ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಯತ್ನ ಸೇರಿದಂತೆ ಪಕ್ಷದ ಅತೃಪ್ತ ಶಾಸಕರ ಯಾವುದೇ ಬೇಡಿಕೆಗಳಿಗೆ ಸೊಪ್ಪು ಹಾಕುವ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್ ಇಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು (ಮೇ. 29): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಯತ್ನ ಸೇರಿದಂತೆ ಪಕ್ಷದ ಅತೃಪ್ತ ಶಾಸಕರ ಯಾವುದೇ ಬೇಡಿಕೆಗಳಿಗೆ ಸೊಪ್ಪು ಹಾಕುವ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್ ಇಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ವಯಸ್ಸನ್ನೂ ಲೆಕ್ಕಿಸದೆ ಕರ್ನಾಟಕದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಬದಲಾಯಿಸುವ ಅಥವಾ ಅವರನ್ನು ದುರ್ಬಲಗೊಳಿಸುವ ಪ್ರಯತ್ನಕ್ಕೆ ವರಿಷ್ಠರು ಪಕ್ಷದ ಬೆಂಬಲ ನೀಡುವುದಿಲ್ಲ ಎಂದು ತಿಳಿದು ಬಂದಿದೆ.
ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಮತ್ತೊಬ್ಬ ಸಮರ್ಥ ನಾಯಕ ಸಿಗುವುದಿಲ್ಲ. ಕೊರೋನಾ ಪರಿಸ್ಥಿತಿ ನಿಭಾಯಿಸಲು ತಮ್ಮ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಅವರ ವೇಗಕ್ಕೆ ತಕ್ಕಂತೆ ಎಲ್ಲ ಸಚಿವರೂ ಸ್ಪಂದಿಸುತ್ತಿಲ್ಲ. ಹೀಗಿರುವಾಗ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯನ್ನು ಸರ್ವಥಾ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.