ಚೊಚ್ಚಲ ಬಾರಿಗೆ ಟೀಂ ಇಂಡಿಯಾ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ..!
ಐರ್ಲೆಂಡ್ ಎದುರಿನ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾದ ಹಾರ್ದಿಕ್ ಪಾಂಡ್ಯ
ಐರ್ಲೆಂಡ್ ಎದುರು 2 ಪಂದ್ಯಗಳ ಟಿ20 ಸರಣಿಯನ್ನಾಡಲಿರುವ ಟೀಂ ಇಂಡಿಯಾ
ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ರಾಹುಲ್ ತ್ರಿಪಾಠಿ
ನವದೆಹಲಿ(ಜೂ.16): ಜೂನ್ 26, 28ಕ್ಕೆ ನಿಗದಿಯಾಗಿರುವ ಐರ್ಲೆಂಡ್ ವಿರುದ್ದದ 2 ಟಿ20 ಪಂದ್ಯಗಳ ಸರಣಿಗೆ 17 ಮಂದಿ ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು (Indian Cricket Team) ಪ್ರಕಟಿಸಲಾಗಿದ್ದು, ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಟೀಂ ಇಂಡಿಯಾ ನಾಯಕರಾಗಿ ನೇಮಕಗೊಂಡಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯ. ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಉಪನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಮೊದಲ ಬಾರಿಗೆ ಟೀಂ ಇಂಡಿಯಾ ಸಾರಥ್ಯ ವಹಿಸಲು ಹಾರ್ದಿಕ್ ಪಾಂಡ್ಯ ಸಜ್ಜಾಗಿದ್ದಾರೆ.
ಇನ್ನು ಟೀಂ ಇಂಡಿಯಾ ಅನುಭವಿ ವೇಗಿ ಭುವನೇಶ್ವರ್ ಕುಮಾರ್, ಐರ್ಲೆಂಡ್ ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ರಾಹುಲ್ ತ್ರಿಪಾಠಿ (Rahul Tripathi) ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಕೇರಳ ಮೂಲದ ಸಂಜು ಸ್ಯಾಮ್ಸನ್ ಟೀಂ ಇಂಡಿಯಾಗೆ ವಾಪಾಸ್ಸಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ರಿಷಭ್ ಪಂತ್ (Rishabh Pant) ಹಾಗೂ ಶ್ರೇಯಸ್ ಅಯ್ಯರ್ (Shreyas Iyer) ಜುಲೈ 01ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಎದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಈ ಇಬ್ಬರು ಆಟಗಾರರನ್ನು ಐರ್ಲೆಂಡ್ ಎದುರಿನ ಟಿ20 ಸರಣಿಗೆ ಪರಿಗಣಿಸಿಲ್ಲ.
ಗಾಯದಿಂದ ಚೇತರಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತೆ ಟೀಂ ಇಂಡಿಯಾಗೆ(Team India) ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಪಾಲ್ಗೊಂಡಿರುವ ತಂಡವನ್ನೇ ಐರ್ಲೆಂಡ್ ಎದುರಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಅಕ್ಷರ್ ಪಟೇಲ್, ಋತುರಾಜ್ ಗಾಯಕ್ವಾಡ್, ಉಮ್ರಾನ್ ಮಲಿಕ್, ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Ind vs SA ಚಾಹಲ್, ಹರ್ಷಲ್ ದಾಳಿಗೆ ದಕ್ಷಿಣ ಆಫ್ರಿಕಾ ಬ್ರೇಕ್ ಫೇಲ್, ಭಾರತಕ್ಕೆ ಜಯದ ಥ್ರಿಲ್!
ಐರ್ಲೆಂಡ್ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ
ಹಾರ್ದಿಕ್ ಪಾಂಡ್ಯ(ನಾಯಕ), ಭುವನೇಶ್ವರ್ ಕುಮಾರ್(ಉಪನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್.
ಐರ್ಲೆಂಡ್ ಟಿ20: ಭಾರತ ತಂಡಕ್ಕೆ ಲಕ್ಷ್ಮಣ್ ಕೋಚ್
ನವದೆಹಲಿ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ) ಮುಖ್ಯಸ್ಥ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮುಂದಿನ ತಿಂಗಳು ನಡೆಯಲಿರುವ ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಸೀತಾಂಶು ಕೋಟಕ್, ಸಾಯಿರಾಜ್ ಬಹುತುಲೆ ಮತ್ತು ಮುನೀಷ್ ಬಾಲಿ ಅವರನ್ನು ಕ್ರಮವಾಗಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ನೇಮಿಸಲಾಗಿದೆ.
ಇದೇ ಸಮಯದಲ್ಲಿ ಭಾರತ ಟೆಸ್ಟ್ ತಂಡ ಇಂಗ್ಲೆಂಡ್ನಲ್ಲಿ ಜು.1ರಿಂದ ಆರಂಭಗೊಳ್ಳಲಿರುವ ಏಕೈಕ ಟೆಸ್ಟ್ಗಾಗಿ ಅಭ್ಯಾಸ ನಡೆಸಲಿದ್ದು, ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ತಂಡದೊಂದಿಗೆ ಇಂಗ್ಲೆಂಡ್ಗೆ ತೆರಳಲಿದ್ದಾರೆ. ಹೀಗಾಗಿ ಜೂ. 26, 28ರ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಲಕ್ಷ್ಮಣ್ ರನ್ನು ಕೋಚ್ ಆಗಿ ನೇಮಿಸಲಾಗಿದೆ.