* ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ* ಇಂಗ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಒಂದು ರನ್ ಗಳಿಸಿ ವಿಕೆಟ್ ಒಪ್ಪಿಸಿದ ಕೊಹ್ಲಿ* ಕೊಹ್ಲಿ, ಯುವಕರಿಗೆ ಸ್ಥಾನ ಬಿಟ್ಟುಕೊಡಲಿ ಎಂದ ಪಾಕ್ ಮಾಜಿ ವೇಗಿ

ಕರಾಚಿ(ಜು.10): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಈಗಲೂ ಸಹಾ ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್‌ಗಳ ಪೈಕಿ ಒಬ್ಬರೆನಿಸಿಕೊಂಡಿದ್ದಾರೆ. ಹೀಗಿದ್ದೂ ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುವ ಮೂಲಕ ಕಿಂಗ್ ಕೊಹ್ಲಿ ಟೀಕೆಗೆ ಗುರಿಯಾಗಿದ್ದಾರೆ. ಕಳೆದೆರಡು ತಿಂಗಳ ಹಿಂದಷ್ಟೇ ಮುಕ್ತಾಯವಾದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳೆ ಆರ್‌ಸಿಬಿ ತಂಡದ ಪರ ವಿರಾಟ್ ಕೊಹ್ಲಿ ಮೂರು ಬಾರಿ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದ್ದರು. ವಿರಾಟ್ ಕೊಹ್ಲಿ ಪ್ರದರ್ಶನ ಕಂಡು ಹಲವು ಕ್ರಿಕೆಟ್ ವಿಶ್ಲೇಷಕರು ಅವರು ಕೆಲಕಾಲ ವಿಶ್ರಾಂತಿ ಪಡೆಯುವುದು ಒಳಿತು. ಯಾಕೆಂದರೇ ಅವರು ಸತತವಾಗಿ ಕ್ರಿಕೆಟ್ ಆಡಿ ದಣಿದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದರು. 

ಹೀಗಾಗಿ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಿಂದ ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಲಾಗಿತ್ತು. ಇನ್ನು ಕೆಲಕಾಲ ಬಿಡುವಿನ ಬಳಿಕ ಎಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ದ ನಡೆದ 5ನೇ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್‌ಗಳಿಂದ ವಿರಾಟ್ ಕೊಹ್ಲಿ ಕೇವಲ 31 ರನ್‌ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ, ಎರಡನೇ ಟಿ20 ಪಂದ್ಯದಲ್ಲಿ ಕೇವಲ ಒಂದು ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದ್ದಾರೆ. 

ಇಲ್ಲಿನ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಎರಡನೇ ಟಿ20 ಪಂದ್ಯದ ವೇಳೆ ವಿರಾಟ್ ಕೊಹ್ಲಿ ಒಂದು ರನ್ ಬಾರಿಸಿ ರಿಚರ್ಡ್ ಗ್ಲೀಸನ್ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಡೇವಿಡ್ ಮಲಾನ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು. ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿಯವರ ಬ್ಯಾಡ್ ಫಾರ್ಮ್‌ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತಲೆನೋವು ಹೆಚ್ಚುವಂತೆ ಮಾಡಿದೆ.

ಕೊಹ್ಲಿಯವರ ದೀರ್ಘಕಾಲಿಕ ಬ್ಯಾಟಿಂಗ್ ಪ್ರದರ್ಶನವನ್ನು ಗಮನಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನೀಶ್ ಕನೇರಿಯಾ‌ (Danish Kaneria), ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ದೊಡ್ಡ ಭಾರವಾಗಿದ್ದಾರೆ. ಅವರು ಯುವ ಆಟಗಾರರಿಗೆ ದಾರಿ ಬಿಟ್ಟುಕೊಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ದೊಡ್ಡ ಆಟಗಾರರು ಉತ್ತಮ ಪ್ರದರ್ಶನ ತೋರದೇ ಹೋದಾಗ ಯುವ ಆಟಗಾರರು ಒಳ್ಳೆಯ ಪ್ರದರ್ಶನ ತೋರುತ್ತಿದ್ದಾರೆ. ಯುವ ಆಟಗಾರರು ಒಳ್ಳೆಯ ರೀತಿಯಲ್ಲಿ ಪ್ರದರ್ಶನ ತೋರುತ್ತಿದ್ದಾರೆ. ಹಿರಿಯ ಆಟಗಾರರು ತಾವು ತಂಡಕ್ಕೆ ಭಾರವಾಗುತ್ತಿದ್ದೇವೆ ಎಂದೆನಿಸಿದಾಗ ಯುವ ಆಟಗಾರರಿಗೆ ಅವಕಾಶ ಮಾಡಿಕೊಡಬೇಕು. ಹೀಗಾಗಿ ಒಂದೋ ವಿರಾಟ್ ಕೊಹ್ಲಿ ಯುವ ಆಟಗಾರರಿಗೆ ಅವಕಾಶ ನೀಡಬೇಕು ಇಲ್ಲವೇ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಫಾರ್ಮ್‌ಗೆ ಮರಳಬೇಕು ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ದಾನೀಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

Ind vs Eng ಇಂಗ್ಲೆಂಡ್ ಎದುರಿನ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ?

15ನೇ ಆವೃತ್ತಿಯ ಐಪಿಎಲ್ (IPL) ಟೂರ್ನಿಗೂ ಮುನ್ನವೇ ವಿರಾಟ್ ಕೊಹ್ಲಿ, ಫಾರ್ಮ್‌ ಸಮಸ್ಯೆ ಎದುರಿಸುತ್ತಿದ್ದರು. ನಾನಾಗಲೇ ವಿರಾಟ್ ಕೊಹ್ಲಿ, ಐಪಿಎಲ್‌ನಿಂದ ಹೊರಗುಳಿದು ವಿಶ್ರಾಂತಿ ಪಡೆಯಲು ತಿಳಿಸಿದ್ದೆ ಎಂದು ಕನೇರಿಯಾ ಹೇಳಿದ್ದಾರೆ. ಅವರು ಐಪಿಎಲ್‌ನಿಂದ ಹಿಂದೆ ಸರಿದು, ಎರಡು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯಬಹುದಿತ್ತು. ಆದರೆ ಆ ಅವಕಾಶವನ್ನು ಅವರು ವ್ಯರ್ಥ ಮಾಡಿಕೊಂಡರು. ಈಗ ಭಾರತವು ಮುಂಬರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಭಾರತ ತಂಡವನ್ನು ಕಟ್ಟುತ್ತಿದೆ. ಆದರೆ ಈ ಸಂದರ್ಭದಲ್ಲಿ ಅವರು ಭಾರತ ತಂಡಕ್ಕೆ ಹೊರೆಯಾಗಿದ್ದಾರೆ. ದೊಡ್ಡ ಆಟಗಾರರಿಲ್ಲದೇ ಕಣಕ್ಕಿಳಿದರೇ ಅದು ಭಾರತವೇ ಆಗಲಿ ಅಥವಾ ಪಾಕಿಸ್ತಾನವೇ ಆಗಲಿ, ಉತ್ತಮ ಪ್ರದರ್ಶನ ಹೊರಹೊಮ್ಮಲು ಸಾಧ್ಯವಿಲ್ಲ ಎಂದು ದಾನೀಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.