ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಶುಭ್‌ಮನ್ ಗಿಲ್, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಮತ್ತು ವರ್ಷಗಳ ಬಳಿಕ ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ.  

ಮುಂಬೈ: ಮುಂಬರುವ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ತಂಡ ಪ್ರಕಟವಾಗಿದ್ದು, ನಾಯಕ ಶುಭ್‌ಮನ್ ಗಿಲ್‌ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯ ವೇಳೆಯಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು 2024ರ ಅಕ್ಟೋಬರ್ ಬಳಿಕ ರಿಷಭ್ ಪಂತ್ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಭಾರತ ತಂಡ ಕೂಡಿಕೊಳ್ಳುವ ನಿರೀಕ್ಷೆಯಲ್ಲಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ.

ಕಮ್‌ಬ್ಯಾಕ್ ಮಾಡಿದ ಪ್ರಮುಖರು:

ನಾಯಕ ಶುಭ್‌ಮನ್ ಗಿಲ್, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಕತ್ತಿನ ನೋವಿಗೆ ಒಳಗಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿದಿದ್ದರು. ಇದಾದ ಬಳಿಕ ಏಕದಿನ ಸರಣಿಯಲ್ಲಿ ಗಿಲ್ ಬದಲಿಗೆ ರಾಹುಲ್ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಗಿಲ್ ಸಂಪೂರ್ಣ ಫಿಟ್ ಆಗಿದ್ದು, ನಾಯಕನಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಆಸ್ಟ್ರೇಲಿಯಾ ಎದುರಿನ ಮೂರನೇ ಏಕದಿನ ಪಂದ್ಯದ ವೇಳೆಯಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಾಯಗೊಂಡಿದ್ದ ಉಪನಾಯಕ ಶ್ರೇಯಸ್ ಅಯ್ಯರ್ ಕೂಡಾ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೂಡಾ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ರಿಷಭ್ ಪಂತ್ 2024ರ ಅಕ್ಟೋಬರ್‌ನಲ್ಲಿ ಕೊನೆಯ ಬಾರಿಗೆ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ ಮತ್ತೊಮ್ಮೆ ಪಂತ್ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಮಿ-ಇಶಾನ್‌ ಕಿಶನ್‌ಗೆ ನಿರಾಸೆ:

ಇನ್ನು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿತ್ತು. ಆದರೆ ಶಮಿಯನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಕಡೆಗಣಿಸಿದೆ. ಇನ್ನು ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ಇಶಾನ್ ಕಿಶನ್ ಅವರೂ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಇನ್ನುಳಿದಂತೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ತಂಡ ಕೂಡಿಕೊಂಡಿದ್ದಾರೆ.ಇದರ ಜತೆಗೆ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆದಿದ್ದಾರೆ. ಬ್ಯಾಕ್‌ಅಪ್ ಓಪನ್ನರ್ ಆಗಿ ಯಶಸ್ವಿ ಜೈಸ್ವಾಲ್ ಸ್ಥಾನ ಉಳಿಸಿಕೊಂಡಿದ್ದಾರೆ.

Scroll to load tweet…

ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ:

ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ದ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.