ಯುವನಿಧಿ ಕಾರ್ಯಕ್ರಮವೂ ಅನುಷ್ಠಾನ; ಅನುದಾನ ಕೊರತೆ ಒಪ್ಪಿಕೊಂಡ ಸಚಿವ ಸಂತೋಷ್ ಲಾಡ್

By Kannadaprabha NewsFirst Published Aug 7, 2023, 8:30 AM IST
Highlights

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಯುವನಿಧಿ ಕಾರ್ಯಕ್ರಮವನ್ನೂ ಜಾರಿ ಮಾಡಲಾಗುವುದು. ಗೃಹಲಕ್ಷ್ಮೇ ಯೋಜನೆಯ ಎಲ್ಲ ಫಲಾನುಭವಿಗಳಿಗೂ ಮಾಸಿಕ ತಲಾ .2000 ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ಹೊಸಪೇಟೆ (ಆ.7) :  ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಯುವನಿಧಿ ಕಾರ್ಯಕ್ರಮವನ್ನೂ ಜಾರಿ ಮಾಡಲಾಗುವುದು. ಗೃಹಲಕ್ಷ್ಮೇ ಯೋಜನೆಯ ಎಲ್ಲ ಫಲಾನುಭವಿಗಳಿಗೂ ಮಾಸಿಕ ತಲಾ .2000 ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿಗಳ ಜಾರಿಗೆ ಅಂದಾಜು .60 ಸಾವಿರ ಕೋಟಿ ಆಗಲಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳ ಸಾಕಾರಕ್ಕೆ ಕ್ರಮವಹಿಸಿದ್ದಾರೆ. ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಸಾಕಾರಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಶೇ. 94ರಷ್ಟುಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಯುವನಿಧಿ ಯೋಜನೆಯಡಿ ಪದವಿ, ಡಿಪ್ಲೊಮಾದಲ್ಲಿ 2023-24ನೇ ಸಾಲಿನಲ್ಲಿ ಪಾಸಾಗಿ, ಆರು ತಿಂಗಳವರೆಗೆ ಕೆಲಸ ದೊರೆಯದಿದ್ದರೆ, ಅಂತಹವರಿಗೆ ಎರಡು ವರ್ಷಗಳ ವರೆಗೆ ಸರ್ಕಾರದಿಂದ ಶಿಷ್ಯವೇತನ ನೀಡಲಾಗುವುದು ಎಂದರು.

ಧಾರವಾಡ ಗೌಳಿವಾಡಾ ಜನವಸತಿ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಸಚಿವ ಸಂತೋಷ್ ಲಾಡ್

ಕಾಂಗ್ರೆಸ್‌ ವಿಧಾನಸಭೆ ಚುನಾವಣೆ ವೇಳೆ ಜನತೆಗೆ ನೀಡಿದ ಭರವಸೆಯಂತೆ ಕೆಲಸ ಮಾಡುತ್ತಿದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.

ಅನುದಾನದ ಕೊರತೆ:

ಗ್ಯಾರಂಟಿಗಳಿಗೆ .60 ಸಾವಿರ ಕೋಟಿ ನೀಡುತ್ತಿರುವುದರಿಂದ ಸಹಜವಾಗಿ ಅನುದಾನದ ಕೊರತೆ ಉಂಟಾಗುತ್ತದೆ. ಇದನ್ನು ನಾವು ಒಪ್ಪುತ್ತೇವೆ. ಆದರೆ, ಇನ್ನೂ ಆರು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಕ್ಕೂ ಅನುದಾನ ನೀಡಲಾಗುತ್ತಿದೆ. ಕ್ಷೇತ್ರಗಳಿಗೂ ಅನುದಾನ ದೊರೆಯಲಿದೆ. ಇಷ್ಟೊಂದು ದೊಡ್ಡ ಗಾತ್ರದ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಇದೆಲ್ಲ ಸಹಜ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ವಿರೋಧ ಪಕ್ಷದವರು ವರ್ಗಾವಣೆ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ವಿರೋಧ ಪಕ್ಷದ ನಾಯಕರು ಮೊದಲು ದಾಖಲೆ ಕೊಡಲಿ. ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳು ಇವೆ. ಅವರು ಅಲ್ಲಿ ಕೊಡ್ತೀವಿ ಎಂದರೆ ಅಲ್ಲಿ ಕೊಡಲಿ. ರಾಜ್ಯ ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿಲ್ಲ. ಇದೊಂದು ಆಡಳಿತಾತ್ಮಕ ಪ್ರಕ್ರಿಯೆ ಅಷ್ಟೇ ಎಂದರು.

ಶಾಸಕರು, ಸಚಿವರ ನಡುವೆ ಯಾವುದೇ ರೀತಿಯಲ್ಲಿ ಸಮನ್ವಯದ ಕೊರತೆ ಇಲ್ಲ. ಹೊಸ ಸರ್ಕಾರ ಇರುವುದರಿಂದ ಸಹಜವಾಗಿ ಶಾಸಕರು ಮತ್ತು ಸಚಿವರ ನಡುವೆ ಸಮನ್ವಯ ಆಗಬೇಕಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾವಾರು ಸಭೆ ಕರೆದಿದ್ದಾರೆ. ಎಲ್ಲವೂ ಬಗೆಹರಿಯಲಿದೆ ಎಂದರು.

ವಿಜಯನಗರ, ಬಳ್ಳಾರಿ ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಡಿಎಂಎಫ್‌ ಅನುದಾನ ಸಾಕಷ್ಟುಇದೆ. ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಮಸ್ಯೆ ಇಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೂ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಆದ್ಯತೆ ನೀಡಿದ್ದರು, ಈಗಲೂ ಆದ್ಯತೆ ನೀಡುತ್ತಿದ್ದಾರೆ ಎಂದರು.

 

ಸರ್ಕಾರದಿಂದಲೇ ಬರಗಾಲ ಘೋಷಣೆಗೆ ಸಿದ್ಧತೆ, ಸಚಿವ ಸಂತೋಷ್‌ ಲಾಡ್‌

ಶಾಸಕರಾದ ಎಚ್‌.ಆರ್‌. ಗವಿಯಪ್ಪ, ಈ. ತುಕಾರಾಮ, ಕಾಂಗ್ರೆಸ್‌ ಪಕ್ಷದ ಮುಖಂಡರಾದ ಎಚ್‌ಎನ್‌ಎಫ್‌ ಇಮಾಮ್‌ ನಿಯಾಜಿ, ಗುಜ್ಜಲ ರಘು, ಗುಜ್ಜಲ ನಾಗರಾಜ ಮತ್ತಿತರರಿದ್ದರು.

click me!