Ind vs Ban: ಬಾಂಗ್ಲಾ ಎದುರಿನ 3ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಕೂಡಿಕೊಂಡ ಸ್ಟಾರ್ ಬೌಲರ್..!
ಭಾರತ-ಬಾಂಗ್ಲಾದೇಶ ನಡುವಿನ ಮೂರನೇ ಪಂದ್ಯಕ್ಕೆ ಕ್ಷಣಗಣನೆ
ಮೂರನೇ ಪಂದ್ಯಕ್ಕೆ ಭಾರತ ತಂಡ ಕೂಡಿಕೊಂಡ ಕುಲ್ದೀಪ್ ಯಾದವ್
ಈಗಾಗಲೇ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಬಾಂಗ್ಲಾದೇಶ
ಢಾಕಾ(ಡಿ.09): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಸೋಲುವ ಮೂಲಕ ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ಪಾಲಿಗೆ ಮೂರನೇ ಏಕದಿನ ಪಂದ್ಯವು ಪ್ರತಿಷ್ಠೆಯ ಕದನವಾಗಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದ್ದು, ತಾರಾ ಲೆಗ್ ಸ್ಪಿನ್ನರ್ ಕುಲ್ದೀಪ್ ಯಾದವ್ ಭಾರತ ತಂಡ ಕೂಡಿಕೊಂಡಿದ್ದಾರೆ.
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವು ಡಿಸೆಂಬರ್ 10ರಂದು ಚಟ್ಟೋಗ್ರಾಮ್ನ ಝಹೂರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ಜರುಗಲಿದೆ. ಭಾರತ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ಹೀಗಾಗಿ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಅನುಭವಿ ಲೆಗ್ ಸ್ಪಿನ್ನರ್ ಕುಲ್ದೀಪ್ ಯಾದವ್ಗೆ ಬುಲಾವ್ ನೀಡಲಾಗಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ವೇಗಿಗಳಾದ ದೀಪಕ್ ಚಹರ್ ಹಾಗೂ ಕುಲ್ದೀಪ್ ಸೆನ್ ಬಾಂಗ್ಲಾದೇಶ ಎದುರಿನ ಮೂರನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ದೀಪಕ್ ಚಹರ್, ಸ್ನಾಯು ಸೆಳೆತಕ್ಕೆ ಒಳಗಾಗಿ ಮೈದಾನ ತೊರೆದಿದ್ದರು. ಇನ್ನು ಕುಲ್ದೀಪ್ ಸೆನ್, ಬೆನ್ನು ನೋವಿನ ಸಮಸ್ಯೆಯಿಂದಾಗಿ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು
ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ, ಎರಡನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಕೈಬೆರಳಿನ ಗಾಯಕ್ಕೆ ಒಳಗಾಗಿದ್ದು, ಮೂರನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
Ind vs Ban: ಸತತ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೆ ಶಾಕ್, ಮತ್ತಿಬ್ಬರು ತಾರಾ ಆಟಗಾರರು ಔಟ್..?
ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಒಂದು ವಿಕೆಟ್ ರೋಚಕ ಜಯ ಸಾಧಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ 5 ರನ್ಗಳ ರೋಚಕ ಗೆಲುವು ಸಾಧಿಸುವ ಮೂಲ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಬಾಂಗ್ಲಾದೇಶ ತಂಡವು ಇದುವರೆಗೂ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಎದುರು ಸರಣಿ ಕ್ಲೀನ್ ಸ್ವೀಪ್ ಸಾಧಿಸಿಲ್ಲ. ಹೀಗಾಗಿ ಭಾರತ ಎದುರು ಮೂರನೇ ಪಂದ್ಯ ಗೆದ್ದು ಸರಣಿ ವೈಟ್ವಾಷ್ ಮಾಡುವ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ಟೀಂ ಇಂಡಿಯಾ ಕೊನೆಯ ಪಂದ್ಯದಲ್ಲಿ ಗೆದ್ದು ನೆಮ್ಮದಿಯ ನಿಟ್ಟುಸಿರು ಬಿಡಲು ಎದುರು ನೋಡುತ್ತಿದೆ.
ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:
ಕೆ ಎಲ್ ರಾಹುಲ್(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವಿಕೆಟ್ ಕೀಪರ್), ಶೆಹಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.