
ಬೆಂಗಳೂರು (ಜ.21): ಟೆಲಿವಿಷನ್ ಕಾರ್ಯಕ್ರಮಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಾಸ್ಯದ ಹೆಸರಿನಲ್ಲಿ ಹಿಂದೂ ದೇವತೆಗಳು ಹಾಗೂ ಪೌರಾಣಿಕ ಪಾತ್ರಗಳನ್ನು ಅವಹೇಳನಕಾರಿಯಾಗಿ ಚಿತ್ರಿಸುವುದರ ವಿರುದ್ಧ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಜನಪ್ರಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ದೇವತೆಗಳನ್ನು 'ಪ್ರಯೋಜನವಿಲ್ಲದವರು' ಎಂಬಂತೆ ಬಿಂಬಿಸಿರುವುದನ್ನು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಜೀ ಎಂಟರ್ಪ್ರೈಸಸ್ ಮತ್ತು ಕಾರ್ಯಕ್ರಮದ ನಿರ್ದೇಶಕರ ವಿರುದ್ಧ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿತು. 'ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ನೀವು ಏನು ಬೇಕಾದರೂ ಪ್ರಸಾರ ಮಾಡಬಹುದೇ? ದೇವರು ಮತ್ತು ಪೌರಾಣಿಕ ವ್ಯಕ್ತಿಗಳನ್ನು ಅತ್ಯಂತ ತುಚ್ಛವಾಗಿ ತೋರಿಸುವವರಿಗೆ ಯಾವುದೇ ರೀತಿಯ ಮನ್ನಣೆ ನೀಡಲು ಸಾಧ್ಯವಿಲ್ಲ. ಅಂತಹವರು ನ್ಯಾಯಾಲಯದಿಂದ ಯಾವುದೇ ರಕ್ಷಣೆಯನ್ನು ನಿರೀಕ್ಷಿಸಬಾರದು' ಎಂದು ನ್ಯಾಯಮೂರ್ತಿಗಳು ಗುಡುಗಿದ್ದಾರೆ.
'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಎಪಿಸೋಡ್ ಒಂದರಲ್ಲಿ ಹಿಂದೂ ದೇವತೆಗಳನ್ನು ಹಾಸ್ಯದ ವಸ್ತುವನ್ನಾಗಿಸಿ, ದೇವರ ಘನತೆಗೆ ಕುಂದು ತರುವಂತೆ ಸ್ಕಿಟ್ ಮಾಡಲಾಗಿತ್ತು ಎಂದು ಆರೋಪಿಸಿ ಪ್ರಶಾಂತ್ ಶಶಿಧರ್ ನರಗುಂದ ಎಂಬುವವರು ದೂರು ದಾಖಲಿಸಿದ್ದರು.
ಸೆಕ್ಷನ್ 299 BNS: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 299 ರ ಅಡಿಯಲ್ಲಿ ಈ ಪ್ರಕರಣ ದಾಖಲಾಗಿತ್ತು.
ವರ್ಗಾವಣೆ: ಮೊದಲು ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ಈ ಎಫ್ಐಆರ್ ಅನ್ನು ನಂತರ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
ವಾಹಿನಿಯ ವಾದ: 'ಇದು ನೇರವಾಗಿ ದೇವರನ್ನು ಉದ್ದೇಶಿಸಿ ಮಾಡಿದ ಸ್ಕಿಟ್ ಅಲ್ಲ, ಬದಲಾಗಿ ನಾಟಕದ ರಿಹರ್ಸಲ್ ಹೇಗಿರುತ್ತದೆ ಎಂಬ ಹಳ್ಳಿಗರ ಹಾಸ್ಯದ ಭಾಗವಾಗಿತ್ತು' ಎಂದು ಅರ್ಜಿದಾರರು ವಾದಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್, ವಾಹಿನಿಯ ಪ್ರತಿನಿಧಿಗಳು ಮತ್ತು ಕಾರ್ಯಕ್ರಮದ ನಿರ್ದೇಶಕರು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತಿನ ಮೇಲೆ ಅವರನ್ನು ಸದ್ಯಕ್ಕೆ ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಆದರೆ, ತನಿಖೆಯನ್ನು ರದ್ದುಗೊಳಿಸಲು (Quash) ನ್ಯಾಯಾಲಯ ನಿರಾಕರಿಸಿದ್ದು, ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಜಾಗರೂಕತೆಯಿಂದ ಇರುವಂತೆ ಎಚ್ಚರಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.