ಆಫ್ಘಾನಿಸ್ತಾನ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದ್ದು, ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ. ಈ ಹಿನ್ನಡೆಯ ನಡುವೆಯೂ, ನಾಯಕ ಶುಭ್‌ಮನ್ ಗಿಲ್ ಮತ್ತು ಇಶಾನ್ ಕಿಶನ್ ಭರ್ಜರಿ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.

ಲಖನೌ: ಭಾರತ ತಂಡ ಹಾಗೂ ಗಾಯದ ಸಮಸ್ಯೆಗೆ ಬಿಡಿಸಲಾರದ ನಂಟಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಆರಂಭಕ್ಕೂ ಮೊದಲೇ ಭಾರತ ತಂಡದ ರನ್ ಮಷೀನ್ ವಿರಾಟ್ ಕೊಹ್ಲಿ, ಅನುಭವಿ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಹೊರಬಿದ್ದಿದ್ದರು. ಇದೀಗ ಆಫ್ಘಾನಿಸ್ತಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಪರ ಕಣಕ್ಕಿಳಿದಿದ್ದ ಮತ್ತೋರ್ವ ಸ್ಟಾರ್ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಆಫ್ಘಾನಿಸ್ತಾನ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ:

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಫ್ಘಾನಿಸ್ತಾನ ಎದುರು ಎರಡನೇ ಏಕದಿನ ಪಂದ್ಯವನ್ನಾಡಲು ಕಣಕ್ಕಿಳಿದ ಟೀಂ ಇಂಡಿಯಾ ನಾಯಕ, ಇಂದಿನ ಪಂದ್ಯದಲ್ಲಿ ತಂಡದಲ್ಲಿ ಮೂರು ಬದಲಾವಣೆಗಳಾಗಿವೆ ಎಂದು ತಿಳಿಸಿದರು. ಇದನ್ನು ಕೇಳಿ ಎಲ್ಲರೂ ಅಚ್ಚರಿಗೊಳಗಾದರು. ಟಾಸ್ ಬಳಿಕ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್(ಈಗ ಎಕ್ಸ್‌) ಖಾತೆಯಲ್ಲಿ ಗಾಯದ ಸಮಸ್ಯೆಯಿಂದಾಗಿ ನಿತೀಶ್ ಕುಮಾರ್ ರೆಡ್ಡಿ ಎರಡನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ತಿಳಿಸಿದೆ.

ಬಿಸಿಸಿಐ ವೈದ್ಯಕೀಯ ಸಿಬ್ಬಂದಿ, ನಿತೀಶ್ ಕುಮಾರ್ ರೆಡ್ಡಿ ಅವರ ಗಾಯದ ಮೇಲೆ ಕಣ್ಣಿಟ್ಟಿದ್ದು, ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೂರನೇ ಪಂದ್ಯಕ್ಕೂ ಮುನ್ನ ಸಂಪೂರ್ಣ ಫಿಟ್ ಆಗುತ್ತಾರೋ ಅಥವಾ ಇಲ್ಲವೇ ಎನ್ನುವುದು ಇನ್ನೂ ಖಚಿತವಾಗಿಲ್ಲ. ಮೊದಲಿಗೆ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದೀಗ ನಿತೀಶ್ ಕುಮಾರ್ ರೆಡ್ಡಿ ಕೂಡಾ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದು, ಕ್ಯಾಪ್ಟನ್ ಗಿಲ್ ಹಾಗೂ ಕೋಚ್ ಗೌತಮ್ ಗಂಭೀರ್ ತಲೆನೋವು ಹೆಚ್ಚುವಂತೆ ಮಾಡಿದೆ.

Scroll to load tweet…

ಗಿಲ್-ಇಶಾನ್ ಕಿಶನ್ ಶತಕ, ಬೃಹತ್ ಮೊತ್ತದತ್ತ ಭಾರತ:

ಇನ್ನು ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತದ ಹೊರತಾಗಿಯೂ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಭಾರತ ತಂಡವು ಆರಂಭದಲ್ಲೇ ಯಶಸ್ವಿ ಜೈಸ್ವಾಲ್(4) ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ರೋಹಿತ್ ಶರ್ಮಾ 48 ರನ್ ಬಾರಿಸಿ ರಶೀದ್ ಖಾನ್‌ಗೆ ವಿಕೆಟ್ ಒಪ್ಪಿಸಿದರು.

Scroll to load tweet…

Scroll to load tweet…

ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ಶುಭ್‌ಮನ್ ಗಿಲ್ ಹಾಗೂ ಇಶಾನ್ ಕಿಶನ್ ಸ್ಪೋಟಕ ಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಸದ್ಯ 34 ಓವರ್ ಅಂತ್ಯದ ವೇಳೆಗೆ ಭಾರತ ತಂಡವು ಕೇವಲ ಎರಡು ವಿಕೆಟ್ ನಷ್ಟಕ್ಕೆ 276 ರನ್ ಬಾರಿಸಿದೆ. ನಾಯಕ ಶುಭ್‌ಮನ್ ಗಿಲ್ ಅಜೇಯ 113 ರನ್ ಬಾರಿಸಿದ್ದರೇ, ಇಶಾನ್ ಕಿಶನ್ ಅಜೇಯ 104 ರನ್ ಸಿಡಿಸಿದ್ದಾರೆ.