ಸರ್ಕಾರಿ ಭೂಮಿ ಒತ್ತುವರಿ ಆರೋಪದ ಮೇಲೆ ಶ್ರೀ ಶ್ರೀ ರವಿಶಂಕರ್ ವಿರುದ್ಧ ದಾಖಲಾದ ಕೇಸ್‌ಅನ್ನು ಹೈಕೋರ್ಟ್‌ ರದ್ದು ಮಾಡಿದೆ. ತಮ್ಮ ಮೇಲೆ ದಾಖಲಾದ ಎಫ್‌ಐಆರ್‌ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. 

ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ ಗುರೂಜಿಯವರ ವಿರುದ್ಧ ದಾಖಲಾಗಿದ್ದ ಸರ್ಕಾರಿ ಜಮೀನು ಒತ್ತುವರಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ರವಿಶಂಕರ ಗುರೂಜಿ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಗುರೂಜಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Add Asianetnews Kannada as a Preferred SourcegooglePreferred

ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ರವಿಶಂಕರ ಗುರೂಜಿ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಿದೆ. ಆದಾಗ್ಯೂ, ಈ ಆದೇಶವು ಕೇವಲ ಈ ನಿರ್ದಿಷ್ಟ ಪ್ರಕರಣಕ್ಕೆ ಮಾತ್ರ ಸೀಮಿತವಾಗಿದ್ದು, ಬೇರೆ ಯಾವುದೇ ನ್ಯಾಯಾಲಯದಲ್ಲಿ ಬಾಕಿ ಇರುವ ಇತರ ಆರೋಪಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ತೀರ್ಪಿನ ವಿವರವಾದ ಪ್ರತಿಗಾಗಿ ಕಾಯಲಾಗುತ್ತಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಸಂಬಂಧ ಇವರ ವಿರುದ್ಧ ಎಫ್‌ಐ ಆರ್‌ ದಾಖಲಾಗಿತ್ತು. ಈ ಪ್ರಕರಣದಲ್ಲಿ ದಾಖಲೆಗಳನ್ನು ತನಿಖೆಗೆ ಒಳಪಡಿಸದೆ ತಡೆ ನೀಡುವುದು ಸೂಕ್ತವಲ್ಲ ಎಂದು ಈ ಹಿಂದೆ ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಸೆಕ್ಷನ್ 192A (ಅಪರಾಧಗಳು ಮತ್ತು ದಂಡಗಳು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಆರೋಪಿಸಿ ಬೆಂಗಳೂರು ಮಹಾನಗರ ಕಾರ್ಯಪಡೆ ಪೊಲೀಸರು (ಬಿಎಂಟಿಎಫ್) ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಧ್ಯಾತ್ಮಿಕ ಗುರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಪಟ್ಟಿ ಮಾಡಲಾದ ವಿವಿಧ ಅಪರಾಧಗಳಲ್ಲಿ ಒಂದರಲ್ಲಿ ಒಬ್ಬ ವ್ಯಕ್ತಿಯು ಸರ್ಕಾರಿ ಭೂಮಿಯನ್ನು ಹೊಂದುವ ಉದ್ದೇಶದಿಂದ ಕಾನೂನುಬಾಹಿರವಾಗಿ ಪ್ರವೇಶಿಸಿದರೆ ಅಥವಾ ಆಕ್ರಮಿಸಿಕೊಂಡರೆ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಹೇಳುತ್ತದೆ.

ಬಿಎಂಟಿಎಫ್ ದಾಖಲು ಮಾಡಿದ್ದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಕಳೆದ ಜನವರಿಯಲ್ಲಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.

ಹೈಕೋರ್ಟ್‌ನ ವಿಭಾಗೀಯ ಪೀಠದ ಪಿಐಎಲ್‌ನ ಆದೇಶದ ಆಧಾರದ ಮೇಲೆ ಅಪರಾಧದ ನೋಂದಣಿ ಮಾಡಲಾಗಿದ್ದು, ಪ್ರತಿವಾದಿಗಳು ಸಾರ್ವಜನಿಕ ಭೂಮಿಯನ್ನು ಸ್ವಲ್ಪ ಮಟ್ಟಿಗೆ ಅತಿಕ್ರಮಣ ಮಾಡಿದ್ದಾರೆ ಮತ್ತು ರಾಜಕಾಲುವೆ (ಕೆರೆಗಳನ್ನು ಸಂಪರ್ಕಿಸುವ ಮಳೆನೀರಿನ ಚರಂಡಿ) ಮೇಲೆ ಆಸ್ತಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅಪರಾಧದಲ್ಲಿ ಆರೋಪಿಗಳಾಗಿ ಸೇರಿಸಲಾದ ಇತರ ವ್ಯಕ್ತಿಗಳೊಂದಿಗೆ ರವಿಶಂಕರ್‌ ಗುರೂಜಿ ಅವರನ್ನು ಪಿಐಎಲ್‌ನಲ್ಲಿ ಪ್ರತಿವಾದಿ ಸಂಖ್ಯೆ 5 ಆಗಿ ಸೇರಿಸಲಾಗಿದೆ.

ಪ್ರಕರಣದ ಹಿನ್ನಲೆ

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ವಿವಿಧ ಸರ್ವೆ ಸಂಖ್ಯೆಗಳಲ್ಲಿ (164/2, 163/3, 161/7 ಮತ್ತು 160) ನಕ್ಷೆಯ ನಿಯಮಗಳನ್ನು ಮೀರಿ ಕೆಲವು ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಶೇಷವಾಗಿ ಸರ್ವೆ ಸಂಖ್ಯೆ 150ರಲ್ಲಿ ಬೃಹತ್ ಪ್ರಮಾಣದ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ದೂರಲಾಗಿದೆ. ಸಾರ್ವಜನಿಕ ಭೂಮಿಯನ್ನು ಕಾನೂನುಬಾಹಿರವಾಗಿ ಆಕ್ರಮಿಸಿಕೊಳ್ಳಲಾಗಿದೆ ಎಂಬ ಸರ್ಕಾರದ ವಾದವನ್ನು ಮಾನ್ಯ ಮಾಡಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ಈ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ (PIL) ವಿಚಾರಣೆ ನಡೆಸಿತ್ತು. ಈ ವೇಳೆ ಒತ್ತುವರಿ ಮಾಡಿರುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. 

ಹೈಕೋರ್ಟ್ ನೀಡಿದ ಈ ಆದೇಶದ ಅನ್ವಯ, ಬೆಂಗಳೂರು ಮಹಾನಗರ ಕಾರ್ಯಪಡೆ (BMTF) ಪೊಲೀಸರು ಶ್ರೀ ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಹಾಗೂ ತನಿಖೆಗೆ ತಡೆ ನೀಡುವಂತೆ ಕೋರಿ ಅರ್ಜಿದಾರರು ಈಗ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.