Mar 8, 2022, 3:19 PM IST
ನವದೆಹಲಿ(ಮಾ.08): ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.
ಆದರೆ, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸಮೀಕ್ಷೆಗಳು ಭಿನ್ನ-ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಎಲ್ಲ ಸಮೀಕ್ಷೆಗಳು ಏಕ ಸ್ವರದಲ್ಲಿ ‘ಬಿಜೆಪಿ ಜಯಿಸಲಿದೆ’ ಎಂದು ಹೇಳಿಲ್ಲ. ಕೆಲವು ಸಮೀಕ್ಷೆಗಳು ‘ಬಿಜೆಪಿ ಗೆಲ್ಲಲಿದೆ’ ಎಂದು ಹೇಳಿದ್ದರೆ, ಕೆಲವು ‘ಅತಂತ್ರ ವಿಧಾನಸಭೆ’ ಸುಳಿವು ನೀಡಿವೆ. ಹೀಗಾಗಿ ಈ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ನಿಜ ಆಗುತ್ತವೆಯೇ ಎಂಬುದನ್ನು ಗುರುವಾರದವರೆಗೆ ಜನರು ಚಾತಕಪಕ್ಷಿಯಂತೆ ಕಾಯುವಂತೆ ಮಾಡಿವೆ.