ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಮೇ.23): ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ದಾವೋಸ್‌ ಪ್ರವಾಸಕ್ಕೆ ತೆರಳುವ ಮುನ್ನ ಆರ್‌.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ತೆರಿಗೆ ಇಳಿಕೆ ಕುರಿತು ಪರಿಶೀಲಿಸುವ ಭರವಸೆ ನೀಡಿದರು.

Add Asianetnews Kannada as a Preferred SourcegooglePreferred

ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ಕೂಡ ತೆರಿಗೆ ಕಡಿತಗೊಳಿಸಿತ್ತು. ಹಾಗಾಗಿ ಮುಖ್ಯಮಂತ್ರಿಗಳ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಆದರೆ, ಮುಖ್ಯಮಂತ್ರಿಗಳು ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆಯೊ ಅಥವಾ ಅದಕ್ಕೂ ಮೊದಲೇ ಅನುಷ್ಠಾನಕ್ಕೆ ಬರುತ್ತದೆಯೊ ಎಂಬುದನ್ನು ಕಾದು ನೋಡಬೇಕು.

ವಿದೇಶಕ್ಕೆ ಹೋಗುವ ಮುನ್ನ ಸಿಎಂ ಮಹತ್ವದ ಆದೇಶ: ಅಷ್ಟ ದಿಕ್ಪಾಲಕರ ನೇಮಕ

ರಾಜ್ಯವೂ ಕಡಿಮೆ ಮಾಡಬೇಕು- ಬಿಎಸ್‌ವೈ: ಇದೇ ವೇಳೆ ಕೇಂದ್ರ ಸರ್ಕಾರವು ಮಾಡಿರುವಂತೆ ರಾಜ್ಯ ಸರ್ಕಾರವೂ ಪೆಟ್ರೋಲ್‌- ಡೀಸೆಲ್‌ ಮೇಲಿನ ಸುಂಕ ಕಡಿಮೆ ಮಾಡುವ ಮೂಲಕ ಜನರ ಮೇಲಿನ ಹೊರೆ ಮತ್ತಷ್ಟುತಗ್ಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಒತ್ತಾಯಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಂಕ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದರು.

ಈಗಾಗಲೇ ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡುವ ಮೂಲಕ ಬೆಲೆ ಕಡಿಮೆ ಮಾಡಿರುವುದು ಸ್ವಾಗತಾರ್ಹ. ಪೆಟ್ರೋಲ್‌ 9.5 ರು., ಡೀಸೆಲ್‌ 8 ರು. ಕಡಿಮೆ ಆಗಿದೆ. ಇದರಿಂದ ಸಾಮಾನ್ಯ ಜನರಿಗೆ ಅನುಕೂಲ ಆಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಪೆಟ್ರೋಲ್‌- ಡೀಸೆಲ್‌ ಮೇಲಿನ ಸುಂಕವನ್ನು ಕಡಿಮೆ ಮಾಡುವ ಮೂಲಕ ಮತ್ತಷ್ಟುಹೊರೆ ತಗ್ಗಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಖಡಕ್‌ ಸೂಚನೆ: ಮಳೆ ಹಾನಿ ತಡೆಗೆ 15 ದಿನ ರಜೆ ಕಟ್‌

ಮಹಾರಾಷ್ಟ್ರ, ಓಡಿಶಾ, ಕೇರಳದಲ್ಲಿ ತೆರಿಗೆ ಇಳಿಕೆ: ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ ಕೇರಳ, ಓಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್‌ 2 ರು.ನಷ್ಟು, ಡೀಸೆಲ್‌ 1 ರು.ನಷ್ಟುಅಗ್ಗವಾಗಿದೆ.