ಅಮೆರಿಕ ಮೂಲದ ಸ್ಯಾನ್ಸನ್ ಗ್ರೂಪ್ನ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಮಂಡ್ಯದಲ್ಲಿ 100 ಎಕರೆಗೂ ಹೆಚ್ಚು ಸರ್ಕಾರಿ ಜಾಗ ಲಭ್ಯವಿರುವುದನ್ನು ಗುರುತಿಸಲಾಗಿದೆ. ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರವು ಕೆಐಎಡಿಬಿಗೆ ಸೂಚನೆ ನೀಡಿದೆ.
ಮಂಡ್ಯ: ಅಮೆರಿಕ ಮೂಲದ ಸ್ಯಾನ್ಸನ್ ಗ್ರೂಪ್ನ ಸೆಮಿ ಕಂಡಕ್ಟರ್ ಫ್ಯಾಬ್ರಿಕೇಷನ್ ಯೂನಿಟ್ ಸ್ಥಾಪನೆಗೆ ನೂರು ಎಕರೆಗಿಂತಲೂ ಹೆಚ್ಚಿನ ಸರ್ಕಾರಿ ಜಾಗ ಲಭ್ಯವಿರುವುದಾಗಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯಿಂದ ಕೆಐಎಡಿಬಿ ಸಿಇಒ ಅವರಿಗೆ ಪತ್ರ ರವಾನಿಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ 100 ಎಕರೆ ಬಯಲು ಭೂಮಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಯೂನಿಟ್ ಸ್ಥಾಪನೆಗೆ ಸಿದ್ಧಪಡಿಸಿದ ಕೈಗಾರಿಕಾ ಭೂಮಿ ಲಭ್ಯವಿಲ್ಲವೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ತಿಳಿಸಿದ್ದರು.
ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಅವರ ಪತ್ರವನ್ನು ಉಲ್ಲೇಖಿಸಿ ಕೆಐಎಡಿಬಿ ಸಿಇಒ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ರವಾನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎ.ಎಸ್.ಗಣೇಶ್ ಅವರು ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಸರ್ಕಾರಿ ಭೂಮಿ ಲಭ್ಯವಿದ್ದರೆ ಸ್ವಾಧೀನಕ್ಕೆ ಜರೂರು ಕ್ರಮ ವಹಿಸುವಂತೆ ಕೆಐಎಡಿಬಿ ಸಿಇಒ ಅವರಿಗೆ ಪತ್ರ ಮೂಲಕ ಸೂಚಿಸಿದ್ದಾರೆ.
ಎಲ್ಲೆಲ್ಲೆ ಜಮೀನು ಇದೆ?
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿ ರಾಗಿಮುದ್ದನಹಳ್ಳಿ ಗ್ರಾಮದ ಸರ್ವೇ ನಂ. 81ರ ಸರ್ಕಾರಿ ಗೋಮಾಳದಲ್ಲಿ ಆಕಾರ್ಬಂದ್ನಂತೆ 110 ಎಕರೆ 9 ಗುಂಟೆ ಖರಾಬು ಜಮೀನಿದೆ. ಆರ್ಟಿಸಿಯಂತೆ 114-21 ಎಕರೆ ಜಮೀನಿದ್ದು 109.31 ಗುಂಟೆ ಜಮೀನು ಇದೆ ಎಂದು ಮಾಹಿತಿ ರವಾನಿಸಿದ್ದಾರೆ.
ಈ ಜಮೀನಿನಲ್ಲಿ 2005-06ನೇ ಸಾಲಿನಲ್ಲಿ ಅರಣ್ಯ ಇಲಾಖೆಯಿಂದ 5 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು ಬೆಳೆಸಲಾಗಿದೆ. ಅಲ್ಲದೆ, ಈ ಸರ್ಕಾರಿ ಜಮೀನಿಗೆ ಹೊಂದಿಕೊಂಡಂತೆ ಶ್ರೀರಂಗಪಟ್ಟಣ ತಾಲೂಕು ಕೆ.ಶೆಟ್ಟಿಹಳ್ಳಿ-2ರ ಹೋಬಳಿ ಸಿದ್ದಾಪುರ ಗ್ರಾಮದ ಸರ್ವೇ ನಂ.93ರಲ್ಲಿ 28 ಎಕರೆಗಿಂತಲೂ ಹೆಚ್ಚಿನ ಸರ್ಕಾರಿ ಹುಲ್ಲುಬನ್ನಿ ಜಮೀನಿದ್ದು ಅದರಲ್ಲಿ 3 ಎಕರೆ ಶ್ರೀರಂಗಪಟ್ಟಣ ತಾಲೂಕು ಪಂಚಾಯ್ತಿ ಹಾಗೂ ಆರಕ್ಷಕ ಇಲಾಖೆಗೆ 1 ಎಕರೆ ಭೂ ಮಂಜೂರಾತಿಯಾಗಿದೆ. ಉಳಿಕೆ 19 ಎಕರೆ 24 ಗುಂಟೆ ಲಭ್ಯವಿರುವುದಾಗಿ ವಿವರಿಸಿದ್ದರು.
ಈ ಎರಡೂ ಸರ್ವೆ ನಂಬರ್ಗಳ ಸರ್ಕಾರಿ ಜಮೀನುಗಳು ಬಿ-ಖರಾಬಿನಲ್ಲಿ ದಾಖಲಾಗಿದ್ದು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿದೆ. ಮೈಸೂರು ವಿಮಾನ ನಿಲ್ದಾಣ, ಹೆದ್ದಾರಿಯ ಟೋಲ್, ವಿದ್ಯುಚ್ಛಕ್ತಿ, ಕಾವೇರಿ ನೀರಿನ ವ್ಯವಸ್ಥೆ ಇದೆ ಎಂದು ಗಮನಕ್ಕೆ ತಂದಿದ್ದರು. ಇವೆಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸೆಮಿಕಂಡಕ್ಟರ್ ಯೋಜನೆಗೆ ಸರ್ಕಾರಿ ಭೂಮಿ ಖಾಲಿ ಇದ್ದರೆ ತ್ವರಿತವಾಗಿ ಸ್ವಾಧೀನಕ್ಕೆ ಕ್ರಮ ವಹಿಸುವಂತೆ ಹಸಿರು ನಿಶಾನೆ ತೋರಿದ್ದಾರೆ.
ಸಂಸದ ಯದುವೀರ್ ಮನವಿ
ಮೈಸೂರು ಮತ್ತು ಮಂಡ್ಯ ನಡುವೆ ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಯಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಮೈಸೂರು ಮತ್ತು ಮಂಡ್ಯದ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗವನ್ನರಸಿ ಬೆಂಗಳೂರು ಸೇರುವುದು ತಪ್ಪಲಿದೆ. ಆಟೋಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಡಿಪ್ಲೋಮಾ ಪದವೀಧರರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಯದುವೀರ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


