
ಬೀಜಿಂಗ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಇಡೀ ಪಶ್ಚಿಮ ಏಷ್ಯಾವನ್ನು ಆವರಿಸುತ್ತಿರುವ ಹೊತ್ತಲ್ಲಿ, ಚೀನಾ ಕೊನೆಗೂ ಮೌನ ಮುರಿದು ಶಾಂತಿಗಾಗಿ ಕರೆ ನೀಡಿದೆ. ಸೇನಾ ಕಾರ್ಯಾಚರಣೆಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಮಾತುಕತೆಗಳ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಚೀನಾದ ವಿದೇಶಾಂಗ ಇಲಾಖೆ ಆಗ್ರಹಿಸಿದೆ. ಇರಾನ್ನ ಸರ್ವೋಚ್ಚ ನಾಯಕನನ್ನು ಹತ್ಯೆಗೈದ ಟೆಹ್ರಾನ್ ಮೇಲಿನ ದಾಳಿಯಲ್ಲಿ ಚೀನಾದ ಪ್ರಜೆಯೊಬ್ಬರು ಸಾವನ್ನಪ್ಪಿರುವುದನ್ನು ಚೀನಾ ಗಂಭೀರವಾಗಿ ಪರಿಗಣಿಸಿದೆ.
ಪಶ್ಚಿಮ ಏಷ್ಯಾದ ಸಂಘರ್ಷ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಯುದ್ಧವು ಬೇರೆ ದೇಶಗಳಿಗೆ ಹರಡದಂತೆ ತಡೆಯುವುದಕ್ಕೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೋ ನಿಂಗ್ ಹೇಳಿದ್ದಾರೆ. ಟೆಹ್ರಾನ್ನಲ್ಲಿ ನಡೆದ ಅಮೆರಿಕ-ಇಸ್ರೇಲ್ ದಾಳಿಯಲ್ಲೇ ಚೀನಾದ ಪ್ರಜೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡುವಂತೆ ಇರಾನ್ನಲ್ಲಿರುವ ಚೀನಾ ರಾಯಭಾರ ಕಚೇರಿಗೆ ಸರ್ಕಾರ ಸೂಚನೆ ನೀಡಿದೆ.
ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸೋಮವಾರದೊಳಗೆ ಸುಮಾರು 3,000ಕ್ಕೂ ಹೆಚ್ಚು ಚೀನಾ ಪ್ರಜೆಗಳು ಇರಾನ್ ತೊರೆದಿದ್ದಾರೆ. ಈ ಪ್ರದೇಶಕ್ಕೆ ಪ್ರಯಾಣಿಸದಂತೆ ಚೀನಾ ಕಳೆದ ವಾರವೇ ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿತ್ತು. ಒಂದು ಸಾರ್ವಭೌಮ ರಾಷ್ಟ್ರದ ನಾಯಕನ ಮೇಲೆ ದಾಳಿ ಮಾಡುವುದು ಮತ್ತು ಅಲ್ಲಿನ ಸರ್ಕಾರವನ್ನು ಬದಲಿಸಲು ಯತ್ನಿಸುವುದು ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ರಷ್ಯಾದ ವಿದೇಶಾಂಗ ಸಚಿವರೊಂದಿಗೆ ನಡೆಸಿದ ಮಾತುಕತೆಯಲ್ಲಿ ಖಂಡಿಸಿದ್ದಾರೆ.
ಇರಾನ್ನ ಕ್ಷಿಪಣಿ ದಾಳಿಯ ನಂತರ ದುಬೈ, ದೋಹಾ ಮತ್ತು ಮನಾಮಾದಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ವರದಿಗಳು ತಿಳಿಸಿವೆ. ಅಮೆರಿಕದ ಸೇನಾ ನೆಲೆಗಳ ಮೇಲೆ 'ಇತಿಹಾಸದಲ್ಲೇ ಅತ್ಯಂತ ಕಠಿಣ ದಾಳಿ' ನಡೆಸುವುದಾಗಿ ಇರಾನ್ನ ರೆವಲ್ಯೂಷನರಿ ಗಾರ್ಡ್ಸ್ ಪಡೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ