ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರಿ ನೌಕರರಿಂದ 200 ಕೋಟಿ
ಕೊರೋನಾ ನಿಯಂತ್ರಣ ಕಾರ್ಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 200 ಕೋಟಿ ರು. ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ| ಎಲ್ಲ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರ|
ಬೆಂಗಳೂರು(ಮಾ.27): ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ ಮೊತ್ತ 200 ಕೋಟಿ ರು.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ ಸುಮಾರು 200 ಕೋಟಿ ರು.ಗಳಾಗುತ್ತದೆ. ಈ ಮೊತ್ತವನ್ನು ಕೊರೋನಾ ನಿಯಂತ್ರಣ ಕಾರ್ಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಎಲ್ಲ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಾಕ್ಡೌನಾ? ಏನ್ ಹಾಗಂದ್ರೆ? ಏನೂ ಗೊತ್ತಾಗಲ್ಲ ಕೆ.ಆರ್. ಮಾರ್ಕೆಟ್ ಬಂದ್ರೆ!
ಪ್ರವಾಹ ಪರಿಸ್ಥಿತಿ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಈ ಹಿಂದೆಯೂ ರಾಜ್ಯದ ಜನರು ಸಂಕಷ್ಟದಲ್ಲಿದ್ದಾಗ ಸಂಘ ದೇಣಿಗೆ ನೀಡುವ ಮೂಲಕ ಪರಿಹಾರ ಕಾರ್ಯಗಳಿಗೆ ನೆರವಾಗಿದೆ. ಅದೇ ರೀತಿ ಪ್ರಸ್ತುತ ಎದುರಾಗಿರುವ ಕೊರೋನಾ ಸೋಂಕು ಪರಿಸ್ಥಿತಿ ನಿವಾರಣೆಗೆ 200 ಕೋಟಿ ರು. ದೇಣಿಗೆ ನೀಡಲು ನಿರ್ಧರಿಸಿರುವ ಹಣವನ್ನು ವೇತನದಿಂದ ಕಡಿತಗೊಳಿಸಿಕೊಂಡು ಬಳಸಿಕೊಳ್ಳಬೇಕು ಎಂದಿದ್ದಾರೆ.