ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಸಮಾಧಾನಕರ ಸುದ್ದಿ ಲಭಿಸಿದೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಸರಣಿಗೆ ಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಸಮಾಧಾನಕರ ಸುದ್ದಿ ಲಭಿಸಿದೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಸರಣಿಗೆ ಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ಫಿಟ್ನೆಸ್ ಪರೀಕ್ಷೆಯಲ್ಲಿ ಯಶಸ್ವಿ

ಶ್ರೀಲಂಕಾ ಪ್ರವಾಸಕ್ಕಾಗಿ ಬಿಸಿಸಿಐ ಇತ್ತೀಚೆಗೆ ಪ್ರಕಟಿಸಿದ್ದ 15 ಸದಸ್ಯರ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅವರ ಹೆಸರನ್ನು ಸೇರಿಸಲಾಗಿತ್ತಾದರೂ, ಇಬ್ಬರ ಲಭ್ಯತೆಯು ಫಿಟ್ನೆಸ್ ಮೇಲೆ ಅವಲಂಬಿತವಾಗಿರುತ್ತದೆ ಎಂದು ತಿಳಿಸಲಾಗಿತ್ತು. ಪಿಟಿಐ ವರದಿಯ ಪ್ರಕಾರ, ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆದ ಎಲ್ಲಾ ಕಠಿಣ ಫಿಟ್ನೆಸ್ ಪರೀಕ್ಷೆಗಳಲ್ಲಿ ಬುಮ್ರಾ ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಮುಂಬರುವ ಸರಣಿಯಲ್ಲಿ ಆಡುವ ಹನ್ನೊಂದರ ಬಳಗದ ಆಯ್ಕೆಗೆ ಲಭ್ಯರಿರಲಿದ್ದಾರೆ.

ಬಿಸಿಸಿಐ ಮೂಲಗಳ ಮಾಹಿತಿ

ಬುಮ್ರಾ ಅವರ ಚೇತರಿಕೆಯ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ಜಸ್ಪ್ರೀತ್ ಬುಮ್ರಾ ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಎಲ್ಲಾ ಫಿಟ್ನೆಸ್ ಟೆಸ್ಟ್‌ಗಳನ್ನು ಪಾಸ್ ಮಾಡಿದ್ದಾರೆ. ಅವರು ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವುದರಿಂದ ಶ್ರೀಲಂಕಾ ವಿರುದ್ಧದ ಎರಡೂ ಪಂದ್ಯಗಳಿಗೆ ಲಭ್ಯವಿರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರಿಂದ ಗಾಲೆಯಲ್ಲಿ ಆರಂಭವಾಗಲಿದ್ದು, ಎರಡನೇ ಪಂದ್ಯ ಆಗಸ್ಟ್ 23 ರಿಂದ ಕೊಲಂಬೊದಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಭಾರತಕ್ಕೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ ಆವೃತ್ತಿಯಲ್ಲಿ ಭಾರತವು ಫೈನಲ್ ತಲುಪಲು ಉಳಿದಿರುವ 9 ಟೆಸ್ಟ್ ಪಂದ್ಯಗಳಲ್ಲಿ ಕನಿಷ್ಠ 7 ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಗೆ ಮುನ್ನ ಶ್ರೀಲಂಕಾ ವಿರುದ್ಧ 2-0 ಅಂತರದ ಜಯ ಸಾಧಿಸುವುದು ಭಾರತ ತಂಡದ ಪ್ರಮುಖ ಗುರಿಯಾಗಿದೆ.

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ

ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್ (ಫಿಟ್ನೆಸ್ ಆಧಾರದ ಮೇಲೆ ಲಭ್ಯತೆ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಸರನ್ಶ್ ಜೈನ್.