ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದ ಘೋರ ದುರಂತದಲ್ಲಿ, ಮಗನೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ತಂದೆ-ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ರೋಹನ್ ಭಟ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು (ಫೆ.11): ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಕ್ತಸಿಕ್ತ ಕೌಟುಂಬಿಕ ಕಲಹ ಬಯಲಾಗಿದ್ದು, ಸ್ವಂತ ಮಗನೇ ತಂದೆ-ತಾಯಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ನಗರದ ಹೆಚ್.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್ ಈ ಘೋರ ಕೃತ್ಯಕ್ಕೆ ಸಾಕ್ಷಿಯಾಗಿದೆ.

Add Asianetnews Kannada as a Preferred SourcegooglePreferred

ನಿವೃತ್ತ ನೇವಿ ಕ್ಯಾಪ್ಟನ್ ನವೀನ್ ಚಂದ್ರ ಭಟ್ (60) ಹಾಗೂ ಅವರ ಪತ್ನಿ, ಹೆಸರಾಂತ ದಂತವೈದ್ಯೆ ಡಾ. ಶ್ಯಾಮಲಾ ಭಟ್ (55) ಕೊಲೆಯಾದ ದಂಪತಿ. ಇಂದು ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಆರೋಪಿ ಮಗ ರೋಹನ್ ಭಟ್, ಕೌಟುಂಬಿಕ ವಿಚಾರವಾಗಿ ತಂದೆ-ತಾಯಿಯ ಜೊತೆ ಜಗಳ ತೆಗೆದು ಚಾಕುವಿನಿಂದ ಮನಸೋಇಚ್ಛೆ ಇರಿದು ಕ್ರೌರ್ಯ ಮೆರೆದಿದ್ದಾನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ದಂಪತಿಯನ್ನು ಕೂಡಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಬೆಳಿಗ್ಗೆ 8.15ರ ಸುಮಾರಿಗೆ ಇಬ್ಬರೂ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಡಾ. ಮಾಧವಿ ನಾಯರ್ ನೀಡಿದ ಮಾಹಿತಿ ಮೇರೆಗೆ ಹೆಚ್.ಎ.ಎಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ವಶದಲ್ಲಿ ಪಾಪಿ ಮಗ

ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ರೋಹನ್ ಭಟ್‌ನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಕೌಟುಂಬಿಕ ಕಲಹವೇ ಮೂಲ ಕಾರಣ ಎಂದು ಶಂಕಿಸಲಾಗಿದೆ. ಸದ್ಯ ಮೃತರ ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತ ದಂಪತಿಯ ಪುತ್ರಿ ಅಮೆರಿಕದಲ್ಲಿದ್ದು, ಆಕೆ ಬಂದ ನಂತರವಷ್ಟೇ ಮರಣೋತ್ತರ ಪರೀಕ್ಷೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.