ಮಾಜಿ ಸಚಿವ ವೈಜನಾಥ ಪಾಟೀಲ್ ವಿಧಿವಶ| ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ| ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲ್|

ಬೆಂಗಳೂರು/ಕಲಬುರಗಿ[ನ.2]: ಮಾಜಿ ಸಚಿವ ವೈಜನಾಥ ಪಾಟೀಲ್[84] ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.

Add Asianetnews Kannada as a Preferred SourcegooglePreferred

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಅವರು 371(ಜೆ) ಕಲಂ ಜಾರಿಯಲ್ಲಿ ಪ್ರಮುಖ ಪಾತ್ರ ನಿರ್ವಹಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಎಚ್. ಡಿ. ದೇವೆಗೌಡ ಸಂಪುಟದಲ್ಲಿ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. 

ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಗೆ ಪಾಟೀಲ್ ರ ಮನಸ್ಸು ಸದಾ ಮಿಡಿಯುತ್ತಿತ್ತು. ಈ ಭಾಗದ ಅಭಿವೃದ್ಧಿ ಗಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿ ಜಾರಿಗೆ ಆಗ್ರಹಿಸಿ ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ರೂಪಿಸಿದವರೇ ವೈಜನಾಥ ಪಾಟೀಲ್. 371 ಜೆ ವಿಧಿ ಜಾರಿಯಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಏನಾದರೂ ಅನ್ಯಾಯವಾದರೆ ತಕ್ಷಣವೇ ಸರಕಾರ ದ ಗಮನ ಸೆಳೆಯುತ್ತಿದ್ದ ವೈಜನಾಥ ಪಾಟೀಲ್ ಅವರು ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು.

ಹೋರಾಟಕ್ಕೆ ಇನ್ನೊಂದು ಹೆಸರು ವೈಜನಾಥ ಪಾಟೀಲ್ ಎಂದೇ ಹೆಸರು ಪಡೆದ ಪಾಟೀಲ್ ರನ್ನು ಕಳೆದುಕೊಂಡ ಕಲ್ಯಾಣ ಕರ್ನಾಟಕವಿಂದು ಬಡವಾಗಿದೆ. ಎಂಎಸ್ಐಎಲ್ ಮಾಜಿ ಅಧ್ಯಕ್ಷ ಡಾ. ವಿಕ್ರಮ್ ಪಾಟೀಲ್, ಜಿಲ್ಲಾ ಪಂಚಾಯಿತಿ ಸದಸ್ಯ ಗೌತಮ ಪಾಟೀಲ್ ಸೇರಿ ಮೂವರು ಪುತ್ರರು, ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

ಮೃತರ ಅಂತ್ಯಕ್ರಿಯೆ ನಾಳೆ ಭಾನುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಸೆಪ್ಟೆಂಬರ್ 22 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಮನದಾಳದ ಮಾತು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೀವನ ಪರಿಚಯ ಹಾಗೂ ಹೋರಾಟದ ಇತಿಹಾಸ ಹೇಳಿದ್ದರು. ಆದರೆ ಜೀವನ ಇತಿಹಾಸದಿಂದ ಇಷ್ಟು ಬೇಗ ಮರೆಯಾಗುತ್ತಾರೆಂದು ಯಾರೂ ಊಹಿಸಿರಲಿಲ್ಲ.