
ಕುಂದಾಪುರ (ಜೂ.14): ತೆಂಕು, ಬಡಗು ಉಭಯತಿಟ್ಟುಗಳ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ (ಕುಷ್ಠ) ಗಾಣಿಗ (78) ಗುರುವಾರ ಇಲ್ಲಿನ ಕೋಡಿಯಲ್ಲಿರುವ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಅವರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.ಹೆರಂಜಾಲು ವೆಂಕಟರಮಣ ಗಾಣಿಗರಿಂದ ಬಡಗುತಿಟ್ಟಿನ ಹೆಜ್ಜೆಗಾರಿಕೆಯನ್ನು, ಪಡ್ರೆ ಚಂದು ಅವರಿಂದ ತೆಂಕುತಿಟ್ಟಿನ ನಾಟ್ಯಭ್ಯಾಸವನ್ನು ಕಲಿತು, ಓರ್ವ ಪ್ರಸಿದ್ಧ ಸ್ತ್ರೀ ವೇಷಧಾರಿಯಾಗಿ ಕಲಾಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದರು.
ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದ್ರೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾಪೂತನಿ, ಮಾಯಾಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀಪಾತ್ರದ ನವರಸಗಳಲ್ಲಿಯೂ ನಿಸ್ಸೀಮರಾಗಿದ್ದರು. ಪುರುಷ ವೇಷಗಳಾದ ಪರಶುರಾಮ, ವಿಷ್ಣು, ಕೃಷ್ಣ ಪಾತ್ರಗಳನ್ನು ಮಾಡುತ್ತಿದ್ದರು. ಇವರು ಅಮೃತೇಶ್ವರಿ, ಮಾರಣಕಟ್ಟೆ, ಕಲಾವಿಹಾರ ಮೇಳ, ರಾಜರಾಜೇಶ್ವರಿ ಮೇಳ ಹಾಗೂ ಸುದೀರ್ಘವಾಗಿ ಕಟೀಲು ಮೇಳದಲ್ಲಿ ಒಟ್ಟು ಮೂರುವರೆ ದಶಕಗಳ ಕಾಲ ತಿರುಗಾಟವನ್ನು ಮಾಡಿದ್ದಾರೆ.
ಮೇ 31ರಂದು 50 ಹಿರಿಯ ಸಾಧಕ ಕಲಾವಿದರಿಗೆ ನೀಡಲ್ಪಟ್ಟ, ಐವತ್ತು ಸಾವಿರ ಮೊತ್ತವನ್ನೊಳಗೊಂಡ ಸುವರ್ಣ ಪುರಸ್ಕಾರಕ್ಕೆ ಭಾಜನರಾದ ಕೋಡಿ ಕುಷ್ಟ ಗಾಣಿಗರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ