Asianet Suvarna News Asianet Suvarna News

ಕೃಷಿ, ಕೈಗಾರಿಕೆ ಉದ್ಯೋಗಕ್ಕೆ ಒತ್ತು ನೀಡಿದ ದೂರಗಾಮಿ ಬಜೆಟ್; ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪ್ರಸ್ತುತ 2024-25ನೇ ಸಾಲಿನ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದ್ದು,  ಇದೊಂದು ದೂರಗಾಮಿ ಬಜೆಟ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Union Budget 2024 emphasis on agriculture industrial and employment says Minister H D Kumaraswamy sat
Author
First Published Jul 23, 2024, 5:16 PM IST | Last Updated Jul 23, 2024, 5:16 PM IST

ನವದೆಹಲಿ (ಜು.23): ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ. ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್ ಆಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ ನಲ್ಲಿದೆ.

ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ.  ಬೆಂಗಳೂರು - ಚೆನ್ನೈ, ಹೈದರಾಬಾದ್ -ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ. ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ.

ಇನ್ನು ದೇಶದಲ್ಲಿ ಸಂಶೋಧನೆ, ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎನ್ನುವುದು ನನ್ನ ಭಾವನೆ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡನೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios