ಬೆಂಗಳೂರಿನ ಖಾಸಗಿ ಕಂಪನಿಯೊಂದು ಡೇಟಾ ಅನಾಲಿಸ್ಟ್ ಹುದ್ದೆಗೆ ತಮಿಳುನಾಡು ಮೂಲದವರನ್ನು ಮಾತ್ರ ಆಹ್ವಾನಿಸಿ ವಿವಾದ ಸೃಷ್ಟಿಸಿದೆ. ಈ ತಾರತಮ್ಯದ ವಿರುದ್ಧ ಜಾಲತಾಣಗಳಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು (ಸೆ.14): ಖಾಸಗಿ ಕಂಪನಿಯೊಂದರಲ್ಲಿನ ಡೇಟಾ ಅನಾಲಿಸ್ಟ್ ಹುದ್ದೆಗೆ ತಮಿಳುನಾಡು ಮೂಲದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಎಂಬ ಷರತ್ತು ವಿಧಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಖಾಸಗಿ ಕಂಪನಿಯ ಎಚ್ಆರ್ ಮ್ಯಾನೇಜರ್ ವಿಧಿಸಿದ್ದ ಷರತ್ತಿಗೆ ಜಾಲತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ, ಷರತ್ತನ್ನು ಹಿಂಪಡೆಯಲಾಗಿದೆ.
ಜನರಲ್ ಮ್ಯಾನೇಜರ್ ಮತ್ತು ಎಚ್ಆರ್ ಟೀಮ್ ಹೆಡ್ ಆಗಿರುವ ಬಾಲ ಎಂ. ಎಂಬುವರು ಎರಡು ದಿನಗಳ ಹಿಂದೆ ಲಿಂಕ್ಡ್ಇನ್ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಬೆಂಗಳೂರು, ತಮಿಳುನಾಡಿನ ಕೊಯಮತ್ತೂರು ಹಾಗೂ ನಮಕ್ಕಲ್ ನಗರಗಳಲ್ಲಿ ಕಾರ್ಯಾಚರಿಸುವ ಕಂಪನಿಯಲ್ಲಿನ ಡೇಟಾ ಅನಾಲಿಸ್ಟ್ ಹುದ್ದೆಗೆ ‘ತಮಿಳುನಾಡು ಮೂಲದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಬೇರೆ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಾರದು’ ಎಂದು ಉಲ್ಲೇಖಿಸಲಾಗಿದೆ.
ಈ ತಾರತಮ್ಯದ ಕುರಿತು ಕರಣ್ ಗೌಡ ಎಂಬುವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯಾಚರಿಸುವ ಕಂಪನಿಯೊಂದು ಈ ರೀತಿ ತಾರತಮ್ಯ ಮಾಡಲು ಹೇಗೆ ಸಾಧ್ಯ? ಕಾರ್ಮಿಕ ಇಲಾಖೆ ಹಾಗೂ ರಾಜ್ಯ ಸರ್ಕಾರ, ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ
ತಾರತಮ್ಯ ನಡೆಯುತ್ತಿದೆ:
ನಗರದಲ್ಲಿನ ಅನೇಕ ಕಂಪನಿಗಳಲ್ಲಿ ಪ್ರತಿಭೆ ಮತ್ತು ಅರ್ಹತೆ ಇದ್ದರೂ ಕನ್ನಡಿಗರನ್ನು ಕಡೆಗಣಿಸಿ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಣೆ ಹಾಕಿ ಆಯ್ಕೆ ಮಾಡಿಕೊಳ್ಳುವ ತಾರತಮ್ಯ ಪದ್ಧತಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗಳು ಹಾಗೂ ಸರ್ಕಾರ ಕ್ರಮ ವಹಿಸಬೇಕು ಎಂಬ ಒತ್ತಾಯಗಳು ಜಾಲ ತಾಣದಲ್ಲಿ ಕೇಳಿ ಬಂದಿವೆ.


