ಟೀಂ ಇಂಡಿಯಾ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ; ಉಭಯ ತಂಡದಲ್ಲೂ ಮಹತ್ವದ ಬದಲಾವಣೆ..!
ಭಾರತ-ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮೀರ್ಪುರ ಆತಿಥ್ಯ
ಟಾಸ್ ಗೆದ್ದ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಆಯ್ಕೆ
ಬಾಂಗ್ಲಾದೇಶ ತಂಡದಲ್ಲಿ 2 ಹಾಗೂ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ
ಮೀರ್ಪುರ(ಡಿ.22): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಬಾಂಗ್ಲಾದೇಶ ತಂಡವು ಎರಡು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದರೇ, ಟೀಂ ಇಂಡಿಯಾ ಕೂಡಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಇಲ್ಲಿ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ 118 ರನ್ಗಳ ಆಘಾತಕಾರಿ ಸೋಲು ಅನುಭವಿಸಿರುವ ಬಾಂಗ್ಲಾದೇಶ ತಂಡದಲ್ಲಿ ಎರಡು ಮಹತ್ತರ ಬದಲಾವಣೆ ಮಾಡಲಾಗಿದ್ದು, ಯಾಸಿರ್ ಅಲಿ ಬದಲಿಗೆ ಮೊಮಿನುಲ್ ಹಕ್ ತಂಡ ಕೂಡಿಕೊಂಡಿದ್ದಾರೆ. ಇನ್ನು ವೇಗಿ ಎಬೊದತ್ ಹೊಸೈನ್ ಬದಲಿಗೆ ಟಸ್ಕಿನ್ ಅಹಮದ್ ಬಾಂಗ್ಲಾದೇಶ ಆಡುವ ಹನ್ನೊಂದರ ಬಳಗ ಸೇರಿಕೊಂಡಿದ್ದಾರೆ.
12 ವರ್ಷಗಳ ಬಳಿಕ ಉನಾದ್ಕತ್ ಟೆಸ್ಟ್ ತಂಡ ಸೇರ್ಪಡೆ: ಹೌದು, ಭಾರತ ತಂಡದಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಂದು ಮಹತ್ತರ ಬದಲಾವಣೆ ಮಾಡಲಾಗಿದ್ದು, ಕುಲ್ದೀಪ್ ಯಾದವ್ ಬದಲಿಗೆ ಎಡಗೈ ವೇಗಿ ಜಯದೇವ್ ಉನಾದ್ಕತ್ ತಂಡ ಕೂಡಿಕೊಂಡಿದ್ದಾರೆ. ಉನಾದ್ಕತ್ 2010ರಲ್ಲಿ ಕೊನೆಯ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ ಮತ್ತೊಮ್ಮೆ ಉನಾದ್ಕತ್ ಭಾರತ ಟೆಸ್ಟ್ ತಂಡವನ್ನು ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಒಟ್ಟು 118 ಟೆಸ್ಟ್ ಪಂದ್ಯಗಳನ್ನಾಡಿದೆ.
Ind vs Ban: ಬಾಂಗ್ಲಾದೇಶ ಎದುರು ಟೆಸ್ಟ್ ಸರಣಿ ಕ್ಲೀನ್ಸ್ವೀಪ್ ಮಾಡುವ ವಿಶ್ವಾಸದಲ್ಲಿ ಟೀಂ ಇಂಡಿಯಾ
ತಂಡಗಳು ಹೀಗಿವೆ ನೋಡಿ
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೋ, ಝಾಕಿರ್ ಹಸನ್, ಮೊಮಿನುಲ್ ಹಕ್, ಲಿಟನ್ ದಾಸ್, ಮುಷ್ಫಿಕುರ್ ರಹೀಂ, ಶಕೀಬ್ ಅಲ್ ಹಸನ್(ನಾಯಕ), ನುರುಲ್ ಹಸನ್(ವಿಕೆಟ್ ಕೀಪರ್), ಮೆಹದಿ ಹಸನ್ ಮಿರಜ್, ತೈಜುಲ್ ಇಸ್ಲಾಂ, ಖಾಲಿದ್ ಅಹಮದ್, ಟಸ್ಕಿನ್ ಅಹಮದ್.
ಭಾರತ: ಕೆ ಎಲ್ ರಾಹುಲ್(ನಾಯಕ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನಾದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.