ನಾಳೆ ಬಿಸಿಸಿಐ ಉನ್ನತ ಮಟ್ಟದ ಸಭೆ ನಡೆಸಲಿದೆ. ಈ ಸಭೆ ಬಳಿಕ ರೋಹಿತ್ ಶರ್ಮಾ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರ ಬೀಳುವ ಸಾಧ್ಯತೆ ಇದೆ. ಜೊತೆಗೆ ನಾಳಿನ ಸಭೆಯಲ್ಲಿ ಒಟ್ಟು ಐದು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಟೀಮ್ ಇಂಡಿಯಾದ ಪ್ರದರ್ಶನ, ಪ್ರಮುಖ ಆಟಗಾರರ ಭವಿಷ್ಯ ಮತ್ತು ಮುಂಬರುವ ದೊಡ್ಡ ಟೂರ್ನಿಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಮುಖ್ಯವಾಗಿ ರೋಹಿತ್ ಶರ್ಮಾ ಅವರ ಮುಂದಿನ ಹಾದಿಯ ಬಗ್ಗೆ ಈ ಸಭೆಯಲ್ಲಿ ಸ್ಪಷ್ಟನೆ ಸಿಗುವ ಸಾಧ್ಯತೆಯಿದೆ.

ಯಾರೆಲ್ಲಾ ಭಾಗಿ?

ಮುಂಬೈನಲ್ಲಿ ನಡೆಯಲಿರುವ ಈ ಹೈ-ಲೆವೆಲ್ ಸಭೆಯಲ್ಲಿ ಬಿಸಿಸಿಐನ ಉನ್ನತ ಅಧಿಕಾರಿಗಳ ಜೊತೆಗೆ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಭಾಗವಹಿಸಲಿದ್ದಾರೆ.

ಸಭೆಯ ಅಜೆಂಡಾಗಳು

ರೋಹಿತ್ ಶರ್ಮಾ ಭವಿಷ್ಯ: 2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡಲಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಈ ಸಭೆಯಲ್ಲಿ ಚರ್ಚೆಯಾಗಲಿದೆ. ಹಲವು ವರದಿಗಳ ಪ್ರಕಾರ ರೋಹಿತ್ 2027ರ ವಿಶ್ವಕಪ್ ಪ್ಲಾನ್‌ನಲ್ಲಿ ಇಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಪ್ರದರ್ಶನದ ವಿಮರ್ಶೆ: ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಗಳಲ್ಲಿ ಭಾರತ ಅನುಭವಿಸಿದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಜಿಂಬಾಬ್ವೆ ಮತ್ತು ಶ್ರೀಲಂಕಾ ವಿರುದ್ಧದ ಸರಣಿ ಗೆಲುವಿನ ಬಗ್ಗೆಯೂ ಚರ್ಚೆಯಾಗಲಿದೆ.

ಇಂಜುರಿ ಸಮಸ್ಯೆ: ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಪ್ರಮುಖ ಆಟಗಾರರ ಫಿಟ್ನೆಸ್ ಮತ್ತು ಪದೇ ಪದೇ ಆಗುತ್ತಿರುವ ಗಾಯಗಳ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

ಮುಂದಿನ ಸರಣಿಗಳು: ನ್ಯೂಜಿಲೆಂಡ್ ಪ್ರವಾಸ, ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು 2027ರ ವಿಶ್ವಕಪ್‌ಗೆ ರೋಡ್ ಮ್ಯಾಪ್ ಸಿದ್ಧಪಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ.

ಅಗರ್ಕರ್ ಭವಿಷ್ಯದ ಬಗ್ಗೆಯೂ ಚರ್ಚೆ?

ಕೇವಲ ಆಟಗಾರರಲ್ಲದೆ, ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವರ ಕಾರ್ಯವೈಖರಿ ಮತ್ತು ಅವರ ಭವಿಷ್ಯದ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಬಿಸಿಸಿಐ ಅಧಿಕೃತವಾಗಿ ಯಾವುದೇ ಅಜೆಂಡಾವನ್ನು ಬಹಿರಂಗಪಡಿಸಿಲ್ಲವಾದರೂ, ಈ ಸಭೆಯು ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ದಿಕ್ಸೂಚಿಯಾಗಲಿದೆ.