ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಖಡಕ್ ವಾರ್ನಿಂಗ್ ನೀಡಿದ BCCI..! ಯಾಕೆ ಏನಾಯ್ತು?
* ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ
* ಜುಲೈ 01ರಿಂದ ಎಡ್ಜ್ಬಾಸ್ಟನ್ನಲ್ಲಿ ಆರಂಭವಾಗಲಿದೆ ಏಕೈಕ ಟೆಸ್ಟ್
* ಇಂಗ್ಲೆಂಡ್ ಎದುರಿನ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ, ರೋಹಿತ್ಗೆ ಬಿಸಿಸಿಐ ಎಚ್ಚರಿಕೆ
ಲಂಡನ್(ಜೂ.22): ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ಗೆ ತೆರಳಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಕೋವಿಡ್ ನಿಯಮಗಳನ್ನು ಪಾಲಿಸದೆ ಸುತ್ತಾಡುತ್ತಿದ್ದು, ಅಭಿಮಾನಿಗಳ ಜೊತೆಗಿನ ಫೋಟೋಗಳೂ ವೈರಲ್ ಆಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಟಗಾರರಿಗೆ ಎಚ್ಚರಿಕೆ ನೀಡಿದ್ದು, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ ಎಂದು ವರದಿಯಾಗಿದೆ.
ಈಗಾಗಲೇ ರವಿಚಂದ್ರನ್ ಅಶ್ವಿನ್ (Ravichandran Ashwin) ಕೋವಿಡ್ನಿಂದಾಗಿ ಇಂಗ್ಲೆಂಡ್ಗೆ ತೆರಳದೆ ಭಾರತದಲ್ಲೇ ಉಳಿದುಕೊಂಡಿದ್ದಾರೆ. ತಂಡದ ಪ್ರಮುಖ ಆಟಗಾರರಾಗಿರುವ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ (Virat Kohli) ಕೂಡಾ ತಮ್ಮ ನಿರ್ಲಕ್ಷ್ಯದಿಂದ ಸೋಂಕಿಗೆ ತುತ್ತಾದರೆ ಪಂದ್ಯದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಯಾವುದೇ ಆಟಗಾರ ಹೊರಗಡೆ ಹೋಗುವಾಗ ಮಾಸ್ಕ್ ಧರಿಸಿ, ಎಲ್ಲಾ ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ಬಿಸಿಸಿಐ ಎಚ್ಚರಿಕೆ ನೀಡಿದೆ ಎಂದು ಹೇಳಲಾಗುತ್ತಿದೆ.
ಇಂಗ್ಲೆಂಡ್ನಲ್ಲಿ ಕೋವಿಡ್ ಭೀತಿ ಕಡಿಮೆಯಾಗಿದೆ. ಹೀಗಿದ್ದೂ ಆಟಗಾರರು ಕೋವಿಡ್ ಕುರಿತಂತೆ ಕೊಂಚ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಈ ಬಗ್ಗೆ ಇಡೀ ತಂಡವೇ ಕೊಂಚ ಎಚ್ಚರಿಕೆಯಿಂದ ಇರವಂತೆ ನಾವು ಸೂಚಿಸುತ್ತಿದ್ದೇವೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ತಿಳಿಸಿದ್ದಾರೆ.
ಸದ್ಯ ಇಂಗ್ಲೆಂಡ್ನಲ್ಲಿ ಪ್ರತಿನಿತ್ಯ 10,000ಕ್ಕೂ ಅಧಿಕ ಕೋವಿಡ್ 19 ಪ್ರಕರಣಗಳು ಪತ್ತೆಯಾಗುತ್ತಿವೆ. ಆಟಗಾರರ ಆರೋಗ್ಯದ ಹಿತಾದೃಷ್ಟಿಯ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ (COVID Test) ವೇಳೆ ಪಾಸಿಟವ್ ಬಂದ ಆಟಗಾರರನ್ನು 5 ದಿನಗಳ ಕಾಲ ಐಸೋಲೇಷನ್ನಲ್ಲಿಡಲಾಗುವುದು. ಇನ್ನು ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5ನೇ ಟೆಸ್ಟ್ ಪಂದ್ಯ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ, ಈ ವೇಳೆ ಆಟಗಾರರಿಗೆ ಸೋಂಕು ತಗುಲಿದರೇ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಮಹತ್ವದ ಟೆಸ್ಟ್ ಪಂದ್ಯದಿಂದ ಹೊರಬೀಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಏಕೈಕ ಟೆಸ್ಟ್ ಪಂದ್ಯವು ಮುಂಬರುವ ಜುಲೈ 01ರಿಂದ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ.
ಸದ್ಯ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ (Team India), ಇಂಗ್ಲೆಂಡ್ಗೆ ಬಂದಿಳಿದ್ದು, ಲೀಸೆಸ್ಟರ್ಶೈರ್ ಕೌಂಟಿ ಗ್ರೌಂಡ್ನಲ್ಲಿ ಜೂನ್ 24ರಿಂದ 4 ದಿನಗಳ ಅಭ್ಯಾಸ ಪಂದ್ಯವನ್ನಾಡಲಿದೆ. ಈ ಅಭ್ಯಾಸ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಹೊರಗುಳಿಯಲಿದ್ದಾರೆ. ಈಗಾಗಲೇ ಬಹುತೇಕ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಜೂನ್ 16ರಂದೇ ಇಂಗ್ಲೆಂಡ್ಗೆ ಬಂದಿಳಿದಿದ್ದಾರೆ. ಇನ್ನು ನಾಯಕ ರೋಹಿತ್ ಶರ್ಮಾ ಒಂದು ದಿನ ತಡವಾಗಿ ಇಂಗ್ಲೆಂಡ್ ತಲುಪಿದ್ದಾರೆ. ಇನ್ನುಳಿದಂತೆ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯಲ್ಲಿ ಪಾಲ್ಗೊಂಡಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಹಾಗೂ ಶ್ರೇಯಸ್ ಅಯ್ಯರ್ (Shreyas Iyer) ಜೂನ್ 19ರಂದು ಬೆಂಗಳೂರಿನಲ್ಲಿ ಮಳೆಯಿಂದ ರದ್ದಾದ ಪಂದ್ಯವನ್ನು ಮುಗಿಸಿ ಇಂಗ್ಲೆಂಡ್ಗೆ ಬಂದಿಳಿದ್ದಾರೆ.
Team India ಸ್ಟಾರ್ ಕ್ರಿಕೆಟಿಗನಿಗೆ ಕೋವಿಡ್ ದೃಢ, ಇಂಗ್ಲೆಂಡ್ ಪ್ರಯಾಣ ಕೊಂಚ ತಡ..!
ಕಳೆದ ವರ್ಷ ಇದೇ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಕೋಚ್ ರವಿಶಾಸ್ತ್ರಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೇ ಕೋವಿಡ್ ಹಬ್ಬಿತ್ತು ಎಂದು ಹೇಳಲಾಗುತ್ತಿತ್ತು. ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಭ್ ಪಂತ್, ಕೆ ಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ