
ಕಾಬೂಲ್ (ಮಾ.17): ಮಧ್ಯಪ್ರಾಚ್ಯ ಸಂಘರ್ಷ ನಡುವೆಯೇ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ಈಗ ತಾರಕಕ್ಕೇರಿದೆ. ಸೋಮವಾರ ತಡರಾತ್ರಿ ಪಾಕಿಸ್ತಾನದ ವಾಯುಪಡೆ ಅಫ್ಘಾನ್ ರಾಜಧಾನಿ ಕಾಬೂಲ್ ಮೇಲೆ ಬೃಹತ್ ವೈಮಾನಿಕ ದಾಳಿ ನಡೆಸಿದ್ದು, ಈ ಭೀಕರ ಕೃತ್ಯದಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಸರ್ಕಾರ ತಿಳಿಸಿದೆ.
ಅಫ್ಘಾನಿಸ್ತಾನದ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿತ್ರಾತ್ ನೀಡಿರುವ ಮಾಹಿತಿಯ ಪ್ರಕಾರ, ಪಾಕಿಸ್ತಾನದ ಯುದ್ಧ ವಿಮಾನಗಳು ಕಾಬೂಲ್ನಲ್ಲಿರುವ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಸುಮಾರು 2,000 ಹಾಸಿಗೆಗಳ ಸಾಮರ್ಥ್ಯದ ಈ ಬೃಹತ್ ಆಸ್ಪತ್ರೆಯ ಮೇಲೆ ರಾತ್ರಿ 9 ಗಂಟೆಗೆ ಬಾಂಬ್ ದಾಳಿ ನಡೆದಿದ್ದು, ಆಸ್ಪತ್ರೆಯ ಬಹುಭಾಗ ಧ್ವಂಸಗೊಂಡಿದೆ. ಮೃತಪಟ್ಟ 400 ಜನರಲ್ಲಿ ಹೆಚ್ಚಿನವರು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. 250ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿಯ ಬೆನ್ನಲ್ಲೇ ಆಸ್ಪತ್ರೆಯ ಆವರಣದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳೀಯ ದೂರದರ್ಶನ ವಾಹಿನಿಗಳು ಪ್ರಸಾರ ಮಾಡಿದ ದೃಶ್ಯಗಳಲ್ಲಿ, ಭದ್ರತಾ ಪಡೆಗಳು ಬ್ಯಾಟರಿ ಬೆಳಕಿನಲ್ಲಿ ಅವಶೇಷಗಳ ಅಡಿಯಿಂದ ಶವಗಳನ್ನು ಮತ್ತು ಗಾಯಾಳುಗಳನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಮಾನವೀಯತೆಯ ವಿರುದ್ಧದ ಅಪರಾಧ: ಅಫ್ಘಾನ್ ಆಕ್ರೋಶ
ಅಫ್ಘಾನ್ ಸರ್ಕಾರದ ಮುಖ್ಯ ವಕ್ತಾರ ಜಬೀಹುಲ್ಲಾ ಮುಜಾಹಿದ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. 'ಪಾಕಿಸ್ತಾನವು ನಾಗರಿಕ ಪ್ರದೇಶಗಳು ಮತ್ತು ಆಸ್ಪತ್ರೆಗಳನ್ನು ಗುರಿಯಾಗಿಸಿಕೊಂಡು ಭಯಾನಕ ಕೃತ್ಯ ಎಸಗುತ್ತಿದೆ. ಇದು ಅಂತರಾಷ್ಟ್ರೀಯ ತತ್ವಗಳ ಉಲ್ಲಂಘನೆ ಮಾತ್ರವಲ್ಲದೆ, ಮಾನವೀಯತೆಯ ವಿರುದ್ಧದ ಗಂಭೀರ ಅಪರಾಧವಾಗಿದೆ' ಎಂದು ಅವರು ಕಿಡಿಕಾರಿದ್ದಾರೆ. ಗಡಿ ಭಾಗದಲ್ಲಿ ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಸಂಘರ್ಷ ಈಗ ಪೂರ್ಣ ಪ್ರಮಾಣದ ಯುದ್ಧದ ರೂಪ ಪಡೆದುಕೊಂಡಿದೆ.
ಆರೋಪ ತಳ್ಳಿಹಾಕಿದ ಪಾಕಿಸ್ತಾನ
ಇನ್ನೊಂದೆಡೆ, ಈ ಗಂಭೀರ ಆರೋಪಗಳನ್ನು ಪಾಕಿಸ್ತಾನ ಸರ್ಕಾರವು ಸಂಪೂರ್ಣವಾಗಿ ತಳ್ಳಿಹಾಕಿದೆ. ನಾವು ಯಾವುದೇ ಆಸ್ಪತ್ರೆ ಅಥವಾ ನಾಗರಿಕ ಕೇಂದ್ರಗಳ ಮೇಲೆ ದಾಳಿ ಮಾಡಿಲ್ಲ ಎಂದು ಪಾಕಿಸ್ತಾನದ ಮಾಹಿತಿ ಸಚಿವಾಲಯ ಸ್ಪಷ್ಟಪಡಿಸಿದೆ. 'ನಮ್ಮ ವಾಯುಪಡೆಯು ಕೇವಲ ತಾಲಿಬಾನ್ ಮತ್ತು ಪಾಕಿಸ್ತಾನ ವಿರೋಧಿ ಉಗ್ರಗಾಮಿಗಳ ಅಡಗುದಾಣಗಳು, ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳು ಮತ್ತು ತಾಂತ್ರಿಕ ಸೌಲಭ್ಯಗಳನ್ನು ಮಾತ್ರ ಗುರಿಯಾಗಿಸಿಕೊಂಡು ನಿಖರ ದಾಳಿ ನಡೆಸಿದೆ" ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ವಕ್ತಾರ ಮೊಶರಫ್ ಜೈದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ