ಕೊರೋನಾ ಆತಂಕ: 'ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯಲು ಬಿಡೋದಿಲ್ಲ'
ಕೇರಳ, ಕಾಸರಗೋಡು ಭಾಗದ ಎಲ್ಲ ರಸ್ತೆಗಳು ಬಂದ್| ನಮ್ಮಲ್ಲಿ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ: ಕಟೀಲ್| ಕೇರಳ ಸರ್ಕಾರ ನ್ಯಾಯಾಲಯದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ| ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ|
ಮಂಗಳೂರು(ಏ.03): ಯಾವುದೇ ಕಾರಣಕ್ಕೂ ಕೇರಳ ಗಡಿ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕೇರಳ, ಕಾಸರಗೋಡು ಭಾಗದ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ನಮ್ಮಲ್ಲಿ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಕೇರಳ ಸರ್ಕಾರ ನ್ಯಾಯಾಲಯದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ. ರಾಜ್ಯ ಸರ್ಕಾರದ ಈ ಪ್ರಯತ್ನದಿಂದ ಜಿಲ್ಲೆಯಲ್ಲಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದ್ಯ ಯಾವುದೇ ವಾಹನಗಳು ಕೇರಳದಿಂದ ಮಂಗಳೂರಿಗೆ ಬರುತ್ತಿಲ್ಲ. ಯಾವುದೇ ಕಾರಣಕ್ಕೂ ರಸ್ತೆ ತೆರವು ಮಾಡುವ ಪ್ರಶ್ನೆಯೇ ಇಲ್ಲ. ಅಲ್ಲದೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಜಿಲ್ಲೆಯ ರೋಗಿಗಳು ಮಾತ್ರ ಇರಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಈ ಜಿಲ್ಲೆಗೆ ಮಾತ್ರ ಸೀಮಿತ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ನೆರವು ಕೇಳಿದವನ ಮನೆಗೆ 2 ಗಂಟೇಲಿ ಅಕ್ಕಿ ಕಳುಹಿಸಿದ ಪ್ರಧಾನಿ ಮೋದಿ
ಈ ಮಧ್ಯೆ, ಕೊರೋನಾ ತಡೆಗಟ್ಟುವ ಹಿನ್ನಲೆಯಲ್ಲಿ ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಕೇರಳದಿಂದ ಬರುವ ವಾಹನಕ್ಕೆ ನಿರ್ಬಂಧ ಹೇರಿ ಬಂದ್ ಮಾಡಲಾಗಿದೆ. ಕೇರಳ ಗಡಿ ಬಂದ್ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ ಎಂದು ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಕೂಡ ತಿಳಿಸಿದ್ದಾರೆ.