೇಳುತ್ತಿದ್ದಾರೆ. ಆದರೆ, ಪ್ರಕರಣದ ವಿಚಾರಣೆಯನ್ನು ಶಿವಮೊಗ್ಗಕ್ಕೆ ವರ್ಗಾಯಿ ಸಿದರೆ, ಇಬ್ಬರು ಅಪ್ರಾಪ್ತ ಮಕ್ಕಳನ್ನು (ಅರ್ಜಿದಾರೆ ಜೊತೆಗಿನ ವಿವಾಹ ಸಂಬಂಧದಿಂದ ಜನಿಸಿರುವ) ನೋಡಿಕೊಳ್ಳುತ್ತಿರುವ ಪತಿಗೆ ಮತ್ತಷ್ಟು ತೊಂದರೆಯಾಗಲಿದೆ ಎಂದು ಪೀಠ ಹೇಳಿದೆ.
ವಿಚಾರಣೆ ವೇಳೆ ಪತಿಯ ಪರ ವಕೀಲ, ಅರ್ಜಿದಾರೆಯ ಜೊತೆಗಿನವಿವಾಹದಿಂದ ಜನಿಸಿರುವ ಏಳು ಮತ್ತು ಒಂಬತ್ತು ವರ್ಷದ ಎರಡು ಮಕ್ಕಳನ್ನು ಪತಿ ನೋಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಊಟ ತಯಾರಿಸಿ ಉಣಬಡಿಸುವೆ, ಶಾಲೆಗೆ ಕಳುಹಿಸುವುದು ಸೇರಿ ಇತ್ಯಾದಿ ಕೆಲಸಗಳನ್ನು ಪತಿ ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಶಿವಮೊಗ್ಗಕ್ಕೆ ವರ್ಗಾಯಿಸಿದರೆ ಅಲ್ಲಿಗೆ ತೆರಳಲು ಅವರು ಸಾಕಷ್ಟು ಓಡಾಟ ಮಾಡಬೇಕಾಗುತ್ತದೆ. ಇದು ಸಾಕಷ್ಟು ಸಮಸ್ಯೆ ಉಂಟು ಮಾಡಲಿದೆ ಎಂದು ವಿವರಿಸಿದರು. ಈವಾದ ಪರಿಗಣಿಸಿದ ನ್ಯಾಯಪೀಠ, ಮಹಿಳೆಯ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ