ಮಾಜಿ ಶಾಸಕ ದತ್ತು ಹಕ್ಯಾಗೋಳ ಅವರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಕಗಲಾ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. 

ಚಿಕ್ಕೋಡಿ :  ಚಿಕ್ಕೋಡಿ ವಿಧಾನಸಭೆ ಮತ ಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಅವರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಕಗಲಾ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೈಕ್‌ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟರು. ಶಾಸಕರೊಂದಿಗೆ ಇದ್ದ ಕೇರೂರ ಗ್ರಾಮದ ಸುರೇಶ ಈರಪ್ಪ ಗಡೇಕಾರ (50) ಕೂಡ ಸಾವನ್ನಪ್ಪಿದ್ದಾರೆ. ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದವರಾದ, ದತ್ತು ಹಕ್ಯಾಗೋಳ ಶುಕ್ರವಾರ ಬೆಳಗ್ಗೆ 11.30ರ ಸುಮಾರಿಗೆ ಸ್ವ-ಗ್ರಾಮದಿಂದ ಹಿಟ್ನಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟರು. ದತ್ತು ಹಕ್ಯಾಗೋಳ ಕಳೆದ 2004ರಿಂದ 2008ರವರಿಗೆ ಚಿಕ್ಕೋಡಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಬಡ ಕುಟುಂಬದಲ್ಲಿ ಹುಟ್ಟಿದ ದತ್ತು ಹಕ್ಯಾಗೋಳ ಅವರು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಗರಡಿಯಲ್ಲಿ ಬೆಳೆದವರು. 1998ರಲ್ಲಿ ಕೇರೂರ ಜಿಲ್ಲಾ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ದತ್ತು ಹಕ್ಯಾಗೋಳ ಜಿಲ್ಲಾ ಪಂಚಾಯತಿ ಸದಸ್ಯರಾಗಿ, ಶಾಸಕರಾಗಿ ಆಯ್ಕೆಯಾದರೂ ಗುಡಿಸಲಿನಲ್ಲಿ ಸಾಮಾನ್ಯ ವ್ಯಕ್ತಿಯಂತೆ ಜೀವನ ಕಳೆದಿದ್ದರು. ಶಾಸಕರಾದ 2 ವರ್ಷದ ನಂತರ ಕೇರೂರ ಗ್ರಾಮದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.