ಟಿಕೆಟ್‌ ಘೋಷಣೆಗೂ ಮುನ್ನ ಫೇಸ್ಬುಕ್‌ನಲ್ಲಿ ಅಭ್ಯರ್ಥಿಯಾದ ಆಕಾಂಕ್ಷಿ! 16 ಆಕಾಂಕ್ಷಿಗಳ ಆಸೆಗೆ ತಣ್ಣೀರು

Mar 22, 2023, 6:15 PM IST

ಬೆಂಗಳೂರು (ಮಾ.22): ರಾಜ್ಯ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಆದರೆ, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯಗಳನ್ನು ಮಾಡುತ್ತಿದ್ದು, ಟಿಕೆಟ್‌ ಘೋಷಣೆಗೆ ಸಿದ್ಧವಾಗಿವೆ. ಆದರೆ, ಇಲ್ಲೊಬ್ಬ ಟಿಕೆಟ್‌ ಆಕಾಂಕ್ಷಿ ನಾನೇ ಕ್ಷೇತ್ರದ ಅಭ್ಯರ್ಥಿ ಎಂದು ಫೇಸ್‌ಬುಕ್‌ ಜಾಲತಾಣದಲ್ಲಿ ಟಿಕೆಟ್‌ ಘೋಷಣೆ ಮಾಡಿಕೊಂಡಿದ್ದಾರೆ.

ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದು ಡಾ.ಕೃಷ್ಣ ಅವರು ಪೋಸ್ಟ್‌ ಹಾಕಿಕೊಂಡಿದ್ದಾರೆ. ಇನ್ನು ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸುಮಾರು 16ಕ್ಕೂ ಅಧಿಕ ಜನರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಇನ್ನು ನಾಳೆ 120ಕ್ಕೂ ಅಧಿಕ ಕ್ಷೇತ್ರಗಳ ಟಿಕೆಟ್‌ ಘೋಷಣೆ ಆಗಲಿದ್ದು, ಅದಕ್ಕೂ ಮುನ್ನವೇ ನಾನೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿರುವುದು ಮಂಡ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇನ್ನು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಿ ಪೂಜೆಯನ್ನು ಸಲ್ಲಿಸಿದ್ದರು. ನಂತರ, ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಡಿಕೆಶಿ ಶಿವಕುಮಾರ್ ಜೊತೆಗಿದ್ದ ಡಾ. ಕೃಷ್ಣ ಅವರು ನಾನೇ ಕಾಂಗ್ರೆಸ್‌ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ.