Mar 14, 2023, 12:57 PM IST
ಬೆಂಗಳೂರು (ಮಾ.14): ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಒಲವು ತೋರಿಸಿದ್ದ ಸಚಿವ ವಿ. ಸೋಮಣ್ಣ ಅವರ ಪುತ್ರನಿಗೆ ಲೋಕಸಭೆಯ ಟಿಕೆಟ್ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದ ಬೆನ್ನಲ್ಲೇ ಬಿಜೆಪಿಯೊಂದಿಗಿನ ಮುನಿಸನ್ನು ಕೈಬಿಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಕೈಸುಟ್ಟಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸೋಮಣ್ಣ ಮಾತನಾಡುತ್ತಿರುವ ಫೋಟೋವನ್ನು ಹರಿಬಿಡಲಾಗಿದೆ.
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಮುನ್ನೆಲೆಗೆ ಬಂದಿದ್ದು, ತಮ್ಮ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದ ಬಗ್ಗೆ ಸ್ವತಃ ಸೋಮಣ್ಣ ಮುನಿಸು ವ್ಯಕ್ತಪಡಿಸಿದ್ದರು. ಬಿಜೆಪಿ ಹೈಕಮಾಂಡ್ನಿಂದ ತುಮಕೂರು ಲೋಕಸಭೆಯ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರಿಂದ ಮುನಿಸು ಕೈಬಿಟ್ಟು ಬಿಜೆಪಿಯಲ್ಲಿ ಮುಂದುವರೆಯಲು ತೀರ್ಮಾನಿಸಿದ್ದಾರೆ. ಆದರೆ, ಇದನ್ನು ಸಹಿಸದೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ಮಾಡಿದ್ದಾರೆ ಎನ್ನಲಾದ ಫೋಟೋವೊಂದನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.