ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಲ್ಲೇಶ್ವರಂನಲ್ಲಿ ₹5.5 ಕೋಟಿ ವೆಚ್ಚದ ಪಾದಚಾರಿ ಸುರಂಗ ಮಾರ್ಗ ನಿರ್ಮಾಣವನ್ನು ಘೋಷಿಸಿದ್ದಾರೆ. ಇದರೊಂದಿಗೆ, ರಾಮೋಹಳ್ಳಿ ಗೇಟ್ ಅಂಡರ್ಬ್ರಿಡ್ಜ್, ಕಂಟೋನ್ಮೆಂಟ್ ಮತ್ತು ಯಶವಂತಪುರ ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು (ಜು.7): ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದಲ್ಲಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕಾಗಿ ₹5.5 ಕೋಟಿ ವೆಚ್ಚದ ಪಾದಚಾರಿ ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತದೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ರೈಲ್ವೆ ಹಳಿಗಳನ್ನು ದಾಟುವ ವೇಳೆ ಸಂಭವಿಸುವ ಅಪಘಾತಗಳನ್ನು ತಡೆಯುವ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಯೋಜನೆಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ. 5 ಮೀಟರ್ ಅಗಲ ಹಾಗೂ 2.65 ಮೀಟರ್ ಎತ್ತರದಲ್ಲಿ ನಿರ್ಮಾಣವಾಗಲಿರುವ ಈ ಸಬ್ವೇಯಿಂದಾಗಿ ಮಲ್ಲೇಶ್ವರಂ, ಶೇಷಾದ್ರಿಪುರಂ, ಶ್ರೀರಾಮಪುರಂ ಮತ್ತು ಓಕಳಿಪುರಂ ನಿವಾಸಿಗಳಿಗೆ ಭಾರಿ ಅನುಕೂಲವಾಗಲಿದೆ. ಸಾರ್ವಜನಿಕರು ರೈಲ್ವೆ ಹಳಿಗಳ ಮೇಲೆ ಅಕ್ರಮವಾಗಿ ಓಡಾಡುವುದನ್ನು ಇದು ತಪ್ಪಿಸಲಿದ್ದು, ಪಾದಚಾರಿಗಳ ಸುರಕ್ಷತೆಯನ್ನು ಗಣನೀಯವಾಗಿ ಸುಧಾರಿಸಲಿದೆ.
ಶೀಘ್ರದಲ್ಲೇ ರಾಮೋಹಳ್ಳಿ ಗೇಟ್ ಅಂಡರ್ಬ್ರಿಡ್ಜ್ ಪೂರ್ಣ
ಸಚಿವ ವಿ. ಸೋಮಣ್ಣ ಅವರು "ಕುಂಬಳಗೋಡು ಸಮೀಪದ ರಾಮೋಹಳ್ಳಿ ಗೇಟ್ ಬಳಿ ನಿರ್ಮಾಣವಾಗುತ್ತಿರುವ ರಸ್ತೆ ಕೆಳಸೇತುವೆ (Underbridge) ಕಾಮಗಾರಿ ಅತ್ಯಂತ ವೇಗವಾಗಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಲೋಕಾರ್ಪಣೆಯಾಗುವ ನಿರೀಕ್ಷೆಯಿದೆ. ರೈಲ್ವೆ ಮೇಲ್ಸೇತುವೆ (Overbridge) ಮತ್ತು ಕೆಳಸೇತುವೆ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ ವೇಗವಾಗಿ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವೇ ಇದರ ಸಂಪೂರ್ಣ ವೆಚ್ಚವನ್ನು ಭರಿಸುತ್ತಿದೆ" ಎಂದಿದ್ದಾರೆ.
ಬೆಂಗಳೂರು ರೈಲ್ವೆ ಮೂಲಸೌಕರ್ಯಕ್ಕೆ ಹೊಸ ವೇಗ
ರಾಜ್ಯದ ರೈಲ್ವೆ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ನೀಡಿದ ಸಚಿವರು, ಅಂದಾಜು ₹485 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಮರುಅಭಿವೃದ್ಧಿ ಕಾಮಗಾರಿ ಹಾಗೂ ಯಶವಂತಪುರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿಗಳು ನಿಗದಿತ ವೇಳಾಪಟ್ಟಿಯಂತೆಯೇ ಸಾಗುತ್ತಿವೆ ಎಂದರು.
ಇದರೊಂದಿಗೆ, ಯಲಹಂಕದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಿಸಲು ಯೋಜಿಸಲಾಗಿದೆ. ಇನ್ನುಳಿದಂತೆ ತುಮಕೂರು-ದಾವಣಗೆರೆ ಹಾಗೂ ರಾಯದುರ್ಗ-ತುಮಕೂರು ರೈಲು ಮಾರ್ಗ ಯೋಜನೆಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ. ಹೊಸಕೋಟೆ, ನರಸಾಪುರ ಮತ್ತು ವೇಮಗಲ್ ಮೂಲಕ ಬೆಂಗಳೂರು ಹಾಗೂ ಕೋಲಾರವನ್ನು ಸಂಪರ್ಕಿಸುವ ಹೊಸ ರೈಲು ಮಾರ್ಗದ ಪ್ರಸ್ತಾಪವೂ ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.


