Asianet Suvarna News Asianet Suvarna News

ಬಜೆಟ್ ನಲ್ಲಿ ಜಲಸಂಪನ್ಮೂಲ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ; ಬಾಕಿ ನೀರಾವರಿ ಯೋಜನೆಗಳ ಪೂರ್ಣಕ್ಕೆ ಆದ್ಯತೆ

ಇಂದು ಮಂಡನೆಯಾದ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡಿದ್ದಾರೆ. 
 

karnataka budget 2024 cm Siddaramaiah gives importance to pending water resources irrigation projects anu
Author
First Published Feb 16, 2024, 4:36 PM IST

ಬೆಂಗಳೂರು (ಫೆ.16): ರಾಜ್ಯದಲ್ಲಿ ಈ ವರ್ಷ ಮಳೆ ಕಡಿಮೆ ಬಿದ್ದಿದೆ. ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಬರದ ಛಾಯೆ ಕಾಣಿಸಿಕೊಂಡಿದೆ. ಹೀಗಿರುವಾಗ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ಹಾಗೂ ಜಲಸಂಪನ್ಮೂಲ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ನೀರಾವರಿ ಯೋಜನೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಹಾಗಾದ್ರೆ ಜಲಸಂಪನ್ಮೂಲ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಏನೆಲ್ಲ ಸಿಕ್ಕಿದೆ? ಇಲ್ಲಿದೆ ಹೈಲೈಟ್ಸ್ .

*ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮ.
*ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಎಲ್ಲ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲಾಗುವುದರ ಜೊತೆಗೆ ಸಮತೋಲನಾ ಜಲಾಶಯದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. 
*ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ.
* ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ.
*ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜನೆ.
*ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆ ಕಾರ್ಯಗತಕ್ಕೆ ಆದ್ಯತೆ.

ಪ್ರತಿ ಜಿಲ್ಲೆಗಳಲ್ಲೂ ಡೇ-ಕೇರ್‌ ಕಿಮೋಥೆರಪಿ ಕೇಂದ್ರ, 7 ತಾಲೂಕುಗಳಲ್ಲಿ ಹೊಸ ಆಸ್ಪತ್ರೆ!

*ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಿಸುವ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧಾರ.
*ಈ ಸಾಲಿನಲ್ಲಿ ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯನ್ನು (ವಾಲ್ಮಿ) ಅನ್ನು Centre of Excellence in Water Management ಆಗಿ ಉನ್ನತೀಕರಿಸಲಾಗುವುದು.   
*ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು. 
*ಏತ ನೀರಾವರಿ ಯೋಜನೆಗಳಾದ ಬೂದಿಹಾಳ್-ಪೀರಾಪುರ ಹಂತ-1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ ಹಾಗೂ ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಮತ್ತು ಗುರುಮಿಠಕಲ್ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 
*ಪ್ರಗತಿಯಲ್ಲಿರುವ ಹೇಮಾವತಿ ಯೋಜನೆ ವೈನಾಲೆಯಡಿ 5.45 ಕಿ.ಮೀ ಉದ್ದದ ಹಾಗೂ ತುಮಕೂರು ಶಾಖಾ ನಾಲೆಯಡಿ 166.90 ಕಿ.ಮೀ. ಉದ್ದದ ನಾಲೆಯ ಆಧುನೀಕರಣ ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
*ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಯೋಜನೆ.
*ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟಿ ರೂ. ಮೊತ್ತದ ಯೋಜನೆ.
*ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆಯನ್ನು 970 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗುವುದು.
*ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ.

ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು

*7,280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕರ್ನಾಟಕ ನೀರಾವರಿ ನಿಗಮದಡಿ ವಿವಿಧ ಏತ ನೀರಾವರಿ ಯೋಜನೆಗಳು ಹಾಗೂ ಕೆರೆ ತುಂಬಿಸುವ ಯೋಜನೆಗಳ ಅನುಷ್ಠಾನ.
*ಕೃಷ್ಣಾ ಭಾಗ್ಯ ಜಲ ನಿಗಮದಡಿ ಏತ ನೀರಾವರಿ ಯೋಜನೆಗಳಾದ ಬಾಗಲಕೋಟೆ ಜಿಲ್ಲೆಯ ಕೆರೂರು, ವಿಜಯಪುರ ಜಿಲ್ಲೆಯ ಹೊರ್ತಿ-ರೇವಣಸಿದ್ದೇಶ್ವರ, ಚಿಮ್ಮಲಗಿ, ಮುಳವಾಡ, ಯಾದಗಿರಿ ಜಿಲ್ಲೆಯ ಭೀಮಾ ಪ್ಲಾಂಕ್, ಪ್ರಸಕ್ತ ಸಾಲಿನಲ್ಲಿ 3,779 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು. 
*ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು. 

ಸಣ್ಣ ನೀರಾವರಿಗೆ ಏನು?
*ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಂತಹ 115 ಕಾಮಗಾರಿಗಳನ್ನು 
200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. 
* 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ 2ನೇ  ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
*ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ, ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಬಳಿ ಏತ ನೀರಾವರಿ, ಚಿತ್ತಾಪುರ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ, ಸೊರಬ ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್, ಜೇವರ್ಗಿ ತಾಲ್ಲೂಕಿನಲ್ಲಿ ಬಾಂದಾರು ಹಾಗೂ ಕೆರೆ ತುಂಬಿಸುವ ಕಾಮಗಾರಿ ಮತ್ತು ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ/ ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆಗಳನ್ನು 850 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗುವುದು. 


 

Follow Us:
Download App:
  • android
  • ios