Asianet Suvarna News Asianet Suvarna News

T20 World Cup ಟೂರ್ನಿಯಲ್ಲಿ ಅಬ್ಬರಿಸಲು ಎದುರು ನೋಡುತ್ತಿದ್ದೇನೆಂದ ಸೂರ್ಯಕುಮಾರ್ ಯಾದವ್..!

* ದಕ್ಷಿಣ ಆಫ್ರಿಕಾ ಎದುರು ಟಿ20 ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ
*  ದಕ್ಷಿಣ ಆಫ್ರಿಕಾ ಎದುರು ಸರಣಿ ಶ್ರೇಷ್ಠ ಪ್ರಶಸ್ತಿ ಜಯಿಸಿದ ಸೂರ್ಯಕುಮಾರ್ ಯಾದವ್
* ಟಿ20 ವಿಶ್ವಕಪ್ ಸವಾಲು ಎದುರಿಸಲು ಸಜ್ಜಾಗಿರುವುದಾಗಿ ತಿಳಿಸಿದ ಸೂರ್ಯಕುಮಾರ್ ಯಾದವ್

Ind vs SA Suryakumar Yadav looking forward to ICC T20 World Cup 2022 kvn
Author
First Published Oct 5, 2022, 1:01 PM IST

ಇಂದೋರ್(ಅ.05): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಸೂರ್ಯಕುಮಾರ್ ಯಾದವ್, ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೂರ್ಯಕುಮಾರ್ ಯಾದವ್, ಹರಿಣಗಳ ಎದುರಿನ ಮೊದಲೆರಡು ಟಿ20 ಪಂದ್ಯಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿ ಗೆಲ್ಲುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು.

ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 49 ರನ್‌ಗಳ ಅಂತರದ ಸೋಲು ಅನುಭವಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, ನಾಣು ಸ್ಟ್ಯಾಟ್ಸ್‌ಮನ್‌ ಅಲ್ಲ, ಆದರೆ ನನ್ನ ಸ್ನೇಹಿತರ ವಾಟ್ಸ್‌ಅಪ್‌ ಮೂಲಕ ಕೆಲವೊಂದು ಅಂಕಿ-ಅಂಶಗಳನ್ನು ಕಳಿಸುತ್ತಲೇ ಇರುತ್ತಾರೆ ಎಂದು ಸೂರ್ಯ ಹೇಳಿದ್ದಾರೆ.

ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್, ತಾವು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಗ್ಗೆ ಹೆಚ್ಚಾಗಿ ಆಲೋಚಿಸಿಲ್ಲ. ಆದರೆ ಅಲ್ಲಿ ಎದುರಾಗುವ ಸವಾಲನ್ನು ಎದುರಿಸಲು ತುದಿಗಾಲಿನಲ್ಲಿ ನಿಂತಿರುವುದಾಗಿ ಹೇಳಿದ್ದಾರೆ.

ಮೊದಲೆರಡು ಟಿ20 ಪಂದ್ಯಗಳಲ್ಲಿ ಸ್ಪೋಟಕ ಅರ್ಧಶತಕ ಚಚ್ಚಿದ್ದ ಸೂರ್ಯಕುಮಾರ್ ಯಾದವ್, ಹರಿಣಗಳೆದುರಿನ ಮೂರನೇ ಟಿ20 ಪಂದ್ಯದಲ್ಲಿ ಅಬ್ಬರಿಸಲು ಸಾಧ್ಯವಾಗಿರಲಿಲ್ಲ. 5ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಸೂರ್ಯಕುಮಾರ್ ಯಾದವ್ ಕೇವಲ 6 ಎಸೆತಗಳಲ್ಲಿ 8 ರನ್ ಸಿಡಿಸಿ ಡ್ವೇನ್ ಪ್ರಿಟೋರಿಯಸ್‌ಗೆ ವಿಕೆಟ್‌ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. 

ಇನ್ನು ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಹೆಡ್‌ ಕೋಚ್ ರಾಹುಲ್ ದ್ರಾವಿಡ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯನ್ನು ಕೈವಶ ಮಾಡಿಕೊಂಡ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ದ್ರಾವಿಡ್‌, ''ಕಳೆದೆರಡು ಸರಣಿಗಳಲ್ಲೂ ಒಳ್ಳೆಯ ಫಲಿತಾಂಶ ಸಿಕ್ಕಿರುವುದು ಖುಷಿ ಕೊಟ್ಟಿದೆ. ಈ ಮಾದರಿಯ ಕ್ರಿಕೆಟ್‌ನಲ್ಲಿ ಕೊನೆಯ ಓವರ್‌ವರೆಗೂ ಸಾಗುವ ಪಂದ್ಯವನ್ನು ಗೆಲ್ಲಬೇಕಾದರೆ ಅದೃಷ್ಟವೂ ಬೇಕು. ಆ ಅದೃಷ್ಟ ಏಷ್ಯಾಕಪ್ ಟೂರ್ನಿಯಲ್ಲಿ ನಮಗೆ ಇರಲಿಲ್ಲ. ಆದರೆ ಆ ಅದೃಷ್ಟ ಆಸ್ಟ್ರೇಲಿಯಾದಲ್ಲಿ ಇರಲಿದೆ. ನಮ್ಮ ತಂಡದ ಒಟ್ಟಾರೆ ಪ್ರದರ್ಶನದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

Ind vs SA: ಶೂನ್ಯಕ್ಕೆ ವಿಕೆಟ್ ಒಪ್ಪಿಸಿ T20I ಕ್ರಿಕೆಟ್‌ನಲ್ಲಿ ಕುಖ್ಯಾತಿಗೆ ಭಾಜನರಾದ ರೋಹಿತ್ ಶರ್ಮಾ..!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್‌ಗೇರಲು ವಿಫಲವಾಗಿತ್ತು. ಆದರೆ ಇದಾದ ಬಳಿಕ ತವರಿನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ಅಕ್ಟೋಬರ್ 06ಕ್ಕೆ ಆಸ್ಟ್ರೇಲಿಯಾದತ್ತ ಪ್ರಯಾಣ ಬೆಳೆಸಲಿದೆ. ಇನ್ನೊಂದೆಡೆ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ತವರಿನಲ್ಲಿ ಅಕ್ಟೋಬರ್ 06ರಿಂದ ದಕ್ಷಿಣ ಆಫ್ರಿಕಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

Follow Us:
Download App:
  • android
  • ios