ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಮುಂಬರುವ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶ್ರೇಯಸ್ ಅಯ್ಯರ್ ನೂತನ ನಾಯಕರಾಗಿ ಆಯ್ಕೆಯಾಗಿದ್ದರೆ, ವಿಶ್ವಕಪ್ ಗೆದ್ದುಕೊಟ್ಟಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಐಪಿಎಲ್ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಚೊಚ್ಚಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬೆಂಗಳೂರು: ಇದೇ ಜೂನ್ 26 ಹಾಗೂ 28ರಂದು ನಡೆಯಲಿರುವ ಐರ್ಲೆಂಡ್ ಎದುರಿನ ಎರಡು ಪಂದ್ಯಗಳ ಟಿ20 ಸರಣಿ ಹಾಗೂ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಶ್ರೇಯಸ್ ಅಯ್ಯರ್ಗೆ ನಾಯಕತ್ವ ಪಟ್ಟ ಕಟ್ಟಲಾಗಿದೆ. 2026ರ ಐಸಿಸಿ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕಿಕೌಟ್ ಮಾಡಲಾಗಿದೆ. ಇನ್ನು ಐಪಿಎಲ್ನಲ್ಲಿ ಆರ್ಭಟಿಸಿದ್ದ ವೈಭವ್ ಸೂರ್ಯವಂಶಿಗೆ ಇದೇ ಮೊದಲ ಬಾರಿಗೆ ಭಾರತ ಸೀನಿಯರ್ಸ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನೂತನ ನಾಯಕ:
ಸೂರ್ಯಕುಮಾರ್ ಯಾದವ್ ಕಳೆದೊಂದುವರೆ ವರ್ಷದಿಂದ ನೀರಸ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ನಾಯಕನಾಗಿ ಯಶಸ್ವಿಯಾಗಿದ್ದರೂ ಸೂರ್ಯ ಫಾರ್ಮ್ ಸಮಸ್ಯೆ ಎದುರಿಸುತ್ತಾ ಬಂದಿದ್ದರು. ಹೀಗಾಗಿ ಭವಿಷ್ಯದ ಭಾರತ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಇದೀಗ ಮುಂಬೈ ಮೂಲದ ಶ್ರೇಯಸ್ ಅಯ್ಯರ್ಗೆ ಭಾರತ ಟಿ20 ತಂಡದ ನಾಯಕತ್ವ ಪಟ್ಟ ಕಟ್ಟಲಾಗಿದೆ. ಶ್ರೇಯಸ್ ಅಯ್ಯರ್ ಐಪಿಎಲ್ನಲ್ಲಿ ಈಗಾಗಲೇ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದು, ಕಳೆದ ಸೀಸನ್ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್ಗೆ ಕೊಂಡೊಯ್ದಿದ್ದರು. ಆದರೆ 19ನೇ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಪ್ಲೇ ಆಫ್ಗೇರಲು ವಿಫಲವಾಗಿತ್ತು.
ತಿಲಕ್ ವರ್ಮಾಗೆ ಉಪನಾಯಕ ಪಟ್ಟ:
ಇನ್ನು ಯುವ ಕ್ರಿಕೆಟಿಗ ತಿಲಕ್ ವರ್ಮಾ, ಇತ್ತೀಚಿಗಿನ ವರ್ಷಗಳಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದು, ಅವರಿಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ತಿಲಕ್ ವರ್ಮಾ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ನ ನಂಬಿಗಸ್ಥ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.
ವೈಭವ್ ಸೂರ್ಯವಂಶಿಗೆ ಮಣೆ:
ಇನ್ನು ಐಪಿಎಲ್ನಲ್ಲಿ ವಿಸ್ಪೋಟಕ ಬ್ಯಾಟಿಂಗ್ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದ ವೈಭವ್ ಸೂರ್ಯವಂಶಿ, ಇದೇ ಮೊದಲ ಬಾರಿಗೆ ಭಾರತ ಸೀನಿಯರ್ಸ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒಂದುವೇಳೆ ವೈಭವ್ ಐರ್ಲೆಂಡ್ ಎದುರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರೆ, ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಇನ್ನು ಇದೇ ವೇಳೆ ಐಪಿಎಲ್ನಲ್ಲಿ ಮಿಂಚಿದ ಪ್ರಿನ್ಸ್ ಯಾದವ್ಗೂ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಭಾರತ ತಂಡ ಹೀಗಿದೆ:
ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ತಿಲಕ್ ವರ್ಮಾ(ಉಪನಾಯಕ),ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.


