ಕೊರೋನಾ ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ ವಿತರಿಸಲು ಕ್ರಮ| ಕಾರ್ಮಿಕ ಇಲಾಖೆ ಹಾಗೂ ರೆಡ್‌ಕ್ರಾಸ್‌ ಸಂಸ್ಥೆಗೆ ಡಿಸಿ ಕೃಷ್ಣ ಬಾಜಪೇಯಿ ಸೂಚನೆ| ಹಾವೇರಿ ಜಿಲ್ಲೆಯಲ್ಲಿರುವ 60 ಸಾವಿರ ಕಾರ್ಮಿಕರಿಗೆ ಕೊರೋನಾ ಸುರಕ್ಷತೆಗಾಗಿ ಮಾಸ್ಕ್‌, ಸೋಪು, ಸ್ಯಾನಿಟೆಸರ್‌ ಒಳಗೊಂಡು ಕಿಟ್‌ ವಿತರಿಸಲಾಗುವುದು| 

ಹಾವೇರಿ(ಮಾ.30): ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೋನಾ ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ರೆಡ್‌ಕ್ರಾಸ್‌ ಸಂಸ್ಥೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡ ಕೊರೋನಾ ವಾರಿಯ​ರ್ಸ್‌ ಹಾಗೂ ರೆಡ್‌ಕ್ರಾಸ್‌ ಸಂಸ್ಥೆಯ ಸ್ವಯಂ ಸೇವಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕ್ವಾರಂಟೈನ್‌ಗೆ ಮರ ಏರಿದರು!

ಕೊರೋನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಹಲವು ತಂಡಗಳನ್ನು ರಚಿಸಿದೆ. ಈ ತಂಡದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಹಾಗೂ ಕೊರೋನಾ ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕಾರ್ಮಿಕ ಇಲಾಖೆಗೆ ಅನುದಾನ ಬಿಡುಗಡೆಯಾಗಿದೆ. ಈ ಕುರಿತಂತೆ ಕಾರ್ಯಕ್ರಮ ಆಯೋಜಿಸಿ ಸರ್ಕಾರದ ಮಾರ್ಗಸೂಚಿಯಂತೆ ಸ್ವಯಂ ಸೇವಕರನ್ನು ಬಳಸಿಕೊಂಡು ಜಾಗೃತಿಯೊಂದಿಗೆ ಪರಿಕರಗಳನ್ನು ವಿತರಿಸಲು ಕ್ರಮವಹಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ನೋಂದಾಯಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೋನಾ ಸುರಕ್ಷತಾ ಕಿಟ್‌ ವಿತರಿಸಲು ಹಾಗೂ ಅವರಿಗೆ ಜಾಗೃತಿ ಮೂಡಿಸಲು 10 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅಂದಾಜು 60 ಸಾವಿರ ಕಾರ್ಮಿಕರು ಜಿಲ್ಲೆಯಲ್ಲಿದ್ದಾರೆ. ಈ ಕಾರ್ಮಿಕರಿಗೆ ಕೊರೋನಾ ಸುರಕ್ಷತೆಗಾಗಿ ಮಾಸ್ಕ್‌, ಸೋಪು, ಸ್ಯಾನಿಟೆಸರ್‌ ಒಳಗೊಂಡು ಕಿಟ್‌ ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ರೆಡ್‌ ಕ್ರಾಸ್‌ ಸಂಸ್ಥೆಯ ಅಧ್ಯಕ್ಷ ಸಂಜೀವ ನೀರಲಗಿ, ಕಾರ್ಯದರ್ಶಿ ಡಾ. ನಿಲೇಶ್‌, ಕಾರ್ಮಿಕ ಅಧಿಕಾರಿ ಕಲಾವತಿ ಸಾತೇನಹಳ್ಳಿ, ವಾರ್ತಾಧಿಕಾರಿ ಬಿ.ಆರ್‌. ರಂಗನಾಥ್‌, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ವಿವಿಧ ಸ್ವಯಂ ಸೇವಕರು ಇದ್ದರು.