ಕೊರೋನಾ ಆತಂಕ: 5000 ಮಾಸ್ಕ್, 1000 ಸ್ಯಾನಿಟೈಸರ್ ನೀಡಿದ ಮಾಜಿ ಸಿಎಂ HDK
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿಗೆ ಸಾಂಕೇತಿಕವಾಗಿ ಮಾಸ್ಕ್, ಸ್ಯಾನಿಟೈಸರ್ ಹಸ್ತಾಂತರಿಸಿದ ಮಾಜಿ ಸಿಎಂ ಕುಮಾಸಸ್ವಾಮಿ| ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆ| ಪೊಲೀಸ್ ಇಲಾಖೆಯ ಸಿಬ್ಬಂದಿಯೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ| ಪೊಲೀಸ್ ಇಲಾಖೆ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ 5000 ಮಾಸ್ಕ್ ಹಾಗೂ 1000 ಸಾನಿಟೈಸರ್ಗಳನ್ನು ಕೊಡುಗೆಯಾಗಿ ಎಚ್.ಡಿ.ಕುಮಾರಸ್ವಾಮಿ|
ರಾಮನಗರ(ಏ.01): ಕೊರೋನಾ ವೈರಸ್ ಭೀತಿಯ ನಡುವೆಯೂ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸುತ್ತಿರುವ ಪೊಲೀಸ್ ಇಲಾಖೆ, ಪೌರ ಕಾರ್ಮಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.
ನಗರದ ಜಿಲ್ಲಾ ಸಂಕೀರ್ಣಗಳ ಕಚೇರಿಯಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ತರುವಾಯ ಕುಮಾರಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಅವರಿಗೆ ಸಾಂಕೇತಿಕವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು.
ಕೊರೋನಾ ತಡೆಗೆ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಹೋಮ, ಹವನ!
ಲಾಕ್ಡೌನ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಪೊಲೀಸರಿಗೆ ಹೆಚ್ಚಾಗಿದೆ. ವಿರಾಮವಿಲ್ಲದೆ ಕರ್ತವ್ಯ ನಿರ್ವಹಿಸಬೇಕಾಗಿದೆ. ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಹೊಂದಿರಬೇಕಾಗಿದೆ. ಈ ಸಮಯದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಪೊಲೀಸರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾಗಿದೆ. ತಮ್ಮ ಕುಟುಂಬಗಳಿಂದ ದೂರ ಇದ್ದು, ಸಾರ್ವಜನಿಕರನ್ನು ರಕ್ಷಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.
ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆಯ ಸಿಬ್ಬಂದಿಯೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಈ ಸೂಕ್ಷ್ಮವನ್ನು ಅರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಇಲಾಖೆ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ 5000 ಮಾಸ್ಕ್ ಹಾಗೂ 1000 ಸಾನಿಟೈಸರ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಸಾರ್ವಜನಿಕರೊಡನೆ ನಿಕಟ ಸಂಪರ್ಕ ಹೊಂದಿರುವ ಚನ್ನಪಟ್ಟಣ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ತಮ್ಮದೇ ಆದ ಸೇವೆಯನ್ನು ಸಮಾಜಕ್ಕೆ ಒದಗಿಸುತ್ತಿದ್ದಾರೆ. ಸೋಂಕು ಹರಡುವ ಪರಿಸ್ಥಿತಿಯಲ್ಲೂ ಮಾಧ್ಯಮ ಪತ್ರಿನಿಧಿಗಳು ತಮ್ಮ ಓದುಗರಿಗೆ ಸುದ್ದಿ ಕೊಡುವ ಸಲುವಾಗಿ ಓಡಾಡಬೇಕಾಗಿದೆ ಎಂದು ಪತ್ರಕರ್ತರ ಬಗ್ಗೆಯೂ ಕಾಳಜಿವಹಿಸಿರುವ ಎಚ್.ಡಿ.ಕುಮಾರ ಸ್ವಾಮಿ ಜಿಲ್ಲಾ ಕೇಂದ್ರದಲ್ಲಿರುವ ಮಾಧ್ಯಮ ಪ್ರತಿನಿಧಿಗಳಿಗೂ ತಲಾ 100 ಮಾಸ್ಕ್ ಹಾಗೂ ಸ್ಯಾನಿಟೈಸರ್ಗಳನ್ನು ವಿತರಿಸಿದರು. ಚನ್ನಪಟ್ಟಣ ನಗರಸಭೆಯ ಪೌರ ಕಾರ್ಮಿಕರಿಗೂ ಜೆಡಿಎಸ್ವತಿಯಿಂದ ಮಾಸ್ಕ್ಗಳನ್ನು ಅವರು ವಿತರಣೆ ಮಾಡಿದರು.
ಕೊರೋನಾ ಭೀತಿ: ಮೈಸೂರಿನಲ್ಲಿ 2534 ಜನರ ಮೇಲೆ ನಿಗಾ
ಈ ವೇಳೆ ಕುಮಾರಸ್ವಾಮಿ ಮಾತನಾಡಿ, ರಾಮನಗರ ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗದಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ದಿಕ್ಕಿನಲ್ಲಿ ಶ್ರಮಿಸಿದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ, ತಳಮಟ್ಟದಲ್ಲಿ ದುಡಿಯುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದಿಯಾಗಿ ಕೊರೋನಾ ವೈರಾಣು ತಡೆಗಟ್ಟಲು ಶ್ರಮಿಸುತ್ತಿರುವ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ಬಣ್ಣಿಸಿದರು.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತಿರುವ ಪೊಲೀಸ್ ಇಲಾಖೆ, ನಗರದಲ್ಲಿ ಸ್ವಚ್ಛತೆ ಕಾಪಾಡುತ್ತಿರುವ ಪೌರ ಕಾರ್ಮಿಕರು ಹಾಗೂ ವೈರಸ್ ನ ಕುರಿತಾಗಿ ಜನ ಸಾಮಾನ್ಯರಿಗೆ ಅಗತ್ಯ ಮಾಹಿತಿ ಒದಗಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳು ಮುಂಜಾಗೃತ ಕ್ರಮಗಳನ್ನು ಅನುಸರಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.