ಟಿ20 ವಿಶ್ವಕಪ್ ಟ್ರೋಫಿಯನ್ನು ಸೂರ್ಯಕುಮಾರ್ ಯಾದವ್ ಮತ್ತು ಜಯ್ ಶಾ ಅವರು ಅಹಮದಾಬಾದ್‌ನ ದೇವಸ್ಥಾನಕ್ಕೆ ಕೊಂಡೊಯ್ದಿದ್ದನ್ನು ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ತೀವ್ರವಾಗಿ ಖಂಡಿಸಿದ್ದಾರೆ. ಈ ಗೆಲುವು 140 ಕೋಟಿ ಭಾರತೀಯರಿಗೆ ಸೇರಿದ್ದು, ಇದನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದಿದ್ದಾರೆ.

ಅಹಮದಾಬಾದ್: ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ದೇವಸ್ಥಾನಕ್ಕೆ ಹೋಗಿದ್ದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಕೀರ್ತಿ ಆಜಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ವಿಶ್ವಕಪ್ ಟ್ರೋಫಿಯನ್ನು ಒಂದು ನಿರ್ದಿಷ್ಟ ಧರ್ಮದ ಗೆಲುವು ಎಂದು ಬಿಂಬಿಸಬಾರದು ಎಂದು ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಜಯ್ ಶಾ, ಗಂಭೀರ್ ಮೇಲೆ ಕಿಡಿಕಾರಿದ ಕೀರ್ತಿ ಆಜಾದ್

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು. ಇದಾದ ನಂತರ, ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್, ಬಿಸಿಸಿಐ ಮಾಜಿ ಕಾರ್ಯದರ್ಶಿ ಹಾಗೂ ಹಾಲಿ ಐಸಿಸಿ ಅಧ್ಯಕ್ಷ ಜಯ್ ಶಾ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರು ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇದರ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕೀರ್ತಿ ಆಜಾದ್ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Scroll to load tweet…

"1983ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ನಾವು ವಿಶ್ವಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ಆಟಗಾರರಿದ್ದರು. ನಾವು ಆ ಟ್ರೋಫಿಯನ್ನು ನಮ್ಮ ತಾಯ್ನಾಡು ಭಾರತಕ್ಕೆ ತಂದಿದ್ದೆವು. ಭಾರತ ಗೆದ್ದ ವಿಶ್ವಕಪ್ ಟ್ರೋಫಿಯನ್ನು ಯಾಕೆ ಹೀಗೆ ಒಂದು ಧರ್ಮಕ್ಕೆ ಸೀಮಿತಗೊಳಿಸುತ್ತಿದ್ದೀರಿ? ಈ ತಂಡ ಭಾರತವನ್ನು ಪ್ರತಿನಿಧಿಸುತ್ತದೆಯೇ ಹೊರತು, ಸೂರ್ಯಕುಮಾರ್ ಯಾದವ್ ಅಥವಾ ಜಯ್ ಶಾ ಅವರ ಕುಟುಂಬವನ್ನಲ್ಲ. ಮೊಹಮ್ಮದ್ ಸಿರಾಜ್ ಈ ಟ್ರೋಫಿಯನ್ನು ಮಸೀದಿಗೆ ತೆಗೆದುಕೊಂಡು ಹೋಗಿ ಪ್ರದರ್ಶಿಸಿಲ್ಲ. ವಿಶ್ವಕಪ್‌ನ ಸ್ಟಾರ್ ಆಟಗಾರನಾಗಿದ್ದರೂ ಸಂಜು ಸ್ಯಾಮ್ಸನ್ ಟ್ರೋಫಿಯೊಂದಿಗೆ ಯಾವುದೇ ಚರ್ಚ್‌ಗೆ ಹೋಗಿಲ್ಲ. ಈ ವಿಶ್ವಕಪ್ ಎಲ್ಲಾ ಧರ್ಮಗಳನ್ನು ನಂಬುವ 140 ಕೋಟಿ ಭಾರತೀಯರಿಗೆ ಸೇರಿದ್ದು. ಇದು ಕೇವಲ ಒಂದು ಧರ್ಮದ ಗೆಲುವಲ್ಲ" ಎಂದು ಕೀರ್ತಿ ಆಜಾದ್ 'ಎಕ್ಸ್' ನಲ್ಲಿ ಬರೆದುಕೊಂಡಿದ್ದಾರೆ.

Scroll to load tweet…

ವಿಶ್ವಕಪ್ ಗೆದ್ದ ಸಂಭ್ರಮದ ನಡುವೆ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದ್ದು ಸರಿಯಾದ ಕ್ರಮವಲ್ಲ. ಕ್ರೀಡಾ ಸಾಧನೆಗಳನ್ನು ಧಾರ್ಮಿಕ ಆಚರಣೆಗಳೊಂದಿಗೆ ಬೆರೆಸುವುದು ತಂಡದ ಜಾತ್ಯತೀತ ಸ್ವರೂಪಕ್ಕೆ ಧಕ್ಕೆ ತರುತ್ತದೆ ಎಂದು ಕೀರ್ತಿ ಆಜಾದ್ ಹೇಳಿದ್ದಾರೆ. ವಿಶ್ವಕಪ್‌ನಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿ ಕಿರೀಟ ಗೆದ್ದ ಖುಷಿಯ ನಡುವೆಯೇ ಎದ್ದಿರುವ ಈ ವಿವಾದ, ಅಭಿಮಾನಿಗಳ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಜಯ್‌ ಶಾಗೆ ಗಂಭೀರ್‌, ಸೂರ್ಯ ಧನ್ಯವಾದ!

ಅಹಮದಾಬಾದ್‌: ಭಾರತ ತಂಡ ಟಿ20 ವಿಶ್ವಕಪ್‌ ಗೆದ್ದ ಬಳಿಕ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌, ನಾಯಕ ಸೂರ್ಯಕುಮಾರ್‌ ಯಾದವ್‌, ಬಿಸಿಸಿಐ ಮಾಜಿ ಕಾರ್ಯದರ್ಶಿ, ಹಾಲಿ ಐಸಿಸಿ ಅಧ್ಯಕ್ಷ ಜಯ್‌ ಶಾ ಅವರಿಗೆ ಧನ್ಯವಾದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಂಭೀರ್‌, ‘ನಾನು ನಿರಂತರ ಟೀಕೆ ಎದುರಿಸಿದಾಗ, ನ್ಯೂಜಿಲೆಂಡ್‌ ಹಾಗೂ ದ.ಆಫ್ರಿಕಾ ವಿರುದ್ಧ ಸರಣಿಗಳನ್ನು ಸೋತಾಗ ನನಗೆ ಕರೆ ಮಾಡಿ ಧೈರ್ಯ ಹೇಳಿದ ಏಕೈಕ ವ್ಯಕ್ತಿ ಜಯ್‌ ಶಾ’ ಎಂದು ನೆನೆದರು. ಸೂರ್ಯಕುಮಾರ್‌ ಮಾತನಾಡಿ, ‘2024ರ ಗೆಲುವಿನ ಬಳಿಕ ರೋಹಿತ್‌ ನಿವೃತ್ತಿ ಘೋಷಿಸಿದಾಗ, ನನ್ನ ಮೇಲೆ ನಂಬಿಕೆಯಿಟ್ಟು ನಾಯಕತ್ವ ನೀಡಿದ್ದು ಜಯ್‌ ಭಾಯ್‌ (ಶಾ). ಅವರ ನಿರಂತರ ಬೆಂಬಲ ಹಾಗೂ ಮಾರ್ಗದರ್ಶನದಿಂದ ಇಂದು ನಾನು ವಿಶ್ವಕಪ್‌ ವಿಜೇತ ನಾಯಕ ಎನಿಸಿಕೊಂಡಿದ್ದೇನೆ’ ಎಂದರು.

ಭಾನುವಾರ ಗೆಲುವಿನ ಬಳಿಕ ಭಾರತ ತಂಡ ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿತು. ಈ ಮಧ್ಯೆ ಮಧ್ಯರಾತ್ರಿಯೇ ಜಯ್‌ ಶಾ, ಗಂಭೀರ್‌ ಹಾಗೂ ಸೂರ್ಯರನ್ನು ಕರೆದುಕೊಂಡು ಅಹಮದಾಬಾದ್‌ನಲ್ಲಿರುವ ಹನುಮಾನ್‌ ಮಂದಿರಕ್ಕೆ ಹೋಗಿ, ಟ್ರೋಫಿಯನ್ನು ದೇವರ ಮುಂದಿಟ್ಟು ವಿಶೇಷ ಪೂಜೆ ಸಲ್ಲಿಸಿದರು.