ಡಿಸೆಂಬರ್ 09 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ.  

ಮುಂಬೈ: ಇದೇ ಡಿಸೆಂಬರ್ 09ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಒಂದು ಕಂಡೀಷನ್ ಮೇರೆಗೆ ಶುಭ್‌ಮನ್ ಗಿಲ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

Add Asianetnews Kannada as a Preferred SourcegooglePreferred

ಹೌದು, ಟಿ20 ಸರಣಿಗೂ ಮುನ್ನ ಶುಭ್‌ಮನ್ ಗಿಲ್, ಬಿಸಿಸಿಐ ಮೆಡಿಕಲ್ ತಂಡದಿಂದ ಫಿಟ್ನೆಸ್ ಟೆಸ್ಟ್ ಕ್ಲಿಯರ್ ಮಾಡಿದರಷ್ಟೇ ಗಿಲ್ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಶುಭ್‌ಮನ್ ಗಿಲ್, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದಾದ ಬಳಿಕ ಗಿಲ್ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ.

ಕಮ್‌ಬ್ಯಾಕ್ ಮಾಡಿದ ಬುಮ್ರಾ-ಪಾಂಡ್ಯ

ಇನ್ನು ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಆಟಗಾರರು ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿರಲಿಲ್ಲ. ಅದರಲ್ಲೂ 30 ವರ್ಷದ ಹಾರ್ದಿಕ್ ಪಾಂಡ್ಯ ಸೆಪ್ಟೆಂಬರ್ 26ರಂದು ಏಷ್ಯಾಕಪ್ ಟೂರ್ನಿಯ ಶ್ರೀಲಂಕಾ ಎದುರಿನ ಸೂಪರ್ ಹಂತದ ಪಂದ್ಯದ ವೇಳೆಯಲ್ಲಿ ಗಾಯಗೊಂಡು ಭಾರತ ತಂಡದಿಂದ ಹೊರಬಿದ್ದಿದ್ದರು. ಇತ್ತೀಚೆಗಷ್ಟೇ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಪಂಜಾಬ್ ವಿರುದ್ದ ಬರೋಡಾ ಪರ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಅಜೇಯ 77 ರನ್ ಸಿಡಿಸುವ ಮೂಲಕ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ್ದರು.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ಡಿಸೆಂಬರ್ 09ರಿಂದ ಕಟಕ್‌ನಲ್ಲಿ ಆರಂಭವಾಗಲಿದ್ದು, ಇದಾದ ಬಳಿಕ ಮುಲ್ಲಾನ್‌ಪುರ್, ಧರ್ಮಶಾಲಾ, ಲಖನೌ ಹಾಗೂ ಅಹಮದಾಬಾದ್‌ನಲ್ಲಿ ನಡೆಯಲಿದೆ.

Scroll to load tweet…

ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೆ ಭಾರತ ತಂಡ ಹೀಗಿದೆ ನೋಡಿ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.