Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

Jun 3, 2023, 9:44 AM IST

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸುಮಾರು 233 ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಹಾಗೂ ರೈಲ್ವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ. ಈ ಭೀಕರ ರೈಲ್ವೆ ಅಪಘಾತ ಕೋರಮಂಡಲ್​​ ಎಕ್ಸಪ್ರೆಸ್​​, ಬೈಯಪ್ಪನಹಳ್ಳಿ ಸರ್‌​​ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​ ಮತ್ತು ಗೂಡ್ಸ್​​ ರೈಲುಗಳ ಮಧ್ಯೆ ಸಂಭವಿಸಿದೆ. ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಒಡಿಶಾ ಸಿಎಂ ನವೀನ್‌ ಪಟ್ನಾಕ್‌ ಸ್ಥಳಕ್ಕೆ ಬರಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ.

ಇದನ್ನೂ ವೀಕ್ಷಿಸಿ: ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!