ಟಿ20 ವಿಶ್ವಕಪ್ ದೃಷ್ಟಿಯಿಂದ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಗಾಯದಿಂದ ಚೇತರಿಸಿಕೊಂಡಿರುವ ನಾಯಕ ಶುಭಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಲಿದ್ದಾರೆ.

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಗಾಯದಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಲಿದ್ದಾರೆ. ಟಿ20 ವಿಶ್ವಕಪ್ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ, ಕೆಲಸದ ಹೊರೆ ಕಡಿಮೆ ಮಾಡಲು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ, ಟಿ20 ಸರಣಿಯಲ್ಲಿ ಈ ಇಬ್ಬರೂ ತಂಡ ಕೂಡಿಕೊಳ್ಳಲಿದ್ದಾರೆ. ಮುಂದಿನ ಭಾನುವಾರ ಅಥವಾ ಸೋಮವಾರ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ತಂಡವೇ ಕಿವೀಸ್ ವಿರುದ್ಧವೂ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. 2023ರ ವಿಶ್ವಕಪ್ ಫೈನಲ್ ನಂತರ ಬುಮ್ರಾ ಮತ್ತು ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಹಾರ್ದಿಕ್ ಏಕದಿನ ಪಂದ್ಯ ಆಡಿಲ್ಲ ಎನ್ನುವುದು ವಿಶೇಷ. ಟಿ20 ವಿಶ್ವಕಪ್ ತಂಡದಲ್ಲಿ ಇಬ್ಬರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳುವುದು ಬಿಸಿಸಿಐನ ಗುರಿಯಾಗಿದೆ. ಇದೇ ವೇಳೆ, ಹಾರ್ದಿಕ್ ಪಂದ್ಯದ ಅನುಭವಕ್ಕಾಗಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಪರ ಒಂದೆರಡು ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ.

ಗಾಯದಿಂದ ಚೇತರಿಸಿಕೊಂಡಿರುವ ನಾಯಕ ಶುಭಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವ ಸೂಚನೆ ಇದೆ. ಶ್ರೇಯಸ್ ಸದ್ಯ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಗಿಲ್ ಮತ್ತು ಶ್ರೇಯಸ್ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಭಾರತವನ್ನು ಮುನ್ನಡೆಸಿದ್ದರು. ವಿಜಯ್ ಹಜಾರೆ ಟ್ರೋಫಿಯಲ್ಲಿ ಶತಕ ಸಿಡಿಸಿ ಫಾರ್ಮ್ ಉಳಿಸಿಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡದಲ್ಲಿ ಮುಂದುವರಿಯಲಿದ್ದಾರೆ. ರಿಷಭ್ ಪಂತ್ ಬದಲಿಗೆ ಇಶಾನ್ ಕಿಶನ್ ತಂಡಕ್ಕೆ ಮರಳುವ ಸಾಧ್ಯತೆ ಹೆಚ್ಚಿದೆ. ವಿಜಯ್ ಹಜಾರೆ ಟ್ರೋಫಿಯ ಆರಂಭಿಕ ಮೂರು ಪಂದ್ಯಗಳಲ್ಲಿ ಪಂತ್ ದೊಡ್ಡ ಮೊತ್ತ ಸಿಡಿಸಲು ವಿಫಲವಾಗಿದ್ದರು. ಇದರಿಂದಾಗಿ ರಿಷಭ್ ಪಂತ್ ಅವರ ಪಾತ್ರ ಟೆಸ್ಟ್ ತಂಡಕ್ಕೆ ಮಾತ್ರ ಸೀಮಿತವಾಗಲಿದೆ.

ಕಿವೀಸ್‌ ಎದುರಿನ ಸರಣಿಯ ವೇಳಾಪಟ್ಟಿ

ಜನವರಿ 11 ರಂದು ವಡೋದರಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯ ನಡೆಯಲಿದೆ. ನಂತರ ರಾಜ್‌ಕೋಟ್ ಮತ್ತು ಇಂದೋರ್‌ನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ. ಜನವರಿ 21 ರಂದು ನಾಗ್ಪುರದಲ್ಲಿ ಟಿ20 ಸರಣಿ ಆರಂಭವಾಗಲಿದೆ. ರಾಯ್‌ಪುರ, ಗುವಾಹಟಿ, ವಿಶಾಖಪಟ್ಟಣಂ ಮತ್ತು ತಿರುವನಂತಪುರಂ ಇತರ ಟಿ20 ಪಂದ್ಯಗಳ ಸ್ಥಳಗಳಾಗಿವೆ. ಜನವರಿ 21 ರಂದು ತಿರುವನಂತಪುರದಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ.

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಈಗಿನಿಂದಲೇ ಬ್ಲೂ ಪ್ರಿಂಟ್‌:

ಇನ್ನು 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ, ಇದೀಗ 2027ರ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಮುಂಬರುವ ಎರಡು ವರ್ಷಗಳಲ್ಲಿ ಬಲಿಷ್ಠ ತಂಡವನ್ನು ಕಟ್ಟುವ ಗುರಿಯೊಂದಿಗೆ ಕಿವೀಸ್ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ರೆಡ್ ಹಾಟ್ ಫಾರ್ಮ್‌ನಲ್ಲಿದ್ದಾರೆ. ಇನ್ನು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಮಿಂಚಿರುವ ಮೊಹಮ್ಮದ್ ಶಮಿ ತಂಡಕ್ಕೆ ಕಮ್‌ಬ್ಯಾಕ್ ಮಾಡ್ತಾರಾ ಕಾದು ನೋಡಬೇಕಿದೆ. 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಶಮಿ ಇದುವರೆಗೂ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.